Article Image

ಸುಸ್ಥಿರ ಆರೋಗ್ಯಕ್ಕೆ ಸ್ವಚ್ಛ ಪರಿಸರ : ರಶ್ಮಿತಾ ಜೈನ್

Article Image

ಸುಸ್ಥಿರ ಆರೋಗ್ಯಕ್ಕೆ ಸ್ವಚ್ಛ ಪರಿಸರ : ರಶ್ಮಿತಾ ಜೈನ್

ಕಲ್ಲಬೆಟ್ಟು  : ನೆಲ, ಜಲ, ಪ್ರಕೃತಿಯ ಸಂರಕ್ಷಣೆ ನಮ್ಮ ಆದ್ಯತೆಯಾಗಬೇಕು. ಉಸಿರಾಡುವುದಕ್ಕೆ ಹಸಿರು ಪ್ರಕೃತಿಯ ಅವಶ್ಯಕತೆ ಇದೆ.  ಸದೃಢ ಆರೋಗ್ಯಕ್ಕೆ ಸ್ವಚ್ಛ ಪರಿಸರ ಅತ್ಯಗತ್ಯ. ಇಂದು ನಾವು ನೆಡುವ ಗಿಡಗಳು ಮುಂದಿನ ಪೀಳಿಗೆಗೆ ವರದಾನವಾಗಬೇಕು. ಯುವ ಪೀಳಿಗೆ ಕ್ರಿಯಾಶೀಲವಾದಷ್ಟು ಹಿರಿಯರಿಂದ ಪ್ರೋತ್ಸಾಹ ದೊರಕುತ್ತದೆ. ಪರಿಸರ ಸಂರಕ್ಷಣೆಯತ್ತ ವಿದ್ಯಾರ್ಥಿಗಳ ಮನೋಭಾವ ಬೆಳೆಸುವ ನಿಟ್ಟಿನಲ್ಲಿ, ಸಾಮಾಜಿಕ ಜಾಗೃತಿ ಮೂಡಿಸುವ ನೆಲೆಯಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆ “ಸಸ್ಯ ಶ್ಯಾಮಲಾ” ಎಂಬ ಶೀರ್ಷಿಕೆಯಡಿ ಮೂಡುಬಿದಿರೆ ಸುತ್ತಮುತ್ತ ಪರಿಸರದಲ್ಲಿ 1000 ಗಿಡಗಳನ್ನು  ನೆಟ್ಟು ಸಂರಕ್ಷಿಸುವ ಕಾರ್ಯಕ್ರಮವನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತಿದೆ. ಸಾಮಾಜಿಕ ಜಾಗೃತಿಯ ಘೋಷ ವಾಕ್ಯಗಳು ನಮ್ಮ ಮನಸ್ಸಿನಲ್ಲಿ ಉತ್ಸಾಹವನ್ನು ತುಂಬಿ ದೈನಂದಿನ ಬದುಕಿನಲ್ಲಿ ಹೃದಯಪೂರ್ವಕವಾಗಿ ಆಚರಣೆಗೆ ತಂದಾಗ ಅರ್ಥಪೂರ್ಣ ಕಾರ್ಯಕ್ರಮ ವಾಗುತ್ತದೆ. ಮತ್ತು ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಾಮಾಜಿಕ ಕರ್ತವ್ಯಗಳ ಬಗ್ಗೆ ಯೋಚಿಸುತ್ತ  ಕಾರ್ಯ ಪ್ರವೃತ್ತರಾದಾಗ ಸ್ವಚ್ಛ ಪರಿಸರ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಮೂಡುಬಿದಿರೆರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್’, ಜವಾಹರಲಾಲ್ ನೆಹರು ಪ್ರೌಢಶಾಲೆ, ಶಿರ್ತಾಡಿ, ಜೀವ ನಿಧಿ ಸೇವಾ ಬಳಗ ಆರ್.ಸಿ.ಸಿ. ಹಾಗೂ ರಾಷ್ಟ್ರ ಸೇವಿಕಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಸಸ್ಯ ಶ್ಯಾಮಲಾ ವನಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ನ ಅಧ್ಯಕ್ಷ ರೊ. ಹರೀಶ್ ಎಂ.ಕೆ. ಅವರು ಮಾತನಾಡುತ್ತ ಎಕ್ಸಲೆಂಟ್ ಸಂಸ್ಥೆಯು ಸಸ್ಯ ಶಾಮಲಾ ಯೋಜನೆಯ ಮೂಲಕ ಜನ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಈ ರೀತಿಯ ಸಾಮಾಜಿಕ ಚಟುವಟಿಕೆಗಳಿಗೆ ರೋಟರಿ ಸಂಸ್ಥೆ ಸದಾ ಬೆಂಬಲವನ್ನು ನೀಡುತ್ತದೆ ಎಂದು ತಿಳಿಸುತ್ತ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಯ ಆವರಣದಲ್ಲಿ ನೆಟ್ಟ ಗಿಡಗಳ ಸಂರಕ್ಷಣೆಯ ಹೊಣೆಗಾರಿಕೆಗೆ ವಿದ್ಯಾರ್ಥಿಗಳ ತಂಡವನ್ನು ರಚಿಸಿದರು. ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷೆ ಆಗ್ನೆಸ್ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಜನಾರ್ದನ ಸೇರಿಗಾರ್, ಜೀವ ನಿಧಿ ಸೇವಾ ಬಳಗ ಆರ್.ಸಿ.ಸಿ.ಯ ಅಧ್ಯಕ್ಷ ಶಶಿಧರ್ ದೇವಾಡಿಗ ಗೆಂದೊಟ್ಟು, ರಾಷ್ಟ್ರ ಸೇವಿಕಾ ಸಮಿತಿಯ ಅಧ್ಯಕ್ಷೆ ಮೂಕಾಂಬಿಕಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ. ಎಕ್ಸಲೆಂಟ್ ಸಂಸ್ಥೆಯ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಮಾಲತಿ ವಂದಿಸಿದರು. ಕಾರ್ಯಕ್ರಮದ ನಂತರ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಮತ್ತು ಶಿರ್ತಾಡಿ ಜವಾಹರಲಾಲ್ ನೆಹರೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಕ್ಸಲೆಂಟ್ ಸಂಸ್ಥೆ ಒದಗಿಸಿದ ವಿವಿಧ ತಳಿಯ ಗಿಡಗಳನ್ನು ಶಾಲೆಯ ನೆಟ್ಟು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಅಡಕೆ ಕೊಳೆರೋಗ ನಿರ್ವಹಣೆಗೆ ರೈತರಿಗೆ ಸಹಾಯಧನ

Article Image

ಅಡಕೆ ಕೊಳೆರೋಗ ನಿರ್ವಹಣೆಗೆ ರೈತರಿಗೆ ಸಹಾಯಧನ

ಮಂಗಳೂರು: ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಅಡಕೆ ಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟ ಗಾರಿಕೆ ಇಲಾಖೆಯ ಗಮನಕ್ಕೆ ಬಂದಿದೆ. ಅಡಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ, ಕೀಟ, ರೋಗ ನಿರ್ವಹಣೆ ಸಂಬಂಧ ಗೊಬ್ಬರ, ಸೂಕ್ಷ್ಮ ಪೋಷ ಕಾಂಶ, ಕೀಟನಾಶಕ, ಶಿಲೀಂಧ್ರನಾಶಕಗಳನ್ನು ಖರೀದಿ ಸುವ ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ಸಹಾಯಧನ ಸೌಲಭ್ಯ ಲಭ್ಯವಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ದ.ಕ. ತೋಟಗಾರಿಕೆ ಉಪ ನಿರ್ದೇಶಕ ಮಂಜುನಾಥ ಡಿ. ತಿಳಿಸಿದ್ದಾರೆ.

ಮೂಡುಬಿದರೆ : ವಿಚಾರ ವಿನಿಮಯ ಕಾರ್ಯಕ್ರಮ

Article Image

ಮೂಡುಬಿದರೆ : ವಿಚಾರ ವಿನಿಮಯ ಕಾರ್ಯಕ್ರಮ

ಮಂಗಳೂರು ತೋಟಗಾರಿಕಾ ಇಲಾಖೆ, ಮೂಡುಬಿದರೆ ಕೃಷಿ ವಿಚಾರ ವಿನಿಮಯ ಕೇಂದ್ರ ಮತ್ತು ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಜಂಟಿ ಆಶ್ರಯದಲ್ಲಿ ಜುಲೈ 19ರಂದು ಸಮಾಜ ಮಂದಿರದಲ್ಲಿ ಅನಾನಸು ಮತ್ತು ಡ್ರ್ಯಾಗನ್, ಹಣ್ಣುಗಳ ಉಪ ಉತ್ಪನ್ನ ಘಟಕ ಸ್ಥಾಪಿಸುವರೆ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಡಿ ಮಾತನಾಡಿ, ಪ್ರಾಣಿ ಪಕ್ಷಿಗಳು ಮನುಷ್ಯನಿಗಿಂತ ನೂರು ಪಟ್ಟು ಹೆಚ್ಚು ಸೂಕ್ಷ್ಮ ಸಂವೇದಿಗಳಾಗಿದ್ದು ಯಾವುದೇ ಪರಿಸರದ ವಿನಾಶದ ಬಗ್ಗೆ ಮೊದಲೇ ತಿಳಿದಿರುತ್ತವೆ. ತೋಟಗಾರಿಕಾ ಬೆಳೆಗಳನ್ನು ಬೆಳೆಯುವಾಗ ಆಯಾ ಮಣ್ಣಿನ ಗುಣಮಟ್ಟ, ಪೂರಕಾಂಶಗಳನ್ನು ಸಮಗ್ರವಾಗಿ ತಿಳಿದುಕೊಂಡು ಮುಂದುವರಿಯಬೇಕಾಗುತ್ತದೆ ಎಂದು ತಿಳಿಸಿ ತೋಟಗಾರಿಕಾ ಬೆಳೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಸಂವಾದದಲ್ಲಿ ಪ್ರಸ್ತುತಪಡಿಸಿದರು. ಹಣ್ಣಿನ ಯಾವುದೇ ಉಪ ಉತ್ಪನ್ನಗಳಾದ ಡ್ರೈ ಹಣ್ಣು, ಜ್ಯೂಸ್, ಇತ್ಯಾದಿ ತಯಾರಿಸುವಾಗ ಬಹಳ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಹಾಗೂ ಶೇಖರಣಾ ಜಾಗರೂಕತೆಗಳ ಬಗ್ಗೆ ಮೊದಲೇ ತಿಳುವಳಿಕೆಯನ್ನು ಹೊಂದಿರಬೇಕಾಗುತ್ತದೆ ಎಂದು ವಿವೇಕ್ ಸೋನ್ಸ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಉಪ್ಪಿನಂಗಡಿಯ ಜೆರೋಮ್ ಸಂವಾದದಲ್ಲಿ ಭಾಗವಹಿಸಿ ಸ್ಥಾಪಿಸುವ ಸಂಘಕ್ಕೇ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ನೀಡಿ ಸಹಕಾರಿ ಸಂಘದ ಏಳಿಗೆಗೆ ಒಂದಾಗಿರಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್ ಮಾತನಾಡಿ ಅಮುಲ್ ನಂತಹ ಸಂಸ್ಕರಣ ಘಟಕವನ್ನು ಅನಾನಸ್ಸು ಹಣ್ಣಿಗಾಗಿ ಸ್ಥಾಪಿಸಿ ಮೂಡುಬಿದಿರೆಯ ಬ್ರ್ಯಾಂಡ್ ಉತ್ಪನ್ನವನ್ನು ಜಗತ್ತಿಗೆ ಪರಿಚಯಿಸುವ ಎಂದು ಕರೆಕೊಟ್ಟರು. ವೇದಿಕೆಯಲ್ಲಿ ರಾಜವರ್ಮ ಹಾಜರಿದ್ದರು. ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಅಭಯ್ ಕುಮಾರ್ ಸ್ವಾಗತಿಸಿದರು. ಜಿನೇಂದ್ರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ದೀಪಕ್ ವಂದಿಸಿದರು.

ಸಾವಯವ ಕೃಷಿಯಿಂದ ನಿರುದ್ಯೋಗಕ್ಕೆ ಪರಿಹಾರ: ಕೆ. ಜಗದೀಶ

Article Image

ಸಾವಯವ ಕೃಷಿಯಿಂದ ನಿರುದ್ಯೋಗಕ್ಕೆ ಪರಿಹಾರ: ಕೆ. ಜಗದೀಶ

ಸಾವಯವ ಕೃಷಿಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ನಿರುದ್ಯೋಗಕ್ಕೆ ಪರಿಹಾರ ನೀಡಬಹುದಾಗಿದೆ ಎಂದು ಬೆಂಗಳೂರಿನ ಸ್ವದೇಶಿ ಜಾಗರಣ ಮಂಚ್ ವೇದಿಕೆಯ ಹಿರಿಯ ಭಾಷಣಕಾರ ಕೆ. ಜಗದೀಶ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಉದ್ಯಮಶೀಲತೆ ಅಭಿವೃದ್ಧಿ ಕೋಶದ ವತಿಯಿಂದ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ‘ಸ್ವೋದ್ಯೋಗ ಹಾಗೂ ಸ್ವದೇಶಿ ಚಿಂತನೆಯ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ’ ಕುರಿತು ಉಪನ್ಯಾಸ ನೀಡಿದರು. ಭಾರತವು ಆರ್ಥಿಕವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದರೂ ಉದ್ಯೋಗ ಕೊರತೆ ಹಾಗೆಯೇ ಇದೆ. ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಹಸು, ಜಾನುವಾರಗಳನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅಧಿಕ ಉತ್ಪಾದನೆ ಮಾಡಬಹುದು ಎಂದು ಅವರು ಹೇಳಿದರು. ಪ್ರತಿವರ್ಷ 1 ಕೋಟಿಗಿಂತಲೂ ಅಧಿಕ ಪದವೀಧರರು ಹೊರಬರುತ್ತಿದ್ದು, ಅವರಿಗೆ 10 ಲಕ್ಷದಷ್ಟು ಮಾತ್ರ ಉದ್ಯೋಗ ಸೃಷ್ಟಿಯಾಗುತ್ತಿದೆ. ಕೊರೋನ ನಂತರ ಪರಿಸ್ಥಿತಿ ಹದಗೆಟ್ಟಿದ್ದು, ಉದ್ಯೋಗ ಸೃಷ್ಟಿ ನಮ್ಮ ಮೊದಲ ಆದ್ಯತೆಯಾಗಿರಬೇಕು ಎಂದರು. ಭಾರತದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂ.ಎಸ್.ಎಂ.ಇ.)ಗಳಿಗೆ 26 ಶೇ.ದಷ್ಟು ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶ್ವದಲ್ಲಿ 8 ಸಾವಿರ ಕೋಟಿಯಷ್ಟು ಉದ್ಯಮಾವಕಾಶ ಇದೆ. ಸ್ವ ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ವ್ಯಾಪಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ಯುವಕರು ಉದ್ಯೋಗ ಸೃಷ್ಟಿ ಮಾಡಬೇಕು. ಪದವಿ ಜೊತೆ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರು, ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್. ಸ್ವಾಗತಿಸಿ, ಸುಮನ್ ಜೈನ್ ವಂದಿಸಿದರು.

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Article Image

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು. ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು. ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲ್ಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

ಧಾರವಾಡ: ವಿಶ್ವ ಪರಿಸರ ದಿನಾಚರಣೆ

Article Image

ಧಾರವಾಡ: ವಿಶ್ವ ಪರಿಸರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ಫಿಸಿಯೋಥೆರಪಿ ಮತ್ತು ನರ್ಸಿಂಗ್ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ಕಾಲೇಜಿನಲ್ಲಿ "ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡುವುದು” ಎಂಬ ಧ್ಯೆಯೆಯೊಂದಿಗೆ “ವಿಶ್ವ ಪರಿಸರ ದಿನ”ವನ್ನು ಆಚರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ವೈದ್ಯಕೀಯ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಪರಿಸರ ತಜ್ಞರಾದ ಡಾ. ಮೂಕ್ಕಯ್ಯಸ್ವಾಮಿ ವಿ. ಕಳಸೂರಮಠ ಅವರು ಮುಖ್ಯ ಅತಿಥಿಯಾಗಿದ್ದರು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳು ಸಸಿಗಳನ್ನು ನೆಟ್ಟು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ತಮ್ಮ ಸ್ವಂತ ಪ್ರಯೋಜನಕ್ಕಾಗಿ ಪರಿಸರವನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಪ್ರಕೃತಿ ದೇವರ ಕೊಡುಗೆ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ಲಾಸ್ಟಿಕ್ ಬಳಕೆಯನ್ನು ಕ್ರಮೇಣ ಕಡಿಮೆ ಮಾಡಿ ಮತ್ತು ಬಟ್ಟೆ, ಕಾಗದದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು. ನಾವು ಮೊದಲು ನಮ್ಮ ಮನೆಯ ಪರಿಸರವನ್ನು ಹಸಿರು ಮತ್ತು ಸ್ವಚ್ಛವಾಗಿಡಬೇಕು ಪ್ರಕೃತಿ ನಮ್ಮ ಜೀವನದ ಅಂತರ್ಗತ ಭಾಗವಾಗಿದೆ ಮತ್ತು ಪ್ರಕೃತಿಯು ಅನೇಕ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಿದರು. ಡಾ. ನಿರಂಜನ್ ಕುಮಾರ್ ಅವರು ಡಾ. ಕಳಸೂರಮಠ ಅವರನ್ನು ಸನ್ಮಾನಿಸಿದರು. ಡಾ. ಬಲರಾಮ್ ನಾಯಕ್, ಡಾ. (ಕರ್ನಲ್) ಯು.ಎಸ್. ದಿನೇಶ್, ಡಾ. ಸಂಜಯ್ ಪರ್ಮಾರ್, ಡಾ. ಪ್ರಸನ್ನ ದೇಶಪಾಂಡೆ, ಡಾ. ಕೆ. ಸತ್ಯಮೂರ್ತಿ, ಭೌತಚಿಕಿತ್ಸೆಯ ಮತ್ತು ನರ್ಸಿಂಗ್ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಮಲ್ಲಿಕಾರ್ಜುನ್ ಪಿ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಫಿಸಿಯೋಥೆರಪಿ ಕಾಲೇಜಿನ ಸಂಯೋಜರಾದ ಡಾ. ಸಂಗೀತಾ ಅಪ್ಪಣ್ಣವರ್ ವಂದನಾರ್ಪಣೆ ಸಲ್ಲಿಸಿದರು. ಎಸ್.ಡಿ.ಎಂ. ಜೈವಿಕ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸತ್ತೂರಿನ ಆಶ್ರಯ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಸ್ವಚ್ಛತೆಯ ಬಗ್ಗೆ ಜಾಗೃತಿ ನೀಡಿದರು. ಡಾ. ಅಜಯ ಕುಮಾರ್ ಓಲಿ, ಪ್ರೋ. ಕ್ಲೇಮೆಂಟ್ ಚೆಲ್ಲಿ, ಪ್ರದೀಪ ಶೆಟ್ಟಿ, ಗುರುಪ್ರಸಾದ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಡಾ. ರೇಣುಕಾರಾಧ್ಯ ಮಠ ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಫಿಸಿಯೋಥೆರಪಿ - ನರ್ಸಿಂಗ್ ವಿದ್ಯಾರ್ಥಿಗಳಿಂದ ಪರಿಸರ ರಕ್ಷಣೆಯ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು.

ನೀರು ಉಳಿಸಿ: ಕಾರ್ಯಕ್ರಮದ ವಾರ್ಷಿಕ ವರದಿ ಬಿಡುಗಡೆ

Article Image

ನೀರು ಉಳಿಸಿ: ಕಾರ್ಯಕ್ರಮದ ವಾರ್ಷಿಕ ವರದಿ ಬಿಡುಗಡೆ

ಉಜಿರೆ: ಯುನಿಸೆಫ್ ಹಮ್ಮಿಕೊಂಡಿರುವ “ನೀರು ಉಳಿಸಿ” ಅಭಿಯಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೀರು ಉಳಿಸಿ ಕಾರ್ಯಕ್ರಮದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜಲಸಂರಕ್ಷಣೆ ಬಗ್ಯೆ ಯುನಿಸೆಫ್‌ನ ಕಾಳಜಿ ಹಾಗೂ ಪ್ರಯತ್ನ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿ ಅವರನ್ನು ಅಭಿನಂದಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಹೈದ್ರಾಬಾದ್‌ನ ಯುನಿಸೆಫ್‌ನ ಹಿರಿಯ ಅಧಿಕಾರಿಗಳಾದ ವೆಂಕಟೇಶ್ ಅರಳಿಕಟ್ಟೆ ಮತ್ತು ಡಾ. ಪ್ರಭಾತ್ ಮಟ್ಟಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ ಹಾಗೂ ನಿಖಿಲೇಶ್ ಉಪಸ್ಥಿತರಿದ್ದರು.

ಯುವಸಿರಿ, ರೈತಭಾರತದ ಐಸಿರಿ: ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Article Image

ಯುವಸಿರಿ, ರೈತಭಾರತದ ಐಸಿರಿ: ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

ಉಜಿರೆ: ಪ್ರಕೃತಿಗೂ, ಕೃಷಿಗೂ ಅವಿನಾಭಾವ ಸಂಬಂಧವಿದ್ದು ಕೃಷಿ ನಮ್ಮ ಭವ್ಯ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ಉಜಿರೆಯ ಸೋನಿಯಾಯಶೋವರ್ಮ ಹೇಳಿದರು. ಅವರು ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲ್ಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನ್ನದಾನಕ್ಕಿಂತ ಮಿಗಿಲಾದ ದಾನವಿಲ್ಲ. ಆಹಾರದ ಪೋಲು ಹಾಗೂ ಅಪವ್ಯಯ ಮಾಡಬಾರದು ಎಂದು ಸಲಹೆ ನೀಡಿದ ಅವರು ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಅವರಲ್ಲಿರುವ ಅಪಾರ ಶಕ್ತಿ-ಸಾಮರ್ಥ್ಯ ಹಾಗೂ ಪ್ರತಿಭೆಯನ್ನು ಗುರು-ಹಿರಿಯರ ಸಕಾಲಿಕ ಮಾರ್ಗದರ್ಶನದಲ್ಲಿ ಕೃಷಿಗೆ ಬಳಸಬೇಕು. ಕೃಷಿಯಲ್ಲಿ ಭತ್ತದ ಬೀಜ ಬಿತ್ತುವುದು, ನೇಜಿನಾಟಿ, ಅದು ಬೆಳೆದು ಪೈರಾದಾಗ ಕಟಾವು ಮಾಡುವುದು, ಭತ್ತ ತೆಗೆದು ಅಕ್ಕಿ ಪಡೆಯುವುದು ಮೊದಲಾದ ವಿವಿಧ ಹಂತಗಳಲ್ಲಿ ನಾವು ಪಡೆಯುವ ಸಂತೋಷ, ತೃಪ್ತಿ, ನೆಮ್ಮದಿ ಅನುಭವಿಸಿದಾಗ ಮಾತ್ರ ಅದರ ಸೊಗಡನ್ನು ತಿಳಿಯಬಹುದು ಎಂದು ಅವರು ಹೇಳಿದರು. ಪ್ರಕೃತಿ ಮತ್ತು ಭೂಮಿಯನ್ನು ನಾವು ತಾಯಿ, ದೇವರು ಎಂದು ಆರಾಧಿಸುವುದು ಕೃಷಿ ಸಂಸ್ಕ್ರತಿಯ ಪ್ರತೀಕ ಎಂದು ಅವರು ಅಭಿಪ್ರಾಯಪಟ್ಟರು. ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ನೇಜಿನಾಟಿ ತಯಾರಿ ಬಗ್ಗೆ ಮಾಹಿತಿ ನೀಡಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್ ನೇಜಿನಾಟಿಯಲ್ಲಿ ಭಾಗವಹಿಸಿದರು. ಎಸ್.ಡಿ.ಎಂ. ಕಾಲೇಜಿನ ೭೫೦ ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ನೇಜಿನಾಟಿಯಲ್ಲಿ ಭಾಗವಹಿಸಿದರು. ನಾಲ್ಕು ಗದ್ದೆಗಳಲ್ಲಿ ನಾಲ್ಕು ಪ್ರತ್ಯೇಕ ತಂಡಗಳಲ್ಲಿ ನೇಜಿನಾಟಿ ಮಾಡಲಾಯಿತು. ಉಜಿರೆಯ ಸಂತೋಷ್ ಮತ್ತು ಶ್ರೀಕಾಂತರ ಅಲಂಕರಿಸಿದ ಕೋಣಗಳ ಜೋಡಿಯನ್ನು ಗದ್ದೆಗೆ ಇಳಿಸಿ, ಪ್ರಸಾದ ಹಾಕಿ ನೇಜಿನಾಟಿಗೆ ಚಾಲನೆ ನೀಡಲಾಯಿತು. ಶುಭಾಶಂಸನೆ ಮಾಡಿದ ಶಾಸಕ ಹರೀಶ್ ಪೂಂಜ ಶಿಸ್ತು ಮತ್ತು ಬದ್ಧತೆಗೆ ಹೆಸರಾದ ಬದುಕು ಕಟ್ಟೋಣ ತಂಡದವರು ಕೃಷಿ ಸಂಸ್ಕ್ರತಿಯನ್ನು ಯುವಜನತೆಗೆ ಪರಿಚಯಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದರು. ರಾಷ್ಟ್ರಪ್ರಶಸ್ತಿ ಪುರಸ್ಕ್ರತ ಭತ್ತದತಳಿ ತಜ್ಞ, ಕೃಷಿಋಷಿ ಬಿ.ಕೆ. ದೇವರಾವ್ ಅವರನ್ನು ಗೌರವಿಸಲಾಯಿತು. ಶರತ್‌ಕೃಷ್ಣ ಪಡ್ವೆಟ್ನಾಯ, ವಕೀಲ ಬಿ.ಕೆ. ಧನಂಜಯ ರಾವ್, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ರವೀಶ್ ಪಡುಮಲೆ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಶ್ರೀನಿವಾಸ ಗೌಡ, ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ, ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ಉಪಸ್ಥಿತರಿದ್ದರು. ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್ ಕುಮಾರ್ ಶೆಟ್ಟಿ ಮತ್ತು ದೀಪಾ, ಆರ್.ಪಿ. ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ಉಪಸ್ಥಿತರಿದ್ದು ನೇಜಿನಾಟಿಗೆ ಸಹಕರಿಸಿದರು. ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪೂರಣ್‌ವರ್ಮ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ತಿಮ್ಮಯ್ಯ ನಾಯ್ಕ ಕೊನೆಯಲ್ಲಿ ಧನ್ಯವಾದವಿತ್ತರು.

14ನೇ ದ್ವೈವಾರ್ಷಿಕ ಕೆರೆ ಸಮ್ಮೇಳನ-ಕೊನೆಯ ದಿನ ಬೀಚ್ ಕ್ಲೀನಿಂಗ್ ಕಾರ್ಯಕ್ರಮ

Article Image

14ನೇ ದ್ವೈವಾರ್ಷಿಕ ಕೆರೆ ಸಮ್ಮೇಳನ-ಕೊನೆಯ ದಿನ ಬೀಚ್ ಕ್ಲೀನಿಂಗ್ ಕಾರ್ಯಕ್ರಮ

ವಿದ್ಯಾಗಿರಿ: ಕಡಲ ಕಿನಾರೆಯಲ್ಲಿ ಬಂದು ಬೀಳುವ ಯಾವುದೇ ಕಸ ಅದು ಇಲ್ಲಿನ ಜನರು ಹಾಕುವ ಕಸವಲ್ಲ ಬದಲಾಗಿ ನಾವೇ ನೀರಿನ ಮೂಲಗಳಿಗೆ ಎಸೆಯುವ ಕಸ ಬಂದು ಸಾಗರ ಸೇರುತ್ತದೆ. ಈ ರೀತಿಯ ನಿರಂತರ ಸ್ವಚ್ಛತಾ ಅಭಿಯಾನ ಮಾಡುವ ಉದ್ದೇಶ ಅದು ಹೊರಗೆ ಕಾಣುವ ಸ್ವಚ್ಚತೆಗಿಂತ ನಮ್ಮ ಒಳಗಿನ ಮನಸ್ಸು ಸ್ವಚ್ಛವಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಸ್ವಚ್ಛತೆಯಲ್ಲಿ ಭಾಗಿಯಾಗಿ ಯುವಕರಂತೆ ಸಕ್ರಿಯವಾಗಿ ಭಾಗವಹಿಸಿದ ಶಾಲಾ ವಿದ್ಯಾರ್ಥಿಗಳು ಎಲ್ಲಾ ದೊಡ್ಡವರಿಗೆ ತೋರಿದ ಒಂದು ಉತ್ತಮ ನಿದರ್ಶನ ಎಂದು ನುಡಿದರು. ಸಸಿಹಿತ್ಲು ಕಡಲ ಕಿನಾರೆಯಲ್ಲಿ 14ನೇ ದ್ವೈವಾರ್ಷಿಕ ಕೆರೆ ಸಮ್ಮೇಳನದ-2024ರ ಕೊನೆಯ ದಿನ ಬೀಚ್ ಕ್ಲೀನಿಂಗ್ ಅಭಿಯಾನವನ್ನು ಕೆರೆ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯ, ರಾಷ್ಟ್ರ, ವಿದೇಶದಿಂದ ಆಗಮಿಸಿದ್ದ ವಿವಿಧ ಶಿಕ್ಷಣ ಸಂಸ್ಥೆಗಳ 120ಕ್ಕೂ ಹೆಚ್ಚು ಪ್ರತಿನಿಧಿಗಳು, ವಿದ್ಯಾರ್ಥಿಗಳು, ಆಳ್ವಾಸ್‌ನ ,ಎನ್.ಎಸ್.ಎಸ್.ನ ವಿದ್ಯಾರ್ಥಿಗಳು ಪಾಲ್ಗೊಂಡು ಸುಮಾರು 100 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ನೇಪಾಳದಿಂದ ಕೆರೆ ಸಮ್ಮೇಳನಕ್ಕೆ ಆಗಮಸಿದ್ದ ಕಟ್ಮಂಡು ವಿಶ್ವವಿದ್ಯಾಲಯದ ಪ್ರತಿನಿಧಿಗಳು, ಐ.ಸಿ.ಸಿ. ಸರ್ಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕ ಗೌರವ್ ಹೆಗ್ಡೆ ಹಾಗೂ ಸರ್ಫಿಂಗ್ ಸ್ವಾಮಿ ಪ್ರತಿಷ್ಠಾನದ ಅನೇಕ ನಿರ್ದೇಶಕರು, ಸದಸ್ಯರು ಮತ್ತು ಯಂಗ್ ಇಂಡಿಯನ್ಸ್ನ ಮಧುಕರ್ ಮತ್ತು ಶರಣ್ ಶೆಟ್ಟಿ, ಆಳ್ವಾಸ್‌ನ ಸಿಬ್ಬಂದಿ ಭಾಗಿಯಾಗಿದ್ದರು. ಬಳಿಕ ಮೂಡಬಿದ್ರೆಯ ಸಾವಿರ ಕಂಬ ಬಸದಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ, ಸಂಶೋಧನಾ ವಿದ್ವಾಂಸ, ಅಧ್ಯಪಕರಿಗೆ ಮೂಡಬಿದ್ರೆ ಶ್ರೀಜೈನಮಠದ ಡಾ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ಯುವಸಿರಿ- ರೈತ ಭಾರತದ ಐಸಿರಿ: 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Article Image

ಯುವಸಿರಿ- ರೈತ ಭಾರತದ ಐಸಿರಿ: 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕದ ಸುವರ್ಣಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕಾಲೇಜಿನ ಕ್ರೀಡಾಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿಕ್ಲಬ್, ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಅ. 20 ರಂದು ಭಾನುವಾರ ದೇವಸ್ಥಾನದ ವಠಾರದಲ್ಲಿರುವ ನಾಲ್ಕೂವರೆ ಎಕ್ರೆ ಗದ್ದೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಸ್ವಯಂಸೇವಕರು ಹಾಗೂ ಎಸ್.ಡಿ.ಎಂ. ಕ್ರೀಡಾ ಸಂಘದ ಸದಸ್ಯರು “ಯುವಸಿರಿ, ರೈತ ಭಾರತದ ಐಸಿರಿ” ಕಾರ್ಯಕ್ರಮದಡಿಯಲ್ಲಿ ನೇಜಿನಾಟಿ ಮಾಡಲಿದ್ದಾರೆ ಎಂದು ಬದುಕು ಕಟ್ಟೋಣ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್ ತಿಳಿಸಿದರು. ಅವರು ಮಂಗಳವಾರ ಉಜಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 500ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ನೇಜಿ ನಾಟಿಯಲ್ಲಿ ಭಾಗವಹಿಸಲಿದ್ದು, ಮುಂದೆ ಬೆಳೆಯ ರಕ್ಷಣೆ, ಕಟಾವು ಮಾಡಿ ಭತ್ತದಿಂದ ಅಕ್ಕಿ ಪಡೆದು ಅಕ್ಕಿಯನ್ನು ಸ್ಥಳೀಯ ದೇವಸ್ಥಾನಗಳಿಗೆ ಅರ್ಪಿಸಲಾಗುವುದು. ಬೈಹುಲ್ಲನ್ನು “ನಂದಗೋಕುಲ” ಗೋಶಾಲೆಗೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು. ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಮಹೇಶ್ ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಕೃಷಿಯಲ್ಲಿ ಖುಷಿ ಕಾಣಬೇಕು ಹಾಗೂ ಕೃಷಿ ಭೂಮಿಯ ಸಮರ್ಪಕ ಬಳಕೆಯಾಗಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಚೈತ್ರೇಶ್ ಇಳಂತಿಲ ಶುಭಾಶಂಸನೆ ಮಾಡಿದರು. ಉಜಿರೆಯ ಸೋನಿಯಾವರ್ಮ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೃಷಿ ಋಷಿ ಬಿ.ಕೆ. ದೇವರಾವ್ ಅವರನ್ನು ಗೌರವಿಸಲಾಗುವುದು. ರಾಜೇಶ್ ಪೈ, ಸಂದೀಪ್ ಕುಮಾರ್ ಮತ್ತು ಶ್ರೀಧರ ಕೆ.ವಿ. ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

Article Image

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆ ನಷ್ಟವಾಗಿದ್ದರೆ ಪರಿಹಾರ ತುಂಬಿ ಕೊಡಲು 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದು, ಇದರಲ್ಲಿ ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಣಿಗೊಳಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಂಜುನಾಥ ಡಿ. ಅವರ ಮೊಬೈಲ್ ಸಂಖ್ಯೆ 9448999226 ಹಾಗೂ ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ ಅವರ ಸಂಪರ್ಕ ಸಂಖ್ಯೆ 9131962255 ಆಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

ಉಜಿರೆ: ಆಟಿ ಕಳೆಂಜ ಶಿವನ ಪ್ರತಿರೂಪ ಎಂಬ ನಂಬಿಕೆ ತುಳುನಾಡಿನಲ್ಲಿದೆ. ಆಟಿಕಳೆಂಜನ ವಿಶೇಷ ವೇಶಭೂಷಣ ತುಂಬಾ ಸರಳ ಮತ್ತು ಅರ್ಥಪೂರ್ಣವಾಗಿದ್ದು ಆಟಿ ಕಳೆಂಜ ಮನೆಮನೆಗೆ ಬಂದರೆ ದುಷ್ಟಶಕ್ತಿಗಳು ಹಾಗೂ ರೋಗರುಜಿನನಗಳು ದೂರವಾಗುತ್ತವೆ ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಕನ್ನಡ ಮುಖ್ಯಸ್ಥ ಪ್ರೊ. ಯೋಗೀಶ್ ಕೈರೋಡಿ ಹೇಳಿದರು. ಅವರು ಶನಿವಾರ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಇತಿಹಾಸ ವಿಭಾಗ ಮತ್ತು ತುಳು ಸಂಘದ ಆಶ್ರಯದಲ್ಲಿ ಆಯೋಜಿಸಿದ ತುಳುವೆರೆ ಆಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವಜರಿಗೆ ಓದಲು, ಬರೆಯಲು ಬಾರದಿರುವುದರಿಂದ ಅವರನ್ನು ಅಜ್ಞಾನಿಗಳು ಎಂದು ಭಾವಿಸಬಾರದು. ಅನಿವಾರ್ಯತೆಯಿಂದ ಅವರು ಆಹಾರ ಪದಾರ್ಥಗಳನ್ನು ಅವರು ಸಂಶೋಧಿಸಿದರು. ಆದರೆ ಈಗ ಜನರು ಅಕ್ಷರಸ್ಥರಾದರು ತೀವ್ರ ಪೈಪೋಟಿ, ಧನದಾಹ, ಸುಖ-ಭೋಗಗಳ ಲಾಲಾಸೆ, ಹೋಲಿಕೆ, ಅಸೂಯೆ, ದ್ವೇಷಭಾವನೆಯಿಂದ ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸ ಮಾಯವಾಗಿದೆ ಯಾರಲ್ಲಿಯೂ ಆತ್ಮೀಯ ಸಂಬಂಧವಿಲ್ಲ ಎಂದು ಅವರು ಹೇಳಿದರು. “ಮರಿ ತುಚ್ಚಿಂಡ ಮರ್ದುಂಡು, ಅರಿ ತುಚ್ಚಿಂಡ ಮರ್ದಿಜ್ಜಿ” ಎಂಬ ಮಾತಿದೆ. ಆದರೆ ಆಹಾರವಿಲ್ಲದೆ ಬದುಕಲು ಸಾಧ್ಯವಿಲ್ಲ. ಹಿಂದೆ ಆಹಾರವೇ ಔಷಧಿಯಾಗಿದ್ದರೆ ಇಂದು ಹೆಚ್ಚಿನವರಿಗೆ ಔಷದಿಯೇ ಆಹಾರವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಆಧುನಿಕ ಜನತೆಗೆ ಆಟಿ ಅಡಂಬರವಾಗಿದೆ. ಮಾಲ್, ಹೋಟೆಲ್‌ಗಳಲ್ಲಿ ಹಬ್ಬಗಳನ್ನು ಆಚರಿಸುವಂತಾಗಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮ ತುಳುನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆ ಹಾಗೂ ಆಹಾರ ಔಷಧಿಗಳ ಬಗ್ಗೆ ಅರಿವು ಜಾಗೃತಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕೊಯೂರಿನ ಅಮ್ಮಿ ನಲಿಕೆ ಮತ್ತು ಬಳಗದವರ ಆಟಿಕಳೆಂಜ ವೇಷ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಸನ್ಮತಿಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಅಭಿಜ್ಞಾ ಉಪಾಧ್ಯಾಯ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ಕುಮಾರಿ ಶ್ರದ್ದಾ ಮತ್ತು ಕುಮಾರಿ ಸೃಷ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ಆ.2ರಂದು ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

Article Image

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರೈತರು ತಮ್ಮ ಜಮೀನಿಗಳ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ (RTC), ಆಧಾರ್ ಕಾರ್ಡ್ ಪ್ರತಿ ಮತ್ತು ಆಧಾರ್‌ಗೆ ಲಿಂಕ್ ಇರುವ ಮೊಬೈಲ್ ಪೋನ್‌ನೊಂದಿಗೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿ (VA) ಅಥವಾ ನಾಡಕಚೇರಿಗೆ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೂಡುಬಿದಿರೆ: 'ಸಮೃದ್ಧಿ' ಹಲಸು ಹಣ್ಣುಗಳ ಮಹಾಮೇಳ

Article Image

ಮೂಡುಬಿದಿರೆ: 'ಸಮೃದ್ಧಿ' ಹಲಸು ಹಣ್ಣುಗಳ ಮಹಾಮೇಳ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ, ಆಹಾರೋತ್ಸವ ಮಹಾಮೇಳ ಸಮಿತಿ, ಮೂಡುಬಿದಿರೆ, ಕೃಷಿ ಇಂಜಿನಿಯರಿಂಗ್ ವಿಭಾಗ, ಆಳ್ವಾಸ್ ತಾಂತ್ರಿಕ ಕಾಲೇಜು, ಮಿಜಾರು ಸಂಯುಕ್ತ ಆಶ್ರಯದಲ್ಲಿ ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ 'ಸಮೃದ್ಧಿ' ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾ ಮೇಳವು ಮೂಡುಬಿದಿರೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಜೂನ್ 14, 15 ಮತ್ತು 16ರಂದು ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ವೈವಿಧ್ಯಮಯ ತಳಿಗಳ ಹಲಸಿನ ಹಣ್ಣಿನ ಬೃಹತ್ ಸಂಗ್ರಹ. ಸವಿರುಚಿ ತಳಿಗಳ ಮಾವು, ಪಪ್ಪಾಯ, ಅನಾನಸು, ಪೇರಳೆ, ನೇರಳೆ-ಪ್ರಾದೇಶಿಕ ಹಣ್ಣುಗಳ ವಿಶೇಷ ಸಂಗ್ರಹ. ರಂಬುಟನ್, ಮ್ಯಾಂಗೋಸ್ಟಿನ್, ಡ್ರಾಗನ್, ಬಟರ್ ಫ್ರೂಟ್-ವಿದೇಶಿ ಹಣ್ಣುಗಳ ಮಹಾಮೇಳ. ಕಲ್ಲಂಗಡಿ, ಕಬ್ಬು, ತಾಜಾ ಹಣ್ಣುಗಳ ಸವಿರಸಗಳ ತಾಣ. ಹಣ್ಣು-ತರಕಾರಿಗಳಿಂದಲೇ ತಯಾರಾದ ಸಿದ್ಧ (Readymade) ತಿನಿಸುಗಳ ಬೃಹತ್ ಸಂಗ್ರಹ. ಜೈನ, ಬ್ರಾಹ್ಮಣ, ಗೌಡ ಸಾರಸ್ವತ ಸಮುದಾಯಗಳ ವಿಶೇಷ ಪ್ರಾದೇಶಿಕ ಶುದ್ಧ ಸಸ್ಯಾಹಾರಿ ತಿಂಡಿ-ತಿನಿಸುಗಳ ಆಗರ. ಆಲಂಕಾರಿಕ ವಸ್ತುಗಳು, ಮಣ್ಣಿನ ಮಡಕೆಗಳು, ಗೃಹೋಪಯೋಗಿ ವಸ್ತುಗಳ ಬೃಹತ್ ಮೇಳ. ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಆಹಾರ ಮತ್ತು ಪೋಷಕಾಂಶಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಾಗಾರ. ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ. ವೈವಿಧ್ಯಮಯ ಫಲ-ಪುಷ್ಪಗಿಡಗಳ ನರ್ಸರಿ ಸಮಾವೇಶ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸಬಲೀಕರಣ-ಸ್ವಾವಲಂಬನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಫಲಾನುಭವಿಗಳ 'ಸಿರಿ' ಸ್ವದೇಶಿ ಉತ್ಪನ್ನಗಳ ಬೃಹತ್ ಸಂಗ್ರಹ. ಖಾದಿ-ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಸ್ವದೇಶಿ ಮೇಳ, ಮಳೆಗಾಲದ ಕರಾವಳಿಗರ ವಿಶೇಷ ತಿನಿಸಿನ ಸೊಪ್ಪು ತರಕಾರಿಗಳ ಮಾರಾಟ ವ್ಯವಸ್ಥೆ. ನವವಿಧ ಸಿರಿಧಾನ್ಯಗಳ ಬೃಹತ್ ಸಂಗ್ರಹ. 300ಕ್ಕೂ ಮಿಕ್ಕಿದ ವೈವಿಧ್ಯಮಯ ಮಳಿಗೆಗಳ ಮಹಾಮೇಳ. ಈ ಮೇಲಿನವುಗಳು ವಿಶೇಷ ಆಕರ್ಷಣೆ ಆಗಿದ್ದು, ಪ್ರವೇಶ ಉಚಿತವಾಗಿರುತ್ತದೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

Article Image

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

ಮಂಗಳೂರು: 2024ರ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

Article Image

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

ಉಡುಪಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣೆ ಸಂಸ್ಥೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಅಪ್ಲಿಕೇಶನ್ಸ್ ಆಫ್ ಯುಎವಿ ಆ್ಯಂಡ್ ಡ್ರೋನ್ಸ್ ಫಾರ್ ಅಗ್ರಿಕಲ್ಚರ್' ಮೇ 14 ರಿಂದ 16ರ ವರೆಗೆ ಆನ್‌ಲೈನ್ ಮೂಲಕ ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದಾರೆ. ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಯುವ ವಿಜ್ಞಾನಿಗಳು ಮೇ 10ರ ಒಳಗಾಗಿ https://forms.gle/LwxDoR5sktBVHktf9 ನೋಂದಾಯಿಸಿಕೊಂಡು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಮಾಹಿತಿಗೆ 9743084194 ಪ್ರಕಟಣೆ ತಿಳಿಸಿದೆ.

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

Article Image

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

ಕೋಕೋ ಬೆಳೆ ಧಾರಣೆ ಏರುಗತಿಯಲ್ಲಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಹಸಿ ಕೋಕೋ ಕೆ.ಜಿ.ಗೆ 100 ರೂ. ಧಾರಣೆಯನ್ನು ತಲುಪಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ಕೃಷಿಕರ ಸಂಖ್ಯೆ ಹೆಚ್ಚಾಗಿದ್ದು, ಅಡಿಕೆ, ತೆಂಗು ಜತೆ ಕೋಕೋ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಇದಕ್ಕೂ ರೋಗ ಬಾಧೆ, ಬೆಲೆ ಇಳಿಕೆ ಸಮಸ್ಯೆ ಇದ್ದು ಕೃಷಿಕರಿಗೆ ನಿರೀಕ್ಷಿತ ಆದಾಯ ಕೈಗೆ ಸಿಗುತ್ತಿರಲಿಲ್ಲ. ಕೆ.ಜಿ.ಗೆ 100 ರೂ.: ಕೋಕೋಗೆ ಉತ್ತಮ ಬೇಡಿಕೆ ಇದ್ದರೂ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗದ ಕಾರಣ ಕೋಕೋ ಬೆಳೆಯ ಬಗ್ಗೆ ನಿರಾಸಕ್ತಿ ವಹಿಸಿದ್ದರು. ಆದರೆ ಈಗ ಹಸಿ ಕೋಕೋ ಕೆ.ಜಿ.ಗೆ 80ರಿಂದ 100 ರೂ.ಗಳಂತೆ ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿದೆ. ಮುಂದಿನ ದಿನಗಳಲ್ಲಿ ಹಸಿ ಕೋಕೋ ಕೆ.ಜಿ.ಗೆ 100ರಿಂದ 120 ರೂ. ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಒಣ ಕೋಕೋ ಕೆ.ಜಿ.ಗೆ 370ರಿಂದ 400ರಂತೆ ಖರೀದಿಸಲಾಗುತ್ತಿದೆ. ಆದರೆ ಈ ಬೇಸಗೆಯಲ್ಲಿ ಮಾತ್ರವೇ ಸಿಗಲಿದೆ ಎನ್ನಲಾಗುತ್ತಿದೆ. ಮಳೆಗಾಲದಲ್ಲಿ ಹೆಚ್ಚಾಗಿ ನೀರಿನ ಅಂಶವನ್ನು ಹೊಂದಿರುವುದರಿಂದ ಕೋಕೋ ಹೆಚ್ಚಿನ ಧಾರಣೆ ನೀಡಲು ಸಾಧ್ಯವಾಗುತ್ತಿಲ್ಲ. ಬೇಸಗೆಯಲ್ಲಿ ಉತ್ಪನ್ನಗಳಿಗೆ ಗುಣಮಟ್ಟದ ಕೋಕೋ ಸಿಗುವುದರಿಂದ ಬೆಲೆ ಏರಿಕೆ ಆಗುತ್ತದೆ. ಬೆಲೆ ಏರಿಕೆಗೆ ಕಾರಣ-ವಿವಿಧ ಉತ್ಪನ್ನಗಳಿಗಾಗಿ ಕಂಪೆನಿಗಳು ವಿದೇಶದ ಆಶ್ರಯಿಸಿಕೊಂಡಿದ್ದವು. ಕೋಕೋಗಳನ್ನೇ ಐವರಿಕೋಸ್ಟ್ ಎಂಬಲ್ಲಿ ಕೋಕೋ ಬೆಳೆ ಉತ್ಪಾದನೆ ಕುಸಿತಗೊಂಡು ಅಲ್ಲಿಂದ ಭಾರತಕ್ಕೆ ಕೋಕೋ ಪೂರೈಕೆ ಆಗುತ್ತಿಲ್ಲ ಎನ್ನಲಾಗಿದೆ. ಇದರಿಂದ ದೇಶಿ ಕೋಕೋಗೆ ಬೇಡಿಕೆ ಹೆಚ್ಚಾಗಿದೆ. ಇತರೆ ಕೋಕೋ ಖರೀದಿ ಮಾಡುವ ವ್ಯಾಪಾರಸ್ಥರು ಹಾಗೂ ಕ್ಯಾಂಪ್ಕೋ ಸಂಸ್ಥೆ ಇದರಿಂದ ಬೆಲೆ ಏರಿಕೆ ಮಾಡಿದೆ ಎಂದು ಪ್ರಕಟಣೆಯಿಂದ ತಿಳಿದುಬಂದಿದೆ.

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

Article Image

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

ಎಲೆಚುಕ್ಕೆ ರೋಗವನ್ನು ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಕಾಣಬಹುದು. ಕೆಳಭಾಗದ ಒಂದೆರಡು ಎಲೆಗಳಲ್ಲಿ ಚುಕ್ಕೆಗಳಿರುತ್ತವೆ. ಇತ್ತೀಚೆಗೆ ಈ ರೋಗವು ಹಲವೆಡೆ ಗಂಭೀರ ಸ್ವರೂಪವನ್ನು ಪಡೆದಿದೆ. ತಕ್ಷಣ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದದ್ದು ಅನಿವಾರ್ಯ. ಮೊತ್ತಮೊದಲು ಎಲೆಚುಕ್ಕೆ ರೋಗದ ತೀವ್ರತೆಯನ್ನು ಗಮನಿಸಿದ್ದು ಭಾರತದ ಈಶಾನ್ಯ ರಾಜ್ಯ ತ್ರಿಪುರದ ಜಂಪುಯಿ ಹಿಲ್ಸ್ ಪ್ರದೇಶದಲ್ಲಿ, ಕರ್ನಾಟಕದ ಮೂಡಿಗೆರೆ ತಾಲೂಕಿನ ಕಳಸದ ಮರಸಣಿಗೆ ಪ್ರದೇಶದಲ್ಲಿ ಕೆಲವೇ ತೋಟಗಳಿಗೆ ಸೀಮಿತವಾಗಿದ್ದ ರೋಗಲಕ್ಷಣ, ಮರು ವರ್ಷದಲ್ಲಿ ಹಲವು ತೋಟಗಳಿಗೆ ಹಬ್ಬಿತ್ತು. ಗಾಳಿ ಮುಖೇನ ಈ ಹರಡುವ ಕಾರಣ, ಪ್ರಾಥಮಿಕ ಹಂತದಲ್ಲೇ ನಿರ್ವಹಣೆ ಮಾಡದಿದ್ದರೆ ಈ ರೋಗವನ್ನು ನಿಯಂತ್ರಿಸುವುದು ಕಷ್ಟ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಎಲೆಚುಕ್ಕೆ ರೋಗದ ಲಕ್ಷಣಗಳು ಇತ್ತೀಚೆಗೆ ಕಾಣಿಸಿಕೊಂಡಿವೆ. ಕೇರಳ ಮತ್ತು ತಮಿಳುನಾಡಿಗೂ ರೋಗ ಪಸರಿದೆ. ರೋಗಾಣು: ಕೊಲೆಟೋಟೈಕಮ್ ಸ್ವಿಸಿಸ್ ಮತ್ತು ಫಿಲೋಸ್ಟಿಕ್ಷಾ ಅರೆಕೆ ಎನ್ನುವ ಶಿಲೀಂಧ್ರಗಳು ಸಾಮಾನ್ಯವಾಗಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗವನ್ನು ಉಂಟುಮಾಡುತ್ತವೆ. ಆದರೆ, ಇತ್ತೀಚೆಗೆ ಗಂಭೀರ ಸ್ವರೂಪದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗಕ್ಕೆ ಕೊಲೆಟೋಟೈಕಮ್ ಕಹಾವೆ ಸಬ್ಸ್ಟಿಸಿಸ್ ಸಿಗ್ಗಾರೊ ಎನ್ನುವ ಶಿಲೀಂಧ್ರವು ಪ್ರಮುಖ ಕಾರಣವೆಂದು ತಿಳಿದುಬಂದಿದೆ. ಎಲೆಚುಕ್ಕೆ ರೋಗದಿಂದ ಪತ್ರಹರಿತ್ತು ಕಡಿಮೆಯಾಗಿ ಉತ್ಪಾದನೆ ಕುಂಠಿತವಾಗುತ್ತದೆ. ಇದು ಮರದ ಬೆಳವಣಿಗೆ ಮತ್ತು ಇಳುವರಿಯ ಮೇಲೆ ದೀರ್ಘ ಕಾಲದ ದುಷ್ಪರಿಣಾಮ ಬೀರಬಹುದು. ರೋಗ ಲಕ್ಷಣಗಳು: ಅಡಿಕೆ ಮರದ ಎಲೆಯಲ್ಲಿ “ಹಳದಿ ಬಣ್ಣದಿಂದ ಆವೃತವಾಗಿರುವ ಕಂದು ಬಣ್ಣದ ಸಣ್ಣ ಚುಕ್ಕೆಗಳಿದ್ದರೆ, ಅದು ಎಲೆಚುಕ್ಕೆ ರೋಗವೆಂದರ್ಥ. ಕೆಲವೊಮ್ಮೆ, ಕಪ್ಪು ಬಣ್ಣದ ಅಂಚು ಇರುವ ಬೂದು ಬಣ್ಣದ ಸಣ್ಣ ಚುಕ್ಕೆಗಳನ್ನೂ ಕಾಣಬಹುದು. ಈ ರೀತಿಯ ಸಣ್ಣ ಚುಕ್ಕೆಗಳು ದೊಡ್ಡದಾಗಿ, ಈ ಒಂದಕ್ಕೊಂದು ಸೇರಿ ಇಡೀ ಸೋಗೆಗೆ ಹಬ್ಬಿ ಅದನ್ನು ಒಣಗಿಸುತ್ತವೆ. ಮೊದಲು ಕೆಳಭಾಗದ ಒಂದೆರಡು ಎಲೆಗಳಲ್ಲಿ ರೋಗಲಕ್ಷಣ ಕಾಣಿಸಿಕೊಂಡರೆ, ರೋಗ ತೀವ್ರತೆ ಹೆಚ್ಚಾದಾಗ ನಾಲ್ಕೈದು ಎಲೆಗಳಿಗದು ಹಬ್ಬುತ್ತದೆ. ಅಡಿಕೆ ಕಾಯಿ ಮತ್ತು ಹಾಳೆಯ ಮೇಲೂ ಚುಕ್ಕೆಗಳನ್ನು ಕಾಣಬಹುದು. ರೋಗಬಾಧಿತ ಕಾಯಿಗಳು ಬಲಿಯುವ ಮೊದಲೇ ಹಳದಿಯಾಗಿ ಬೀಳುತ್ತವೆ. ಕೆಲವೊಮ್ಮೆ ಕಾಯಿಯ ಮೇಲೆ ಚುಕ್ಕೆ ಮೂಡಿದ ಜಾಗವು ಸೀಳಿ ಅವು ಉದುರುವುದಿದೆ. ನಿರ್ವಹಣೆ ಹೇಗೆ: ಅಧಿಕ ರೋಗಬಾಧಿತ ಎಲೆಗಳನ್ನು ತುಂಡರಿಸಿ ತೆಗೆದು ನಾಶ ಮಾಡುವುದು ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿ. ಈ ಕೆಲಸ ಪ್ರಾಯೋಗಿಕವಾಗಿ ಕಷ್ಟ, ಆದರೆ, ತೀವ್ರ ಬಾಧೆಯಿರುವಲ್ಲಿ ಅನಿವಾರ್ಯ. ರೋಗಬಾಧಿತ ತೋಟಗಳಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ, ಎಲೆಗಳಿಗೂ ಮಾಡುವುದೊಳಿತು. ಹೆಚ್ಚು ರೋಗಬಾಧೆಯಿರುವ ತೋಟಗಳಲ್ಲಿ ಆಗಸ್ಟ್ - ಸೆಪ್ಟೆಂಬರ್ ಸಮಯದಲ್ಲಿ ಮಳೆ ಇಲ್ಲದಾಗ (Propiconazole 25EC) (Hexaconazole 5EC/5SC) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಎಲೆಗಳಿಗೆ ಸಿಂಪಡಿಸಬೇಕು. ಮೂರರಿಂದ ನಾಲ್ಕು ವಾರಗಳ ನಂತರ, ಪ್ರೊಪಿನಬ್ 70WP ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಎರಡು ಗ್ರಾಂ ಪ್ರಮಾಣದಲ್ಲಿ ಸಿಂಪಡಿಸಬೇಕು. ಶಿಲೀಂದ್ರ ನಾಶಕ ದ್ರಾವಣ ತಯಾರಿಸುವಾಗ ಪ್ರತೀ ಲೀಟರ್ ದ್ರಾವಣಕ್ಕೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಅಂಟನ್ನು ಸೇರಿಸಬೇಕು. ತೀವ್ರ ರೋಗಬಾಧೆ ಇರುವಲ್ಲಿ, ಜನವರಿ ತಿಂಗಳ ನಂತರ ಸಿಂಗಾರ ಒಣಗುವ ರೋಗಕ್ಕೆ ಪ್ರೋಪಿಕೊನರೋಲ್ ಶಿಲೀಂಧ್ರನಾಶಕ ಸಿಂಪಡಿಸುವಾಗ ಎಲೆಚುಕ್ಕೆ ರೋಗವಿರುವ ಮರದ ಎಲೆಗಳಿಗೂ ಸಿಂಪಡಿಸಬಹುದು. ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಮತ್ತು ಹುಳಿ ಮಣ್ಣಿಗೆ ಸುಣ್ಣ ಹಾಕುವುದು ಒಳಿತು. ಸಾಮಾನ್ಯವಾಗಿ, ಅಡಿಕೆ ಮರಕ್ಕೆ 12 ಕಿಲೋ ಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ(220 ಗ್ರಾಂ), ರಾಕ್ ಫಾಸ್ಪೆಟ್ (200 ಗ್ರಾಂ) ಮತ್ತು ಪೊಟಾಷ್ (240 - 350 ಗ್ರಾಂ) ನೀಡಬೇಕು. ರಸಗೊಬ್ಬರಗಳನ್ನು ಕನಿಷ್ಠ ಎರಡು ಕಂತುಗಳಲ್ಲಿ ನೀಡಬೇಕು. ಜೊತೆಗೆ, ಲಘುಪೋಷಕಾಂಶಗಳಾದ ಸತುವಿನ ಸಲ್ವೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು. ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ, ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಕ್ರಮಗಳು ಬಲು ಮುಖ್ಯವಾಗುತ್ತವೆ.

First Previous

Showing 1 of 1 pages

Next Last