ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ
ಧರ್ಮಸ್ಥಳ, ಮೇ 31: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಅವರು ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿಗಳು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಕ್ಷೇತ್ರವು ಸಮಾಜಮುಖಿ ಸೇವೆಯಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು. ಭೇಟಿಯ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬ ಸದಸ್ಯರೂ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಹಾಗೂ ಅಮಿತ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
