Article Image

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ : 23 ಶ್ರೇಷ್ಠ ಭಜನಾ ಮಂಡಳಿಗಳಿಗೆ ಸಾಧಕ ಪ್ರಶಸ್ತಿ ಪ್ರದಾನ

Article Image

ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ : 23 ಶ್ರೇಷ್ಠ ಭಜನಾ ಮಂಡಳಿಗಳಿಗೆ ಸಾಧಕ ಪ್ರಶಸ್ತಿ ಪ್ರದಾನ

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನೇತೃತ್ವದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದಲ್ಲಿ ಉತ್ತಮ ಸೇವೆ, ಸಾಧನೆ ಮಾಡಿದ 23 ಭಜನಾ ಮಂಡಳಿಗಳಿಗೆ “ಸಾಧಕ ಪ್ರಶಸ್ತಿ” ಪ್ರದಾನ ಮಾಡಿ ಅಭಿನಂದಿಸಿದರು. ಭಜನೆ ಮಾಡುವಾಗ ಪರಿಶುದ್ಧ ತನು, ಮನದಿಂದ ದೃಢಸಂಕಲ್ಪದೊಂದಿಗೆ ಯಾವುದೇ ರೀತಿಯ ಚಿಂತೆ, ಸಂಕೋಚ ಇಲ್ಲದೆ ಭಕ್ತಿ ಹಾಗೂ ಉತ್ಸಾಹದಿಂದ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಎಲ್ಲಾ ಭಜನಾ ಮಂಡಳಿಗಳ ಸೇವಾ ಕಳಕಳಿ ಮತ್ತು ಬದ್ಧತೆಯನ್ನು ಶ್ಲಾಘಿಸಿದ ಅವರು ಹಿಂದೆ ಎಲ್ಲಾ ಕಡೆಗಳಲ್ಲಿ “ಜನ ಮರುಳೋ, ಜಾತ್ರೆ ಮರುಳೋ” ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಈಗ ಎಲ್ಲೆಡೆ ಭಜನಾ ಮಂಡಳಿಗಳಿಂದಾಗಿ ಎಲ್ಲಾ ಊರುಗಳಲ್ಲಿ ನಡೆಯುವ ಜಾತ್ರೆ, ಉತ್ಸವ, ಸಭೆ-ಸಮಾರಂಭ, ಹಬ್ಬ ಹರಿದಿನಗಳಲ್ಲಿ ಶಿಸ್ತು, ಸಂಯಮ, ಸ್ವಚ್ಛತೆ, ಬದ್ಧತೆ ಹಾಗೂ ಸೇವಾ ಕಳಕಳಿ ಕಂಡುಬರುತ್ತಿರುವುದು ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡಿದೆ ಎಂದು ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ವಿಶೇಷವಾಗಿ ಭಜನೆಯಲ್ಲಿ ಪುಟ್ಟಮಕ್ಕಳ ಪ್ರತಿಭೆ, ಆಸಕ್ತಿ ಮತ್ತು ಉತ್ಸಾಹವನ್ನು ಅವರು ಶ್ಲಾಘಿಸಿದರು. ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಮತ್ತು ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಎಲ್ಲಾ ಪದಾಧಿಕಾರಿಗಳ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತು ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಇದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಮಂಡಳಿಗಳ ಸೇವೆ, ಸಾಧನೆಯನ್ನು ಸಾದರಪಡಿಸಿದರು. ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ಸ್ವಾಗತಿಸಿದರು. ಭಜನಾ ಪರಿಷತ್‌ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಧನ್ಯವಾದವಿತ್ತರು. ವಕೀಲ ಕೇಶವ ಗೌಡ ಕಾರ್ಯಕ್ರಮ ನಿರ್ವಹಿಸಿದರು.

ಭಜನಾ ಪರಿಷತ್: ಪದಾಧಿಕಾರಿಗಳ ವಾರ್ಷಿಕ ಸಭೆ

Article Image

ಭಜನಾ ಪರಿಷತ್: ಪದಾಧಿಕಾರಿಗಳ ವಾರ್ಷಿಕ ಸಭೆ

ಉಜಿರೆ: ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಹೇಮವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕಾರ್ಯಕ್ರಮ ನಿರ್ವಹಿಸಿದರು.

ಆಳ್ವಾಸ್ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ

Article Image

ಆಳ್ವಾಸ್ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ (SCTPL) ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್‌ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ (TiE), ಸಿಐಐ (CII) ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು. SCTPL ನಿರ್ದೇಶಕ ಹರ್ಷಿತ್ ಶೆಟ್ಟಿ ಮಾತನಾಡಿ, “ನಮ್ಮ ಕಂಪನಿ 2004ರಲ್ಲಿ ಸ್ಥಾಪನೆಯಾದ ಭಾರತೀಯ ಸಂಸ್ಥೆಯಾಗಿದ್ದು, ಲೋ ಮತ್ತು ಮಿಡಿಯಂ ವೋಲ್ಟೇಜ್ ಸ್ವಿಚ್‌ಬೋಡ್‌ಗಳು, ಬಸ್‌ವೇ ವ್ಯವಸ್ಥೆಗಳು ಹಾಗೂ ಶೀಟ್ ಮೆಟಲ್ ಎನ್‌ಕ್ಲೋಸರ್ ತಯಾರಿಕೆಯಲ್ಲಿ ಪರಿಣತಿ ಹೊಂದಿದೆ. ವಿದ್ಯುತ್ ವಿತರಣೆ, ಶಕ್ತಿ ನಿರ್ವಹಣೆ ಮತ್ತು ಕೈಗಾರಿಕಾ ಸ್ವಯಂಚಾಲಿತ ಪರಿಹಾರಗಳಲ್ಲಿ ಕಂಪನಿಯು ಸಮಗ್ರ ಸೇವೆಗಳನ್ನು ನೀಡುತ್ತಿದೆ” ಎಂದು ತಿಳಿಸಿದರು. ಸದ್ಯ 100 ಕೋಟಿ ವ್ಯವಹಾರ ನಡೆಸುತ್ತಿದ್ದು, ಮುಂದಿನ ವರ್ಷಗಳಲ್ಲಿ 1000 ಕೋಟಿಯ ವ್ಯವಹಾರ ವೃದ್ಧಿಸುವ ಗುರಿಯಿದೆ ಎಂದರು. ಮೂಡುಬಿದಿರೆಯಲ್ಲಿ ಆರಂಭಗೊಂಡ ಈ ಘಟಕವನ್ನು ಮಿನಿಯೇಚರ್ (ಕಂಪನಿಯ ಉತ್ಪನ್ನಗಳ ಸಣ್ಣ ರೂಪ) ತಯಾರಿಕಾ ಕೇಂದ್ರವಾಗಿ ಬಳಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೆಲಸದ ಅನುಭವ ದೊರೆಯಲಿದ್ದು, ತರಬೇತಿ ಪಡೆಯುವಾಗಲೇ ಸಂಪಾದನೆ ಮಾಡುವ ಅವಕಾಶವೂ ಸಿಗಲಿದೆ. ಇಲ್ಲಿ ತರಬೇತಿ ಪಡೆಯುವವರು ಭವಿಷ್ಯದಲ್ಲಿ ಹೊಸದಾಗಿ ಸೇರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದ ಹರ್ಷಿತ್ ಶೆಟ್ಟಿ, ತನ್ನ ಇಂದಿನ ಸಾಧನೆಗೆ ಡಾ. ಎಂ. ಮೋಹನ ಆಳ್ವರಿಂದ ಕಲಿತ ಸಮಯಪಾಲನೆ, ಶಿಸ್ತು ಮತ್ತು ಪರಿಶ್ರಮವೇ ಮೂಲಾಧಾರ ಎಂದರು. ಕಾರ‍್ಯಕ್ರಮದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚರ‍್ಯ ಡಾ ಪೀಟರ್ ಫೆರ್ನಾಂಡೀಸ್ SCTPL ನಿರ್ದೇಶಕ ವಿನಯ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯಮಶೀಲಾ ಅಭಿವೃದ್ಧಿಕೋಶದ ಮುಖ್ಯಸ್ಥ ವೇಣುರಾವ್ ದೇವ್, ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಕುಮಾರಸ್ವಾಮಿ ಹಾಗೂ ಶ್ರೀನಿವಾಸ ಇದ್ದರು.

ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ: ರಾಷ್ಟ್ರೀಯ ವಿಚಾರ ಸಂಕಿರಣ

Article Image

ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ: ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ತತ್ವಪದಗಳಲ್ಲಿ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ, ವಿಶ್ವಮಾನವ ಪ್ರಜ್ಞೆ ಮೂಡಿಸುವ, ಸಮಾಜಸುಧಾರಣೆಯ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳ ಸತ್ವಪೂರ್ಣ ಸಂದೇಶವಿದ್ದು ಅದರ ಅನುಷ್ಠಾನದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸುತ್ತದೆ. ರಾಜ್ಯದ ವಿವಿಧ ಕಡೆಗಳಲ್ಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿಕ್ಷೇಪಗಳ ಅಧ್ಯಯನ ಮತ್ತು ಸಂಶೋಧನೆ ಮಾಡಬೇಕು ಎಂದು ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು. ಅವರು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ “ತತ್ವಪದಗಳು-ಸಾಂಸ್ಕೃತಿಕ ಅನುಸಂಧಾನ” ಎಂಬ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನತೆಗೆ ಹಾಗೂ ಜನಸಾಮಾನ್ಯರಿಗೆ ತತ್ವಪದಗಳ ಸಾರ್ವಕಾಲಿಕ ಮೌಲ್ಯ ಹೊಂದಿರುವ ಸಂದೇಶಗಳನ್ನು ತಿಳಿಸಬೇಕು ಎಂದು ಅವರು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ್ ಮಾತನಾಡಿ ತತ್ವಪದಗಳ ಸಾರವನ್ನು ತಿಳಿಯುವುದರಿಂದ ಸಮಾಜದಲ್ಲಿರುವ ಅಸಮಾನತೆ, ಅಂಕುಡೊಂಕು ಹಾಗೂ ಬೇಧಭಾವ ನಿವಾರಣೆಯಾಗಿ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸಂಕುಚಿತ ಮನೋಭಾವ ದೂರವಾಗುತ್ತದೆ ಎಂದು ಹೇಳಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್ ಬಿ.ಎ. ಅಂತಿಮ ಪದವಿ ತರಗತಿಯ ವಿದ್ಯಾರ್ಥಿಗಳು ರಚಿಸಿದ “ಭಿತ್ತಿಪತ್ರಿಕೆ” ಯನ್ನು ಅನಾವರಣಗೊಳಿಸಿದರು. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಹಿರಿಯ ಅಧಿಕಾರಿ ಸತ್ಯನಾರಾಯಣ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ .ಬಿ.ಎ. ಕುಮಾರ ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬೋಜಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿಚಾರಸಂಕಿರಣದ ಸಂಚಾಲಕ ಪ್ರೊ. ನಾಗಣ್ಣ ಡಿ.ಎ. ಧನ್ಯವಾದವಿತ್ತರು. ಕನ್ನಡ ಉಪನ್ಯಾಸಕಿ ಭವ್ಯಶ್ರೀ ಬಳ್ಳಾಲ್ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳದಲ್ಲಿ ರುದ್ರಪಾರಾಯಣ

Article Image

ಧರ್ಮಸ್ಥಳದಲ್ಲಿ ರುದ್ರಪಾರಾಯಣ

ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶುಕ್ರವಾರ ಶ್ರೀ ರಾಮಚಂದ್ರಾಪುರ ಮಠದ ಪೂಜ್ಯ ರಾಘವೇಶ್ವರಭಾರತಿ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ಹವ್ಯಕ ಮಹಾಮಂಡಲದ 550ಕ್ಕೂ ಮಿಕ್ಕಿದ ಶಿಷ್ಯ ವೃಂದದವರು ಹಾಗೂ ವಿದ್ವಾಂಸರು ಧರ್ಮಸ್ಥಳ ಬಂದು ಪವಿತ್ರ ತೀರ್ಥ ಕ್ಷೇತ್ರ ಹಾಗೂ ಹೆಗ್ಗಡೆಯವರ ಬಗ್ಯೆ ಇರುವ ಅಪಪ್ರಚಾರ ಮತ್ತು ಗೊಂದಲ ಸುಲಲಿತವಾಗಿ ನಿವಾರಣೆಯಾಗಿ ಮನಃಶಾಂತಿ, ನೆಮ್ಮದಿ ನೆಲೆಸಲಿ ಎಂದು ದೇವಸ್ಥಾನದಲ್ಲಿ ರುದ್ರಾನುಷ್ಠಾನ ಸಮರ್ಪಣೆ ಬಳಿಕ ಪ್ರವಚನ ಮಂಟಪದಲ್ಲಿ ರುದ್ರಪಾರಾಯಣ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದರು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಯಸ್ಸಿನಲ್ಲಿ ಕಿರಿಯವರಾದರೂ ಜ್ಞಾನವೃದ್ಧರಾಗಿದ್ದು, ವಿಶೇಷ ನಾಯಕತ್ವದ ಲಕ್ಷಣ ಹೊಂದಿದ್ದಾರೆ. ತಮ್ಮ ಮೇಲೆ ಹಾಗೂ ಧರ್ಮಸ್ಥಳದ ಬಗ್ಯೆ ಅಪಾರ ಪ್ರೀತಿ-ವಿಶ್ವಾಸ, ಗೌರವ ಹೊಂದಿರುವ ಪೂಜ್ಯರ ಆಶೀರ್ವಾದಗಳಿಂದ ಕಷ್ಟದಿಂದ ಪಾರಾಗಿ ಕೊನೆಗೆ ಜಯಸಿಗಬಹುದು ಎಂದು ಹೆಗ್ಗಡೆಯವರು ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮನೂ, ರಾವಣನಿಂದ ಹಿಂಸೆ ಅನುಭವಿಸಿ ಕೊನೆಗೆ ಜಯಶೀಲನಾದ. ಪೂಜ್ಯರ ಪರವಾಗಿ ಶಿಷ್ಯರು, ವಿದ್ವಾಂಸರೆಲ್ಲ ಧರ್ಮಸ್ಥಳಕ್ಕೆ ಬಂದು ಆಶೀರ್ವಾದ ಮಾಡಿ ಗೌರವಿಸಿರುವುದಕ್ಕೆ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪ್ರಾರ್ಥಿಸಿ, ಶುಭ ಹಾರೈಸಿದರು. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರನ್ನು ಗೌರವಿಸಲಾಯಿತು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಶ್ರೀಮಠದ ವೈದಿಕ ವಿದ್ವಾಂಸರಿಂದ ವಿಪ್ರಾಶೀರ್ವಾದ ನಡೆಯಿತು. ಹವ್ಯಕ ಮಹಾಮಂಡಲದ ಅಧ್ಯಕ್ಷ ಪಳ್ಳತ್ತಡ್ಕ ಶಂಕರನಾರಾಯಣ ಭಟ್ ಅವರನ್ನು ಹೆಗ್ಗಡೆಯವರು ಗೌರವಿಸಿದರು. ರಾಮಚಂದ್ರಾಪುರ ಮಠದ ಶಾಸ್ತ್ರಿಗಳಾದ ಸುಚೇತನ ಶಾಸ್ತ್ರಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಾತೃವಿಭಾಗದ ಅಧ್ಯಕ್ಷರಾದ ದೇವಿಕಾ ಶಾಸ್ತ್ರಿ, ಈಶ್ವರಿ, ಉಜಿರೆಯ ಶಾಮಭಟ್ ಅತ್ತಾಜೆ ಮತ್ತು ಕೇಶವ ಅತ್ತಾಜೆ ಮೊದಲಾದವರು ಉಪಸ್ಥಿತರಿದ್ದರು.

ಭರತನಾಟ್ಯದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಬಿ.ಎಸ್. ವಿಶಿಷ್ಟ ಸಾಧನೆ

Article Image

ಭರತನಾಟ್ಯದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಬಿ.ಎಸ್. ವಿಶಿಷ್ಟ ಸಾಧನೆ

ಕರ್ನಾಟಕದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮುಖಾಂತರ ಇತ್ತೀಚೆಗೆ ನಡೆದ ಭರತನಾಟ್ಯದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 2025 ನೇ ಜೂನ್ ತಿಂಗಳಲ್ಲಿ ವಿಶ್ವವಿದ್ಯಾನಿಲಯವು ಸಂಗೀತ ನೃತ್ಯ ಮತ್ತು ತಾಳ ವಾದ್ಯಗಳ ವಿವಿಧ ಹಂತಗಳ ಪರೀಕ್ಷೆಗಳನ್ನು ನಡೆಸಿತ್ತು. ಇವುಗಳಲ್ಲಿ ಭರತನಾಟ್ಯದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉಜಿರೆಯ ದೀಕ್ಷಾ ಬಿ.ಎಸ್. ಇವರು ಲಿಖಿತ ಮತ್ತು ಮೌಖಿಕ ಎರಡು ವಿಧದ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಅಂಕಗಳೊಂದಿಗೆ ಈ ವಿಶಿಷ್ಟ ಸಾಧನೆಗೆ ಭಾಜನರಾಗಿದ್ದಾರೆ. ಇವರು ಕಳೆದ ಹದಿನೈದು ವರ್ಷಗಳಿಂದ ಭರತನಾಟ್ಯ ಗುರುಗಳಾದ ವಿದುಷಿ ಸ್ವಾತಿ ಕಿರಣ್ ಮತ್ತು ವಿದುಷಿ ಪೃಥ್ವಿ ಕಿರಣ್ ಇವರ ಮಾರ್ಗದರ್ಶನದಲ್ಲಿ ಭರತನಾಟ್ಯವನ್ನು ಕಲಿಯುತ್ತಿದ್ದಾರೆ. ಈ ಹಿಂದೆಯೂ ಭರತನಾಟ್ಯದ ಜೂನಿಯರ್, ಸೀನಿಯರ್ ಮತ್ತು ವಿದ್ವತ್ ಪೂರ್ವ ಪರೀಕ್ಷೆಗಳಲ್ಲಿಯೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ. ದೀಕ್ಷಾ ಬಿ.ಎಸ್. ಪ್ರಸ್ತುತ ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ (Regional Institute of Education) ಎಂ.ಎಸ್.ಸಿ.ಎಡ್. ಎಂಬ ಅಧ್ಯಯನವನ್ನು ಮಾಡುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಾಲೀಗದ್ದೆಯವರಾದ ಇವರು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ. ಶ್ರೀಧರ ಭಟ್ ಮತ್ತು ಸರಕಾರಿ ಪ್ರೌಢಶಾಲೆ ಹಳೆಪೇಟೆ, ಉಜಿರೆಯ ಗಣಿತ ಶಿಕ್ಷಕಿ ವೀಣಾ ಶ್ಯಾನಭಾಗ್ ದಂಪತಿಯ ಸುಪುತ್ರಿ.

ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ

Article Image

ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ

ಮೂಡುಬಿದಿರೆ: ಸೂಕ್ಷ್ಮಜೀವಿಗಳನ್ನು ಕೇವಲ ರೋಗಕಾರಕರೆಂದು ನೋಡುವ ಬದಲು, ಅವು ಪ್ರಕೃತಿಯ ಸಮತೋಲನ ಮತ್ತು ಮಾನವ ಬದುಕಿಗೆ ನೀಡುವ ಕೊಡುಗೆಯನ್ನು ಅರ್ಥಮಾಡಿಕೊಂಡಾಗ ಮಾತ್ರ ನಾವು ಆರೋಗ್ಯಕರ ಹಾಗೂ ಸಮೃದ್ಧ ಸಮಾಜವನ್ನು ಕಟ್ಟಬಹುದು ಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ದಿವ್ಯಶ್ರೀ ಎಂ.ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ ಅಂಗವಾಗಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಪನ್ಯಾಸದಲ್ಲಿ ಸೂಕ್ಷ್ಮಜೀವಿಗಳಿಂದ ಪಡೆಯಬಹುದಾದ ಅನೇಕ ಉಪಯೋಗಗಳ ಕುರಿತಂತೆ ವಿವರಿಸಿದರು. ಸಾಮಾನ್ಯವಾಗಿ ಸೂಕ್ಷ್ಮಜೀವಿಗಳನ್ನು ಕೇಳಿದಾಗ ಅನೇಕರು ರೋಗಗಳೊಂದಿಗೆ ಅವುಗಳನ್ನು ಸಂಬಂಧಿಸುತ್ತಾರೆ. ನಿಜಕ್ಕೂ ಕೆಲವೆಡೆ ಸೂಕ್ಷ್ಮಜೀವಿಗಳು ಅಪಾಯಕಾರಿ, ಆದರೆ ಅದಕ್ಕಿಂತ ಹೆಚ್ಚಿನವು ಮಾನವನ ಬದುಕಿಗೆ ಅತ್ಯಗತ್ಯವಾದವುಗಳೇ ಆಗಿವೆ. ನಮ್ಮ ಕರುಳಿನಲ್ಲಿ ಕೋಟ್ಯಾಂತರ ಸೂಕ್ಷ್ಮಜೀವಿಗಳು ವಾಸಿಸುತ್ತಿದ್ದು, ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುತ್ತವೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕರ ಜೀವನಕ್ಕೆ ನೆರವಾಗುತ್ತವೆ. ದೈನಂದಿನ ಜೀವನದಲ್ಲಿ ಹಾಲಿನ ಉತ್ಪನ್ನಗಳು – ಮೊಸರು, ಚೀಸ್, ಬೆಣ್ಣೆ ಮುಂತಾದವುಗಳ ತಯಾರಿಕೆಯಲ್ಲಿ ಸೂಕ್ಷ್ಮಜೀವಿಗಳೇ ಪ್ರಮುಖ ಪಾತ್ರವಹಿಸುತ್ತವೆ. ಕೃಷಿ ಕ್ಷೇತ್ರದಲ್ಲಿ ನೈಟ್ರೋಜನ್ ಸ್ಥಿರೀಕರಣ ಮಾಡುವ ಬ್ಯಾಕ್ಟೀರಿಯಾಗಳು ಬೆಳೆ ಉತ್ಪಾದನೆ ಹೆಚ್ಚಿಸಲು ಸಹಕರಿಸುತ್ತವೆ. ಪರಿಸರದಲ್ಲಿ ಜೀವಾವಶೇಷಗಳನ್ನು ಅಳಿಸಿ ಪ್ರಕೃತಿಯ ಚಕ್ರವನ್ನು ನಿರಂತರವಾಗಿಸುವುದು ಸಹ ಸೂಕ್ಷ್ಮಜೀವಿಗಳ ಕೆಲಸ. ಹವಾಮಾನ ಬದಲಾವಣೆ ನಿಯಂತ್ರಣ, ನವೀಕರಿಸಬಹುದಾದ ಶಕ್ತಿ ಉತ್ಪಾದನೆ, ಜೈವಿಕ ಗೊಬ್ಬರ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿಯೂ ಸೂಕ್ಷ್ಮಜೀವಿಗಳ ಕೊಡುಗೆ ಅನನ್ಯ ಎಂದರು ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ರಮ್ಯಾ ರೈ ಎಂ. ಹಾಗೂ ಉಪನ್ಯಾಸಕಿ ಚೈತ್ರಾ ಇದ್ದರು. ಬಿಎಸ್ಸಿ ವಿದ್ಯಾರ್ಥಿನಿ ಬೃಂದಾ ಸ್ವಾಗತಿಸಿ, ವೈಷ್ಣವಿ ಅತಿಥಿಯನ್ನು ಪರಿಚಯಿಸಿ, ಫಾತಿಮಾ ಶಿಫ್ನಾ ವಂದಿಸಿ, ವೃದ್ಧಿ ಕೇಳ ನಿರೂಪಿಸಿದರು.

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಿಂದ ಉಪನ್ಯಾಸ

Article Image

ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಿಂದ ಉಪನ್ಯಾಸ

ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್ ಪಿ. ಇವರು ಪುದುಚೇರಿಯ ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆ.29ರಿಂದ 31 ರವರೆಗೆ ನಡೆದ ದಕ್ಷಿಣ ಭಾರತೀಯ ರಾಜ್ಯಗಳ ಮೂಳೆಚಿಕಿತ್ಸಾ ಸಂಘದ 24ನೇ ವಾರ್ಷಿಕ ಸಮ್ಮೇಳನ ಓಯಸಿಸ್ಕಾನ್- 2025 ಇದರಲ್ಲಿ ಪಾದದ ಮೂಳೆಗಳ ಮುರಿತದ ಗಾಯಗಳ ಅತ್ಯಾಧುನಿಕ ಚಿಕಿತ್ಸೆಗಳ ಕುರಿತು ಪ್ರಮುಖ ಉಪನ್ಯಾಸ ನೀಡಿದರು. ದಕ್ಷಿಣ ಭಾರತದ ರಾಜ್ಯಗಳ ಹೆಸರಾಂತ ಪ್ರಮುಖ ಮೂಳೆಚಿಕಿತ್ಸಾ ತಜ್ಞರ ಕೂಡುವಿಕೆಯಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ಮೂಳೆಚಿಕಿತ್ಸೆಯಲ್ಲಿ ಉಂಟಾಗುವ ತೊಡಕುಗಳು ಮತ್ತು ಅದರ ನಿವಾರಣೆಯ ಕುರಿತು ತಜ್ಞ ವೈದ್ಯರುಗಳು ಉಪನ್ಯಾಸ ನೀಡುತ್ತಾರೆ. ಈ ಸಮ್ಮೇಳನದಲ್ಲಿ ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾಗಿರುವ, ಫೂಟ್ ಅಂಡ್ ಆಂಕ್ಲ್ ಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಪಾದ ಮತ್ತು ಪಾದದ ಮಣಿಗಂಟು ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ, ಡಾ. ಪ್ರತೀಕ್ಷ್. ಪಿ ಇವರು ಉಪನ್ಯಾಸ ನೀಡಿದರು. ಇವರು ಈಗಾಗಲೇ ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಕ್ರಪಾದ ಹೊಂದಿರುವ, ನಡೆದಾಡಲು ಕಷ್ಟಪಡುತ್ತಿದ್ದ ಮಗುವಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಮಗು ಸ್ವತಂತ್ರವಾಗಿ ನಡೆದಾಡುವಂತೆ ಮಾಡುವ ಮೂಲಕ ಮಗುವಿನ ಪೋಷಕರಲ್ಲಿ ಸಂತೋಷ ತುಂಬಿದ ಇವರು ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮೆಚ್ಚುಗೆ ಪಾತ್ರರಾಗಿದ್ದರು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು. ಡಾ ಪ್ರತೀಕ್ಷ್ ಪಿ. ಇವರು ಈ ಸಮ್ಮೇಳನದಲ್ಲಿ ಪಾದದ ಮೂಳೆಗಳ ಮುರಿತದ ಗಾಯಗಳ ಅತ್ಯಾಧುನಿಕ ಚಿಕಿತ್ಸೆಗಳ ಕುರಿತು ಪ್ರಮುಖ ಉಪನ್ಯಾಸ ನೀಡಲು ಸಂಘದಿಂದ ಆಹ್ವಾನಿಸಲ್ಪಟ್ಟಿದ್ದರು. ಪಾದದ ಮಧ್ಯದಲ್ಲಿರುವ ಅನೇಕ ಕೀಲುಗಳ ಮತ್ತು ಮೂಳೆಗಳ ಮುರಿತದಿಂದ ಅಥವಾ ಮಧ್ಯದ ಪಾದವನ್ನು ಬೆಂಬಲಿಸುವ ಅಸ್ಥಿರಜ್ಜುಗಳು ಹರಿದು ಗಾಯ ಉಂಟಾಗುವುದು. ಮುಂದೆ ಇದೇ ಗಾಯಗಳು ಸಂಕೀರ್ಣ ಸಮಸ್ಯೆಯಾಗಿ ಬದಲಾಗುವುದು ಮತ್ತು ಇವುಗಳಿಗೆ ಇರುವ ಅತ್ಯಾಧುನಿಕ ಚಿಕಿತ್ಸಾ ಪದ್ಧತಿಗಳ ಬಗ್ಗೆ ಇವರು ಈ ಸಮ್ಮೇಳನದಲ್ಲಿ ಪ್ರಮುಖ ಮಹತ್ವದ ಮಾಹಿತಿ ನೀಡಿದರು.

ಅರಿವಿನ ದೀವಿಗೆ ಉಪನ್ಯಾಸ ಮಾಲೆ ಕಾರ್ಯಕ್ರಮ

Article Image

ಅರಿವಿನ ದೀವಿಗೆ ಉಪನ್ಯಾಸ ಮಾಲೆ ಕಾರ್ಯಕ್ರಮ

ಉಜಿರೆ, ಸೆ.16: ವಿಶ್ವಮನ್ನಣೆ ಪಡೆದ ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳ ಮೂಲಕ ಮಹತ್ವದ ವಿಚಾರಗಳನ್ನು ತಿಳಿದುಕೊಂಡು ಕನ್ನಡದ ಅಂತಃಸತ್ವ ಹೆಚ್ಚಿಸುವುದಕ್ಕೆ ಕನ್ನಡಿಗರು ಆದ್ಯತೆ ನೀಡಬೇಕು ಎಂದು ಕನ್ನಡದ ನಿವೃತ್ತ ಪ್ರಾಧ್ಯಾಪಕ, ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ. ಧ. ಮಂ ಕಾಲೇಜಿನ ಕನ್ನಡ ವಿಭಾಗವು ಹೇಮಾವತಿ. ವಿ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಪ್ರಯೋಜಕತ್ವದಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಮಂಗಳವಾರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ "ಅರಿವಿನ ದೀವಿಗೆ" ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ "ಕನ್ನಡವೆಂಬ ಭಾವಸಂಪತ್ತು" ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಎಂದರೆ ಕೇವಲ ಮನಸ್ಸಿನ ಭಾವನೆ ಹೊರಹಾಕುವ ಒಂದು ಭಾಷೆಯಷ್ಟೇ ಅಲ್ಲ. ಕನ್ನಡ ಮಾತನಾಡುವವರು ಈ ಭಾಷೆಯೊಂದಿಗೆ ರೂಪಿಸಿಕೊಳ್ಳುವ ಸಾಂಗತ್ಯ ವಿಶೇಷವಾದುದು. ಈ ಬಗೆಯ ಭಾಷಿಕ ಸಾಂಗತ್ಯವು ಬೇರೆ ಯಾವ ಭಾಷೆಗೂ ಇಲ್ಲ. ಸಾಮಾಜಿಕ ಸ್ಥಾನಮಾನ ಗಳಿಸಿಕೊಳ್ಳುವ ಸಂದರ್ಭದಲ್ಲಿ ಮಾತೃಭಾಷೆಯಾಗಿ ಕನ್ನಡವು ಪ್ರಮುಖ ಪಾತ್ರವಹಿಸುತ್ತದೆ. ಕನ್ನಡವೇ ಕಣ್ಣಾಗಿ ಕಿವಿಯಾಗಿ ಜಗತ್ತನ್ನು ವಿಭಿನ್ನವಾಗಿ ಗ್ರಹಿಸುವುದಕ್ಕೆ ನೆರವಾಗುತ್ತದೆ ಎಂದರು. ಆಚಾರ್ಯ ವಿನೋಬಾ ಭಾವೆ ಅವರು ಕನ್ನಡವನ್ನು "ವಿಶ್ವ ಲಿಪಿಗಳ ರಾಣಿ" ಎಂದು ವರ್ಣಿಸಿದ್ದಾರೆ. ಇಂಗ್ಲಿಷ್ ಭಾಷೆ ಇಂದು ಜಾಗತಿಕ ಭಾಷೆಯಾಗಿದ್ದರೂ ಕೂಡ ಕನ್ನಡಿಗರೂ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳವರಿಗೆ ಅವರವರ ಮಾತೃಭಾಷೆಯೇ ಶ್ರೇಷ್ಠವಾಗಿರುತ್ತದೆ. ಮಾತೃಭಾಷೆಯೊಂದಿಗೆ ಸಾಧ್ಯವಾಗುವ ಆಪ್ತ ಸಾಂಗತ್ಯ ಇಂಗ್ಲೀಷ್ ಸೇರಿದಂತೆ ಅನ್ಯದೇಶಿ ಭಾಷೆಗಳೊಂದಿಗೆ ಸಾಧ್ಯವಾಗುವುದಿಲ್ಲ. ಜಗತ್ತಿನ ಹಲವಾರು ವಿಚಾರಗಳನ್ನು ಹೊತ್ತುತರುವ ಇಂಗ್ಲಿಷ್ ಭಾಷೆಗೆ ಹಿತಮಿತವಾಗಿ ಆದ್ಯತೆ ನೀಡಿ ಕನ್ನಡದ ಸತ್ವವನ್ನು ಹೆಚ್ಚಿಸಬಹುದು ಎಂದು ಹೇಳಿದರು. ಜೀವಂತಿಕೆಯೊಂದಿಗಿನ ವ್ಯಕ್ತಿತ್ವಗಳು ಬದುಕಿನಲ್ಲಿ ಹೊಸ ಅಲೆಯನ್ನು ಸೃಷ್ಟಿಸುತ್ತಾರೆ. ಆ ವ್ಯಕ್ತಿತ್ವಗಳು ಇಲ್ಲವಾದಾಗ ಅವರ ವೈಶಿಷ್ಟ್ಯತೆಯು ಸ್ಮೃತಿಪಟಲದಲ್ಲಿ ಶಾಶ್ವತವಾಗಿ ಉಳಿದಿರುತ್ತದೆ. "ಅರಿವಿನ ದೀವಿಗೆ" ಕಾರ್ಯಕ್ರಮದ ಪ್ರೇರಕ ಶಕ್ತಿ ಡಾ.ಬಿ.ಯಶೋವರ್ಮ ಅಂಥ ವ್ಯಕ್ತಿತ್ವ. ಅವರೀಗ ಇಲ್ಲದಿದ್ದರೂ ಅವರ ವ್ಯಕ್ತಿತ್ವಕ್ಕಿದ್ದ ಆಕರ್ಷಣೀಯ ಅಸ್ಮಿತೆ ಶಾಶ್ವತವಾಗಿ ನೆಲೆಯೂರಿದೆ ಎಂದು ನೆನಪಿಸಿಕೊಂಡರು. ಆದರ್ಶದೊಂದಿಗೆ ಬದುಕಬೇಕು. ಇಲ್ಲದೇ ಹೋದರೆ ಹೇಗೆ ಬದುಕಿದ್ದೇವೆ ಎನ್ನುವುದಕ್ಕೆ ಸಮರ್ಥನೆಯ ಪುರಾವೆಯೇ ಸಿಗುವುದಿಲ್ಲ. ಸಮರ್ಥನೀಯ ಪುರಾವೆ ಹುಡುಕಾಡುವುದಕ್ಕೆ ಕಷ್ಟಪಡಬೇಕಾಗುತ್ತದೆ. ಆದರ್ಶ ಮೌಲ್ಯಗಳೊಂದಿಗಿನ ಬದುಕು ಸಮರ್ಥನೀಯ ಎನ್ನಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಸೋನಿಯಾ ಯಶೋವರ್ಮ ಮಾತನಾಡಿದರು. ಯಶೋವರ್ಮರು ಕೃಷ್ಣೇಗೌಡರ ದೊಡ್ಡ ಅಭಿಮಾನಿಯಾಗಿದ್ದರು. ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಅವರ ಹರಟೆ ಕಾರ್ಯಕ್ರಮವನ್ನು ತಪ್ಪದೇ ವೀಕ್ಷಿಸುತ್ತಿದ್ದರು. ಇದರ ಜೊತೆಗೆ ಅವರು ತುಂಬಾ ಪುಸ್ತಕ ಪ್ರಿಯರಾಗಿದ್ದರು. ಧರ್ಮ, ಚರಿತ್ರೆ ಸೇರಿದಂತೆ ವಿವಿಧ ವಲಯಗಳ ಕುರಿತ ಮಹತ್ವದ ಪುಸ್ತಕಗಳನ್ನು ಓದುತ್ತಿದ್ದರು ಎಂದರು. ಅಧ್ಯಕ್ಷತೆ ವಹಿಸಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ ಮಾತನಾಡಿದರು. ಕಾಲೇಜಿನ ಸಮಗ್ರ ಬೆಳವಣಿಗೆಗೆ ಬೇಕಾದ ಶಿಸ್ತುಬದ್ಧ ಆಡಳಿತ ಕ್ರಮ, ಹಸಿರು ಚಿಂತನೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಸಂಬಂಧಿತ ಹೆಜ್ಜೆಗಳೊಂದಿಗೆ ಡಾ. ಬಿ.ಯಶೋವರ್ಮ ಹೆಗ್ಗುರುತು ಮೂಡಿಸಿದ್ದರು ಎಂದು ತಿಳಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಭವ್ಯಶ್ರೀ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜಕ ಡಾ.ನಾಗಣ್ಣ ಡಿ.ಎ. ವಂದಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

ಪ್ರತಿಷ್ಟಿತ ಕೆನರಾ ಬ್ಯಾಂಕಿನ ಕೇಂದ್ರ ಕಛೇರಿಯ ಎಫ್.ಐ ವಿಂಗ್ ಜನರಲ್ ಮ್ಯಾನೇಜರ್ ಎಂ. ಭಾಸ್ಕರ ಚಕ್ರವರ್ತಿ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸೆ.13ರಂದು ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರು ಸ್ವಾಗತಿಸಿ ಬರಮಾಡಿಕೊಂಡರು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿ ತಾನು ಭೇಟಿ ನೀಡಿದಾಗ ಇದ್ದ ತಜ್ಞ ವೈದ್ಯರ ಸಂಖ್ಯೆ, ಸಿಬ್ಬಂದಿಗಳ ಸಂಖ್ಯೆ, ರೋಗಿಗಳ ಸಂಖ್ಯೆ ಈ ಬಾರಿ ಎಲ್ಲವೂ ಹೆಚ್ಚಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಸೇವೆ ಕೂಡ ವಿಸ್ತಾರಗೊಳ್ಳುತ್ತಿದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಿತದರದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸಿದ ಅವರು ಕೇಂದ್ರ ಸರಕಾರದ ಹಲವಾರು ಉಳಿತಾಯ ಮತ್ತು ವಿಮಾ ಯೋಜನೆಗಳ ವಿವರ ನೀಡುತ್ತಾ, ಪ್ರತಿಯೊಬ್ಬರೂ ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವ ಅಗತ್ಯವಿದೆ ಎಂದರು. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಮಾತನಾಡುತ್ತಾ, ಈ ಆಸ್ಪತ್ರೆಗೆ ಕೆನರಾ ಬ್ಯಾಂಕಿನಿಂದ ಕಳೆದ ವರ್ಷ ನೀಡಲ್ಪಟ್ಟ 10ಲಕ್ಷ ರೂಪಾಯಿಗಳ ವಿಶೇಷ ದೇಣಿಗೆಯನ್ನು ಸ್ಮರಿಸಿದರು. ಈ ಹಣದಲ್ಲಿ ಕಾರ್ಡಿಯಾಕ್ ಮೋನಿಟರ್ ಮತ್ತು ಸಿರಿಂಜ್ ಪಂಪು ಖರೀದಿಸಿದ್ದು, ಇದು ರೋಗಿಗಳ ತುರ್ತುಚಿಕಿತ್ಸೆಗೆ ಬಹಳ ಸಹಕಾರಿಯಾಗಿದೆ ಎಂದರು. ವೈದ್ಯಕೀಯ ಸೇವೆಗಳನ್ನು ವಿವರಿಸಿದ ಅವರು ಇಲ್ಲಿ ನುರಿತ ತಜ್ಞ ವೈದ್ಯರ ತಂಡವಿದ್ದು, ಹಲವಾರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಿತದರದಲ್ಲಿ ನಡೆಸಲಾಗುತ್ತಿದೆ. ಮೊಣಕಾಲು, ಸೊಂಟದಕೀಲುಗಳ ಬದಲಿ ಶಸ್ತ್ರಚಿಕಿತ್ಸೆಗಳಂತಹ ದುಬಾರಿ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮಾಡಲಾಗುತ್ತಿದೆ. ಶೀಘ್ರದಲ್ಲಿ ಎಂ.ಆರ್.ಐ ಸೇವೆ ಕೂಡ ದೊರೆಯಲಿದೆ ಎಂದರು. ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ಮೂಡುಬಿದಿರೆ: ಎಕ್ಸಲೆಂಟ್ ಚಾಂಪಿಯನ್

Article Image

ಮೂಡುಬಿದಿರೆ: ಎಕ್ಸಲೆಂಟ್ ಚಾಂಪಿಯನ್

ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್‌ ಕುಮಾರ್ ಶೆಟ್ಟಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್‌ ಕಾಲೇಜಿನಲ್ಲಿ ನಡೆದ ಅಂಡರ್ -19, ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು. ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ನವೀನ್ ಎಂ.ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ ವಿಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್‌ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

Article Image

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದೇ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಪ್ರೀತೇಶ್ ಇವರು ಉತ್ತಮ ರೈಡರ್ ಆಗಿ ವಿದ್ಯಾರ್ಥಿ ಶರಣ್ ಅವರು ಉತ್ತಮ ಡಿಪೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

Article Image

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದೇ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಶ್ರೀಶಾಂತ್ ಇವರು ಉತ್ತಮ ಆಲ್ ರೌಂಡರ್ ಆಗಿ ವಿದ್ಯಾರ್ಥಿ ಧನುಷ್ ಅವರು ಉತ್ತಮ ಸೆಟ್ಟರ್ ಆಗಿ ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ

Article Image

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕರ- ಬಾಲಕಿಯರ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್‌ಡಿಪಿಟಿ ಪಿಯು ಕಾಲೇಜು ಕಟೀಲು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗ ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು 5 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 18ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ಅಮರೇಶ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಅಶ್ವಿನ್ ಪಡೆದರು. ಬಾಲಕಿಯರ ವಿಭಾಗ ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ ಡಿ ಪಿ ಟಿ ಪಿಯು ಕಾಲೇಜು ಕಟೀಲು ತಂಡವನ್ನು 8 ಅಂಕಗಳು ಹಾಗೂ ಇನ್ನಿಂಗ್ಸ್ನೊಂದಿಗೆ ಮಣಿಸಿ 16ನೇ ಬಾರಿ ಜಯಶಾಲಿಯಾಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಸಿಂಧುಜಾ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಮೋನಿಕಾ ಪಡೆದರು.

ಉಜಿರೆ: ಫಿಸಿಯೋಥೆರಪಿ ಶಿಬಿರ

Article Image

ಉಜಿರೆ: ಫಿಸಿಯೋಥೆರಪಿ ಶಿಬಿರ

ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು. ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತ್ರಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Article Image

ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ನಡೆದ ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಂಗಳೂರು ಶ್ರೀ ಶಾರದಾ ಪ.ಪೂ ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪ.ಪೂ ಕಾಲೇಜಿನ ಶ್ರೀನಿವಾಸ ಮಧ್ಯಸ್ಥ, ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅಂಬರೀಷ ಚಿಪ್ಲೂಣಕರ, ಸುರತ್ಕಲ್ ಗೋವಿಂದದಾಸ ಪ.ಪೂ ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ಡಾ. ಸುರೇಖಾ ತಂತ್ರಿ, ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪ.ಪೂ ಕಾಲೇಜಿನ ಶೈಲಜಾ ಹೆಚ್. ಎಸ್., ಮೂಡುಬಿದ್ರೆ ಆಳ್ವಾಸ್ ಪ.ಪೂ ಕಾಲೇಜಿನ ಅನಂತ ಭಟ್, ಕಲ್ಲಡ್ಕದ ಶ್ರೀರಾಮ ಪ.ಪೂ ಕಾಲೇಜಿನ ಮಹೇಂದ್ರ ಭಟ್, ಸಂಘಟನಾ ಕಾರ್ಯದರ್ಶಿಯಾಗಿ ಮೂಡುಬಿದ್ರೆಯ ಎಕ್ಸಲೆಂಟ್ ಪ.ಪೂ ಕಾಲೇಜಿನ ತೇಜಸ್ವಿ ಭಟ್ ಇವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಮಂಗಳೂರಿನ ಡಾ. ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ರವಿಶಂಕರ ಹೆಗಡೆ, ರಾಜ್ಯಮಟ್ಟದ ಸಂಘಕ್ಕೆ ಜಿಲ್ಲಾ ಸಂವಹನ ಪ್ರತಿನಿಧಿಯಾಗಿ ಪುತ್ತೂರಿನ ಸರಕಾರಿ ಪ.ಪೂ ಕಾಲೇಜಿನ ಪ್ರಕಾಶ್ ವಿ.ಕೆ. ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿಯ ಸದಸ್ಯರಾಗಿ ಮಂಗಳೂರು ಬೆಸೆಂಟ್ ಪ.ಪೂ ಕಾಲೇಜಿನ ಅಜಿತಾ, ಮಂಗಳೂರು ಕೆನರಾ ಪ.ಪೂ ಕಾಲೇಜಿನ ಡಾ. ಮಧುಕೇಶ್ವರ ಶಾಸ್ತ್ರಿ, ಮೂಡಬಿದ್ರೆ ಜೈನ್ ಪ.ಪೂ ಕಾಲೇಜಿನ ರಾಮಚಂದ್ರ ಭಟ್, ಅಳಿಕೆ ಸತ್ಯಸಾಯಿ ಲೋಕಸೇವಾ ಪ.ಪೂ ಕಾಲೇಜಿನ ವೆಂಕಟಕೃಷ್ಣ ಶರ್ಮಾ ಇವರು ಆಯ್ಕೆಯಾಗಿದ್ದಾರೆ.

ಸುಲೋಚನಾ ಭಟ್ ನಿಧನ

Article Image

ಸುಲೋಚನಾ ಭಟ್ ನಿಧನ

ಪುತ್ತೂರು, ಆ. 28: ಸ್ವರ್ಣೋದ್ಯಮಿ ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ (71) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ಪುತ್ರರಾದ ಮುಳಿಯ ಜುವೆಲ್ಸನ ಸಿಎಂಡಿ ಕೇಶವ ಪ್ರಸಾದ್, ಎಂಡಿ ಕೃಷ್ಣ ನಾರಾಯಣ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉದ್ಯಮಿಯಾಗಿದ್ದ ಸುಲೋಚನಾ ಅವರು ಲಯನೆಸ್ ಮತ್ತು ರೋಟರಿ ಇನ್ನರ್‌ವೀಲ್ ಕ್ಲಬ್ ಮೂಲಕ ಸಮಾಜಸೇವಕಿಯಾಗಿ ಗುರುತಿಸಿಕೊಂಡಿದ್ದರು. ಮುಳಿಯ ಜುವೆಲ್ಲರ್ಸ್‌ನ ಎಲ್ಲಾ ಶಾಖೆಗಳು ಇಂದು (29 ಆಗಸ್ಟ್ ಶುಕ್ರವಾರ) ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಹಕರು ಗಮನಿಸಬೇಕಾಗಿ ವಿನಂತಿ.

ಧರ್ಮಸ್ಥಳದಲ್ಲಿ ಜ್ಞಾನಪಥ ಮತ್ತು ಜ್ಞಾನರಥ ಕೃತಿಗಳ ಲೋಕಾರ್ಪಣೆ

Article Image

ಧರ್ಮಸ್ಥಳದಲ್ಲಿ ಜ್ಞಾನಪಥ ಮತ್ತು ಜ್ಞಾನರಥ ಕೃತಿಗಳ ಲೋಕಾರ್ಪಣೆ

ಉಜಿರೆ: ನೈತಿಕಶಿಕ್ಷಣ ಪ್ರಸ್ತುತ ಸಮಾಜಕ್ಕೆ ತುರ್ತು ಅನಿವಾರ್ಯವಾಗಿದ್ದು ಪುಸ್ತಕಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಕಟಿಸಿದ “ಜ್ಞಾನಪಥ” ಮತ್ತು “ಜ್ಞಾನರಥ” ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜ್ಞಾನದೀವಿಗೆಯಾದ ಪುಸ್ತಕಗಳು ಉತ್ತಮ ಹಾಗೂ ಉಪಯುಕ್ತ ಜೀವನ ಸಂಗಾತಿಯಾಗಿದ್ದು, ನೈತಿಕ ಪುಸ್ತಕಗಳಲ್ಲಿರುವ ಲೇಖನಗಳು ಸಾರ್ಥಕ ಬದುಕಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುತ್ತವೆ ಎಂದು ಅವರು ಶ್ಲಾಘಿಸಿ ಅಭಿನಂದಿಸಿದರು. ಶ್ರೀ ಮಂಜುನಾಥ ಚಲನಚಿತ್ರ: ತಾನು ಬಾಲ್ಯದಿಂದಲೂ ಧರ್ಮಸ್ಥಳದ ಪರಮ ಭಕ್ತನಾಗಿದ್ದು ಕೆಲವು ವರ್ಷಗಳ ಹಿಂದೆ ಸುಮಾರು ಮೂರು ತಿಂಗಳು ಧರ್ಮಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಾಸ್ತವ್ಯ ಇದ್ದು, “ಶ್ರೀ ಮಂಜುನಾಥ” ಚಲನಚಿತ್ರ ನಿರ್ಮಾಣ ಮಾಡಿರುವ ಸವಿನೆನಪನ್ನು ಸ್ಮರಿಸಿದರು. ಧರ್ಮಸ್ಥಳಕ್ಕೆ ಬಂದು ಪ್ರಥಮವಾಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು “ಶ್ರೀ ಮಂಜುನಾಥ” ಚಲನಚಿತ್ರ ತಯಾರಿಸುವ ಬಗ್ಗೆ ಅನುಮತಿ ಕೋರಿದಾಗ ಬಹಳ ನಿರೀಕ್ಷೆಯಲ್ಲಿದ್ದ ಅವರಿಗೆ ಆಶ್ಚರ್ಯವಾಯಿತು. ಹೆಗ್ಗಡೆಯವರು ತಕ್ಷಣ ಮಂಜುನಾಥ ದೇವರನ್ನು ವ್ಯಾಪಾರೀಕರಣ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ಆದರೂ ದೇವರನ್ನು ಪ್ರಾರ್ಥಿಸಿ ತನ್ನ ದೃಢಸಂಕಲ್ಪ ನೆರವೇರಿಸಲು ಪ್ರಯತ್ನಿಸಿದರು. ಚಲನಚಿತ್ರ ನಿರ್ಮಾಣಕ್ಕೆ ಭಗೀರಥ ಪ್ರಯತ್ನ ಮಾಡಿದರು. ವಿಶೇಷವಾಗಿ ಜೈನಧರ್ಮದ ಬಗ್ಗೆ ವಿಶೇಷ ಗೌರವ, ಆದರ ಹೊಂದಿದ ಅವರು ಆಳವಾದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದರು. ಕನ್ನಡದ ಆದಿಕವಿ ಪಂಪನಿಂದ ಹಿಡಿದು ರನ್ನ, ಜನ್ನ, ಪೊನ್ನರ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಏಳು ಕೋಟಿ ರೂ. ವೆಚ್ಛದಲ್ಲಿ ತಯಾರಾದ ಚಲನಚಿತ್ರದಲ್ಲಿ ತಾನು ನಷ್ಟ ಅನುಭವಿಸಬೇಕಾಯಿತು ಎಂದು ಸಿಹಿ-ಕಹಿ ಅನುಭವವನ್ನು ನೆನಪಿಸಿಕೊಂಡರು. ಶುಭಾಶಂಸನೆ ಮಾಡಿದ ಚಲನಚಿತ್ರ ನಟ ದತ್ತಣ್ಣ (ದತ್ತಾತ್ರೇಯ ಎಚ್.ಡಿ.) ಮನೆಯ ವಾತಾವರಣದಿಂದಲೇ ಉತ್ತಮ ಸಂಸ್ಕಾರ ಮೂಡಿ ಬರಬೇಕು. ಜೀವ ದೊಡ್ಡದಲ್ಲ, ಜೀವನ ದೊಡ್ಡದು. ಮೊದಲು ನಾವು ಯಾರು ಎಂಬುದನ್ನು ಅರಿತುಕೊಂಡು, ನವಚೈತನ್ಯವನ್ನು ಹೊಂದಬೇಕು. ಸಜ್ಜನರ ಸತ್ಸಂಗ ಹಾಗೂ ಉತ್ತಮ ಪುಸ್ತಕಗಳನ್ನು ಓದುವುದರಿಂದ ಮಾನವೀಯ ಮೌಲ್ಯಗಳೊಂದಿಗೆ ಉತ್ತಮ ಸಂಸ್ಕಾರ ಮೂಡಿಬರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವಿದ್ಯಾರ್ಥಿಗಳು ದೇಶದ ಮುಂದಿನ ಜನಾಂಗವಾಗಿದ್ದು ಅವರ ಉಜ್ವಲ ಭವಿಷ್ಯ ರೂಪಿಸಲಿಕ್ಕಾಗಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಸ್ವಾಮಿ ವಿವೇಕಾನಂದರಂತೆ ಓದಿದ ಪುಸ್ತಕದ ಅನುಭವವನ್ನು ಬದುಕಿನಲ್ಲಿ ಅಳವಡಿಸಿದಾಗ ಜೀವನ ಪಾವನವಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿದ್ದು ಸಮಾಜದ ಅಮೂಲ್ಯ ಆಸ್ತಿಯಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ನೀಡಲಾಯಿತು. ಶಾರದಾಮಣಿಶೇಖರ್ ನೇತೃತ್ವದಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಸುಶ್ರಾವ್ಯ ಗಾಯನ ಮತ್ತು ನೃತ್ಯ ಪ್ರದರ್ಶನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ ಧನ್ಯವಾದವಿತ್ತರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ ಜೈನ್ ಸ್ವಾಗತಿಸಿದರು. ಪುದುವೆಟ್ಟು ಶಾಲಾ ಶಿಕ್ಷಕ ನಿಶಾಂತ್ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಕೃತಿ ಪರಂಪರೆಯ ಬೇರು ಸಂಸ್ಕೃತ - ಯುವರಾಜ ಜೈನ್

Article Image

ಸಂಸ್ಕೃತಿ ಪರಂಪರೆಯ ಬೇರು ಸಂಸ್ಕೃತ - ಯುವರಾಜ ಜೈನ್

ನಮ್ಮ ಭಾರತೀಯ ಸಂಸ್ಕೃತಿಯ ಗಾಢವಾದ ಬೇರು ಸಂಸ್ಕೃತ ಭಾಷೆಯಲ್ಲಿ ಅಡಕವಾಗಿದೆ. ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ನಾಡಿನ ಸಂಸ್ಕೃತಿ, ತತ್ತ್ವ, ಧರ್ಮ, ಸಾಹಿತ್ಯ, ಕಲೆ ಮತ್ತು ಜ್ಞಾನದ ನಿರಂತರ ಪ್ರಕಾಶ. ಇಂದು ನಾವು ಕಾಣುತ್ತಿರುವ ಜೀವನಮೌಲ್ಯಗಳು, ಶಿಷ್ಟಾಚಾರಗಳು, ಶ್ರೀಮಂತ ಕಲೆಗಳು, ಜ್ಞಾನದ ಹರವುಗಳೆಲ್ಲ ಸಂಸ್ಕೃತ ಸಾಹಿತ್ಯದಲ್ಲಿ ನೆಲೆ ನಿಂತಿವೆ. ಸಂಸ್ಕೃತ ಅಧ್ಯಯನ ಮಾಡಿದರೆ ನಾವೇ ನಮ್ಮ ಮೂಲಗಳಿಗೆ ಹತ್ತಿರವಾಗುತ್ತೇವೆ, ಜಗತ್ತಿನೊಂದಿಗೆ ನಿಂತು ಮಾತನಾಡುವ ಶಕ್ತಿಯನ್ನು ಪಡೆಯುತ್ತೇವೆ ಎಂದು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ  ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಸಂಸ್ಕೃತ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು  ಉದ್ಘಾಟಿಸಿ ಮಾತನಾಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ವಿದ್ವಾಂಸರು ಮಂಗಳೂರಿನ ವಾಸುದೇವ ಕಾರಂತರು ಮಾತನಾಡುತ್ತ ಗುರು ಎಂದರೆ ಕೇವಲ ಪಾಠ ಹೇಳುವವನು ಮಾತ್ರವಲ್ಲ. ಆತನು ವಿಷಯದಲ್ಲಿ ಆಳವಾದ ಜ್ಞಾನವನ್ನು ಹೊಂದಿರಬೇಕು. ಜ್ಞಾನವು ಕೇವಲ ಪುಸ್ತಕಗಳಲ್ಲಿ ಸೀಮಿತವಾಗದೆ, ಜೀವನದ ವಿವಿಧ ಕ್ಷೇತ್ರಗಳಲ್ಲಿ ಆಳವಾಗಿ ಅರ್ಥೈಸಿದಾಗ ಮಾತ್ರ ಅದು ಶಿಷ್ಯನಿಗೆ ಮಾರ್ಗದರ್ಶಕವಾಗುತ್ತದೆ. ನಿಜವಾದ ಗುರುವು ಸದಾ ಶಿಷ್ಯನ ಹಿತವನ್ನು ಮನಸ್ಸಿನಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಾನೆ. ವಿದ್ಯಾರ್ಥಿಯ ಮನಸ್ಸು ಅನೇಕ ವಿಚಾರಗಳಲ್ಲಿ ಅಲೆದಾಡುವುದು ಸಹಜ. ಇಂತಹ ಸಂದರ್ಭದಲ್ಲಿ ಶಿಷ್ಯನ ವಿಕ್ಷಿಪ್ತ ಮನಸ್ಸನ್ನು ನಿರ್ದಿಷ್ಟ ವಿಷಯದಲ್ಲಿ ನೆಲೆಗೊಳಿಸಿ, ಅಧ್ಯಯನದಲ್ಲಿ ಏಕಾಗ್ರತೆಯನ್ನು ಹುಟ್ಟಿಸುವುದು ಗುರುವಿನ ದೊಡ್ಡ ಹೊಣೆಗಾರಿಕೆ. ಇಂತಹ ಕಾರ್ಯವನ್ನು ನೆರವೇರಿಸಲು ಗುರುವು ಶಾಂತಿ, ಸಹನೆ ಮತ್ತು ತಾಳ್ಮೆಯನ್ನು ಹೊಂದಿರಬೇಕು ಎಂದು ಹಿತವಚನ ನುಡಿದರು. ಇದೇ ಸಂದರ್ಭದಲ್ಲಿ ಕಳೆದ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷ ರಮೇಶ ಆಚಾರ್ಯ ಸ್ವಾಗತಿಸಿ, ಉಪಾಧ್ಯಕ್ಷ ಡಾ. ಪ್ರಸನ್ನ ಕುಮಾರ್ ಐತಾಳ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮ ಸಂಯೋಜಕ ತೇಜಸ್ವೀ ಭಟ್ ನಿರೂಪಿಸಿ ಸಂಘದ ಕಾರ್ಯದರ್ಶೀ ಡಾ. ಮಧುಕೇಶ್ವರ ಶಾಸ್ತ್ರೀ ವಂದಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ

ಮೂಡುಬಿದಿರೆ: ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು. ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಗೈದು ಮಾತನಾಡಿದ ಅವರು, ಇಂದಿನ ಪೀಳಿಗೆಗೆ ಸ್ವಾತಂತ್ರ‍್ಯವೆಂದರೆ ಏನನ್ನಾದರೂ ಸಾಧಿಸುವ ಅವಕಾಶ ಎಂದು ಭಾಸವಾಗಬಹುದು, ಆದರೆ ನಮ್ಮ ಹಿರಿಯರು ಸರಿಯಾದ ಶಿಕ್ಷಣ ವೈದ್ಯಕೀಯ ಸೌಲಭ್ಯ ಮತ್ತು ಇನ್ನಿತರ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕಿದ್ದರು. ನಿಜವಾದ ಸ್ವಾತಂತ್ರ‍್ಯ ಎಂದರೆ ಅಭಿವೃದ್ಧಿ ಪ್ರತಿಯೊಬ್ಬರಿಗೂ ತಲುಪಿದಾಗ ಹಾಗೂ ಪ್ರತಿಯೊಬ್ಬರೂ ಈ ಅಗತ್ಯ ಸೌಲಭ್ಯಗಳನ್ನು ಪಡೆದಾಗ ಸಾಧ್ಯವಾಗುವುದು. ಸ್ವಾತಂತ್ರ‍್ಯ ಹೋರಾಟದಲ್ಲಿ ಹಿರಿಯರು ನೀಡಿದ ತ್ಯಾಗಗಳಿಗೆ ಗೌರವ ಸಲ್ಲಿಸಿದ ಅವರು, “ಆಧುನಿಕ ಭಾರತವನ್ನು ಒಬ್ಬ ವ್ಯಕ್ತಿ ಮಾತ್ರ ನಿರ್ಮಿಸಲು ಸಾಧ್ಯವಿಲ್ಲ,ಅದಕ್ಕೆ ಸಮೂಹ ಶ್ರಮ ಅಗತ್ಯ. ಶಿಕ್ಷಕರು ಕೇವಲ ವೃತ್ತಿಯಲ್ಲಿಲ್ಲ, ಸೇವೆಯಲ್ಲಿ ಇದ್ದು, ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತವನ್ನು ಕಟ್ಟುವವರಾಗಿದ್ದಾರೆ ಎಂದರು. ಇಂತಹ ಮೌಲ್ಯಯುತ ಶಿಕ್ಷಣ ಪಡೆದ ವಿಧ್ಯಾರ್ಥಿ ಸಮೂಹದಿಂದ ನವ ಭಾರತದ ನಿರ್ಮಾಣ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮೂಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ ಡಾ. ಗ್ರೀಷ್ಮಾ, ಡಾ.ಹನಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್: 222 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

Article Image

ಬೆಳ್ತಂಗಡಿ ರೋಟರಿ ಕ್ಲಬ್: 222 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಉಜಿರೆ: ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ತಮಗೆ ದೊರಕುವ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ಉತ್ತಮ ಸಂಸ್ಕಾರ ಹಾಗೂ ಗುರು-ಹಿರಿಯರಿಗೆ ಗೌರವ, ವಿನಯ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕೇನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿ.ಜಿ.ಎಂ. ಪ್ರಶಾಂತ್ ಜೋಶಿ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ರೋಟರಿ ಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಕೇನ್‌ಫಿನ್ ಹೋಮ್ಸ್ ಸಹಯೋಗದಲ್ಲಿ 222 ವಿದ್ಯಾರ್ಥಿಗಳಿಗೆ ಇಪ್ಪತ್ತು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು. ವಿದ್ಯಾರ್ಥಿವೇತನದ ಸದುಪಯೋಗ ಪಡೆದು ದೃಢಸಂಕಲ್ಪ ಮತ್ತು ಏಕಾಗ್ರತೆಯಿಂದ ಅಧ್ಯಯನ ಮಾಡಿ ವಿದ್ಯಾರ್ಥಿಗಳು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪುಗೊಳ್ಳಬೇಕು. ಮುಂದೆ ತಾವು ಸ್ವಾವಲಂಬಿ ಜೀವನ ನಡೆಸುವಾಗ, ತಾವು ಪಡೆದ ವಿದ್ಯಾರ್ಥಿವೇತನಕ್ಕಿಂತಲೂ ಹೆಚ್ಚಿನ ನೆರವನ್ನು ಇತರರಿಗೆ ನೀಡಬೇಕು ಎಂದು ಅವರು ಸಲಹೆ ನೀಡಿದರು. ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ, ಶುಭಾಶಂಸನೆ ಮಾಡಿ, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಸಾಮಾಜಿಕ ಪರಿವರ್ತನೆಯಾಗುತ್ತದೆ. ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಸದುಪಯೋಗ ಮಾಡಬೇಕು. ಸದಾ ನಗುಮೊಗದಿಒಂದ ಸಂಕಷ್ಟದಲ್ಲಿರುವವರಿಗೆ ಸಕಾಲಿಕ ನೆರವುನೀಡಿ ಅವರು ಸುಖ-ಶಾಂತಿ, ಸಂತೋಷದಿಂದ ಜೀವನ ಮಾಡುವಂತೆ ಸಹಕರಿಸಿ ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು. ಬೆಂಗಳೂರು ಇಂದಿರಾನಗರ ರೋಟರಿಕ್ಲಬ್‌ನ ಮಾಜಿ ಅಧ್ಯಕ್ಷರಾದ ಸುಪ್ರಿಯಾ ಖಾಂದಾರಿ ಮಾತನಾಡಿ, ವಿದ್ಯಾರ್ಥಿಗಳು ಮುಂದೆ ಜವಾಬ್ದಾರಿಯುತ ಆದರ್ಶ ನಾಯಕರಾಗಿ ಸಮಾಜ ಸೇವೆ ಮತ್ತು ದೇಶಸೇವೆ ಮಾಡಬೇಕು ಎಂದು ಹೇಳಿದರು. ಕೇನ್‌ಫಿನ್ ಹೋಮ್ಸ್‌ನ ಉಪಪ್ರಬಂಧಕಿ ಚಿತ್ರಾಂಗದ ಸಾರಂಗಿ, ಸುರೇಶ್ ಸಾಲಿಯಾನ್, ಡಾ. ಎ. ಜಯಕುಮಾರ್ ಶೆಟ್ಟಿ, ರೋಟರಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀಕಾಂತ್ ಕಾಮತ್ ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಅಬೂಬಕ್ಕರ್, ಗೀತಾಪ್ರಭು ಉಪಸ್ಥಿತರಿದ್ದರು. ಮಂಗಳೂರಿನ ಸರ್ವಜ್ಞ ಐ.ಎ.ಎಸ್. ಅಕಾಡೆಮಿಯ ಸುರೇಶ್, ಎಂ.ಎಸ್. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು ಸ್ವಾಗತಿಸಿದರು. ಕಾರ್ಯದರ್ಶಿ ಉಜಿರೆಯ ಡಾ. ದಯಾಕರ್, ಎಂ.ಎಂ. ಧನ್ಯವಾದವಿತ್ತರು. ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Article Image

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಆ.9ರಂದು ಡೈಮಂಡ್ ಫೆಸ್ಟ್ ಗೆ ಚಾಲನೆ ನೀಡಲಾಯಿತು. ಬೆಳ್ತಂಗಡಿ ಮಹಿಳಾ ಉದ್ಯಮಿ ಪ್ರೀತಿ ರತೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಮುಳಿಯ ಸಂಸ್ಥೆಯಲ್ಲಿ ಹೊಸ ಹೊಸ ವಿನ್ಯಾಸದ ಆಭರಣಗಳ ಸಂಗ್ರಹಗಳಿದ್ದು ಗ್ರಾಹಕರಿಗೆ ಖುಷಿ ತಂದಿದೆ. ಮುಳಿಯದ ಎಲ್ಲಾ ಕುಶಲಕರ್ಮಿಗಳಿಗೆ ಹಾಟ್ಸ್ ಆಫ್ ಹೇಳಲೇಬೇಕು. ಯಾಕೆಂದರೆ ಪ್ರತಿ ಬಾರಿಯೂ ಬಂದಾಗ ಡಿಸೈನ್ ಗಳು ಬದಲಾವಣೆಗಳು ಆಗುತ್ತಿದ್ದು ಒಂದಕ್ಕೊಂದು ಆಕರ್ಷಣೆಯಾಗಿರುತ್ತದೆ. ಈ ಶ್ರಾವಣ ಮಾಸದ ಶನಿವಾರದಂದು ಪ್ರಾರಂಭ ಮಾಡಿರುವ ಡೈಮಂಡ್ ಫೆಸ್ಟ್ ಮಾರುಕಟ್ಟೆಯಲ್ಲಿ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿ ಇಂದಬೆಟ್ಟು ಗ್ರಾಮ ಆಡಳಿತ ಅಧಿಕಾರಿ ಅಂಕಿತ್ ಜೈನ್ ಮಾತನಾಡಿ, ಮುಳಿಯ ಸಂಸ್ಥೆ ಹಲವಾರು ವರ್ಷಗಳಿಂದ ತನ್ನ ಗ್ರಾಹಕರನ್ನು ಸೆಳೆಯುತ್ತಲೇ ಬಂದಿರುತ್ತದೆ. ನಾನು ಕಳೆದ ಎರಡು ವರ್ಷದಿಂದ ಮುಳಿಯ ಸಂಸ್ಥೆಯ ಗ್ರಾಹಕನಾಗಿದ್ದು, ನಮ್ಮ ನಿರೀಕ್ಷೆಯ ಡಿಸೈನ್ ಗಳು ಇಲ್ಲಿ ದೊರೆಯುತ್ತಿದೆ. ಎಲ್ಲಾ ಸಿಬ್ಬಂದಿಗಳು ವಿನಮ್ರವಾಗಿದ್ದು ಮತ್ತೆ ಮತ್ತೆ ಬರಬೇಕು ಎಂದು ಭಾಸವಾಗುತ್ತದೆ. ಯಾವುದೇ ಹಬ್ಬಗಳ ಸಂಭ್ರಮದಂದು ನಮಗೆ ಮುಳಿಯ ನೆನಪಾಗುತ್ತಿದ್ದು ಡೈಮಂಡ್ ಫೆಸ್ಟ್ ಯಶಸ್ಸಾಗಲಿ ಎಂದು ಶುಭ ಹಾರೈಸಿದರು. ಹಲವು ವಿನ್ಯಾಸದ ವಜ್ರದ ಸಂಗ್ರಹಣೆ: 81 ವರ್ಷಗಳ ಇತಿಹಾಸವಿರುವಂತಹ ಮುಳಿಯ ಸಂಸ್ಥೆ ಸುಂದರ ಅರಮನೆಯ ಕಿರೀಟಕ್ಕೆ ಇಂದು ಮತ್ತೊಂದು ಸಾಧನೆಯ ಗರಿಯ ಜೋಡಿಸುವ ಸಂಭ್ರಮ. ವಜ್ರಗಳ ವಿವಿಧ ವಿನ್ಯಾಸಗಳನ್ನು ಸಂಭ್ರಮಿಸುವ ದಿನ. ಸುಮಾರು 4000 ಸಾವಿರದಿಂದ ಪ್ರಾರಂಭವಾಗುವಂತಹ ವಜ್ರದ ಬೆಲೆಯು ಹಲವು ವಿನ್ಯಾಸ ಮತ್ತು ವೈವಿಧ್ಯತೆಯನ್ನೊಳಗೊಂಡು 1 ಲಕ್ಷದವರೆಗೂ ಮುಂದುವರೆಯುತ್ತದೆ. ದಕ್ಷಿಣ ಕನ್ನಡದಲ್ಲಿ ಮೊದಲ ಬಾರಿಗೆ ವಜ್ರದ ಗುಣಮಟ್ಟವನ್ನು ಗ್ರಾಹಕರಿಕೆ ತಿಳಿಸುವಂತಹ ಯಂತ್ರವೂ ಕೂಡ ಮುಳಿಯದಲ್ಲಿದೆ. ಹಲವು ವಿನ್ಯಾಸದ ವಜ್ರದ ಸಂಗ್ರಹಣೆಯ ಹಬ್ಬ ಇಂದಿನಿಂದ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಗ್ರಾಹಕರು, ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಖಾ ಪ್ರಬಂಧಕರು ಲೋಹಿತ್ ಸ್ವಾಗತಿಸಿದರು. ಸಿಬ್ಬಂದಿ ಅಕ್ಷಯ್ ಪ್ರಾರ್ಥಿಸಿ ವಂದಿಸಿದರು. ಸೋನಾಕ್ಷಿ ನಿರೂಪಿಸಿದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಯಿಯ ನೈರ್ಮಲ್ಯ ದಿನಾಚರಣೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಯಿಯ ನೈರ್ಮಲ್ಯ ದಿನಾಚರಣೆ

ಎಸ್.ಡಿ.ಎಂ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವಸಡು ಶಾಸ್ತ್ರ ವಿಭಾಗದಲ್ಲಿ ರಾಷ್ಟ್ರೀಯ ಬಾಯಿಯ ನೈರ್ಮಲ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ. ಲೇಖಾ ಮತ್ತು ಡಾ. ಆನಂದ್ ತಾವರಗೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಡಾ. ಸ್ವಾತಿ ಸೆಟ್ಟಿ,ಡಾ ಲೀನಾ ಹಾಗೂ ಇತರ ಶಿಕ್ಷಕ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತಿಂಗಳಾದ್ಯಂತ ಹಮ್ಮಿಕೊಂಡಿದ್ದ ಹಲವರು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು . ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಪ್ರಭಾವಶೀಲವಾದ ಬಾಯಿಯ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ನಾಟಕ ವಿಶೇಷ ಗಮನ ಸೆಳೆಯಿತು. ಆರೋಗ್ಯ ಕಾರ್ಯ ಚಟುವಟಿಕೆಯ ಭಾಗವಾಗಿ ರೋಗಿಗಳಿಗೆ ಓರಲ್ ಹೈಜಿನ್ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಮಕ್ಕಳ ಶಸ್ತ್ರಚಿಕಿತ್ಸಕರ ಕರ್ನಾಟಕ ರಾಜ್ಯ ಮಟ್ಟದ ಸಮ್ಮೇಳನ

Article Image

ಮಕ್ಕಳ ಶಸ್ತ್ರಚಿಕಿತ್ಸಕರ ಕರ್ನಾಟಕ ರಾಜ್ಯ ಮಟ್ಟದ ಸಮ್ಮೇಳನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯು ಭಾರತೀಯ ಮಕ್ಕಳ ಶಸ್ತ್ರಚಿಕಿತ್ಸೆ ಸಂಘ, ಕರ್ನಾಟಕ ರಾಜ್ಯ ಅಧ್ಯಾಯದ ಆಶ್ರಯದಲ್ಲಿ ಮಕ್ಕಳ ಶಸ್ತ್ರಚಿಕಿತ್ಸಕರ ಕರ್ನಾಟಕ ರಾಜ್ಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಮಕ್ಕಳ ಶಸ್ತ್ರಚಿಕಿತ್ಸಕರು ಭಾಗವಹಿಸಲಿದ್ದಾರೆ. ಸಮ್ಮೇಳನವು ಆಗಸ್ಟ್ 8 ರಿಂದ 10, 2025 ರವರೆಗೆ ನಡೆಯಲಿದೆ. ಆಗಸ್ಟ್ 8 ರಂದು, ಮಕ್ಕಳಲ್ಲಿ ಮೂತ್ರಪಿಂಡದ ಕಲ್ಲುಗಳಿಗೆ (Kidney Stone) ಸಂಬಂಧಿಸಿದ ಕಾರ್ಯಾಗಾರವನ್ನು ನಡೆಸಲಾಗುವುದು. ಆಗಸ್ಟ್ 9 ಮತ್ತು 10, 2025 ರಂದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೈದ್ಯರಿಂದ ಅನೇಕ ಭಾಷಣಗಳು ನಡೆಯಲಿವೆ. ಈ ಸಮ್ಮೇಳನವು ಮಕ್ಕಳ ಶಸ್ತ್ರಚಿಕಿತ್ಸಕರಿಗೆ ತನ್ನ ರೋಗಿಗಳಿಗೆ ಚಿಕಿತ್ಸೆ ನೀಡಲು, ಹೆಚ್ಚು ಮಾಹಿತಿ ಪಡೆಯಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮದ ಅಧ್ಯಕ್ಷರು, ಡಾ| ಅನಿಲ್ ಹಲಗೇರಿ ಬಿ, ಡಾ| ವಿಜಯ್ ಪೂಜಾರ್ ಸಿ ಮತ್ತು ಡಾ| ರಾಜಶಂಕರ್ ಸಂಕಲ್. ಕಾರ್ಯದರ್ಶಿಗಳಾಗಿರುವ, ಡಾ| ಅಕ್ಷಯ್ ಕಲವಂತ್ ಬಿ, ಡಾ| ರವೀಂದ್ರ ಜಿ ಖಾಸ್ನಿಸ್ ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ - ಪ್ರೇರಣಾ ದಿವಸ್ 2025

Article Image

ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ - ಪ್ರೇರಣಾ ದಿವಸ್ 2025

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ-‘ಪ್ರೇರಣಾ ದಿವಸ್ 2025’ ನಡೆಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕರ್ನಾಟಕದ ರಾಜ್ಯಪಾಲ ಥಾವರ್‌ಚಾಂದ್ ಗೆಹ್ಲೋಟ್, ಶಿಕ್ಷಣ ಕ್ಷೇತ್ರಕ್ಕೆ ಉತ್ಕೃಷ್ಟ ಸೇವೆಯನ್ನು ನೀಡುತ್ತಾ ದೇಶದ ಏಳಿಗೆಗೆ ಕೊಡುಗೆ ನೀಡುತ್ತಿರುವ ಶಿಕ್ಷಕರೆಲ್ಲರೂ ಸದಾ ಸ್ಮರಣಿಯರು ಹಾಗೂ ಅನುಕರಣನೀಯರು. ಜ್ಞಾನ, ಸಂಸ್ಕಾರ ಹಾಗೂ ನೈತಿಕ ಮೌಲ್ಯವನ್ನು ನೀಡುವವರು ಶಿಕ್ಷಕರು. ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆ ಜೊತೆಯಲ್ಲಿ ಜೀವನದ ದಾರಿಯನ್ನು ತೋರಿಸುತ್ತಾರೆ. ದೀಪ ಹೇಗೆ ಕತ್ತಲೆಯನ್ನು ದೂರ ಮಾಡುತ್ತದೋ ಹಾಗೆ ಶಿಕ್ಷಕರು ಜ್ಞಾನ, ಮೌಲ್ಯ ಹಾಗೂ ಸಂಸ್ಕಾರದ ಮೂಲಕ ವಿದ್ಯಾರ್ಥಿಗಳ ಬದುಕನ್ನು ಬೆಳಗಿಸುತ್ತಾರೆ. ಆ ಮೂಲಕ ಸಮಾಜದ ಬೆಳವಣಿಗೆಗೆ ಕಾರಣರಾಗುತ್ತಾರೆ. ಪ್ರಾಚೀನ ಕಾಲದ ಚಾಣಕ್ಯನಾಗಿರಬಹುದು ಅಥವಾ ಆಧುನಿಕ ಕಾಲದ ಸರ್ವಪಳ್ಳಿ ರಾಧಾಕೃಷ್ಣರಿರಬಹುದು, ಅವರೆಲ್ಲರೂ ವಿದ್ಯಾರ್ಥಿಗಳಿಗೆ ಜ್ಞಾನವನ್ನು ನೀಡುವುದರ ಜೊತೆಗೆ ಸಮಾಜದ ನಿರ್ಮಾಣಕ್ಕೂ ಅಮೂಲ್ಯ ಕೊಡುಗೆ ನೀಡಿದ್ದಾರೆ. ಶಿಕ್ಷಕ ರಾಷ್ಟ್ರ ನಿರ್ಮಾಣದ ಶಿಲ್ಪಿ. ತಂತ್ರಜ್ಞಾನದ ಬೆಳವಣಿಗೆಯ ಈ ಕಾಲ ಘಟ್ಟದಲ್ಲಿ ಶಿಕ್ಷಕರ ಪಾತ್ರ ಇನ್ನೂ ಹೆಚ್ಚಿನ ಪ್ರಾಶಸ್ತ್ಯ ಪಡೆದಿದೆ. ಮೌಲ್ಯಕ್ಕೆ ಹೆಚ್ಚಿನ ಒತ್ತನ್ನು ನೀಡುವ, ವಿದ್ಯಾರ್ಥಿ ಕೇಂದ್ರಿತ, ನವಯುಗದ ತಂತ್ರಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಕವೃಂದ ನಮ್ಮದಾಗಬೇಕು ಎಂದು ಆಶಿಸಿದರು. ಹೊಸ ದಿಗಂತ ಪತ್ರಿಕೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಕಾಶ್ ಪಿಎಸ್ ಮಾತನಾಡಿ, ದೇಶದ ಬೆಳವಣಿಗೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುತ್ತದೆ. ದೇಶ ಅಥವಾ ಸಮಾಜ ಶಿಕ್ಷಣದಿಂದ ರೂಪಿತವಾಗಬೇಕು. ಸಮಾಜದ ನಡೆ ಶಿಕ್ಷಣದಿಂದ ನಿರ್ಧರಿತವಾಗಬೇಕು. ಸತ್ಯದ ದಾರಿಯಲ್ಲಿ ಮೌಲ್ಯವನ್ನು ಹೆಚ್ಚಿಸುವುದೇ ಶಿಕ್ಷಣ. ಅಹಿಂಸೆ, ಸತ್ಯ, ಬ್ರಹ್ಮಚರ್ಯ, ಆಸ್ಥೆಯ, ಅಪರಿಗ್ರಹದಂತಹ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಬೇಕು. ಸ್ವಾಭಿಮಾನಿ ಸಮಾಜ ನಿರ್ಮಾಣವಾಗಬೇಕೆಂದರೆ ಅಂತಹ ಶಿಕ್ಷಣ ನೀಡಬೇಕು ಎಂದರು. ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಪ್ರೋ ಚಾನ್ಸಿಲರ್ ಡಾ. ಹೆಚ್ ಎಸ್ ಬಲ್ಲಾಳ್ ಹಾಗೂ ಸರಸ್ವತಿ ಸಮೂಹ ವಿದ್ಯಾಸಂಸ್ಥೆ ಮೇಘಾಲಯದ ಸ್ಥಾಪಕರು ಹಾಗೂ ಸಂವಿಧಾನ ತಜ್ಞ ಡಾ. ಅನಂತಕೃಷ್ಣ ಭಟ್‌ರಿಗೆ ‘ಜೀವಮಾನದ ಸಾಧನೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಪ್ರೋ ಚಾನ್ಸಿಲರ್, ಡಾ ಹೆಚ್ ಎಸ್ ಬಲ್ಲಾಳ, ಈ ತರಹದ ಗುರುತಿಸುವಿಕೆ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ಪ್ರೇರೆಪಿಸುತ್ತದೆ. ಹುಟ್ಟು ಸಾವಿನ ನಡುವೆ ಏನು ಮಾಡುತ್ತೇವೆ ಎನ್ನುವುದು ಮುಖ್ಯ. ಇನ್ನೊಬ್ಬರಿಗಾಗಿ ಬದುಕಿದರೆ, ಅದೇ ಶ್ರೇಷ್ಠ ಬದುಕು ಎಂದು ನುಡಿದರು. ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಅತ್ಯುತ್ತಮ ಆಡಳಿತ ನಿರ್ವಾಹಕ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಪ್ರಾಚರ‍್ಯ ಡಾ ಕುರಿಯನ್ ಹಾಗೂ ಮಂಗಳೂರಿನ ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ ಇವರಿಗೆ ನೀಡಲಾಯಿತು. ಸಂಶೋಧನ ಕ್ಷೇತ್ರದಲ್ಲಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಣಿಪಾಲ್ ಯೂನಿವರ್ಸಿಟಿಯ, ಸ್ಕೂಲ್ ಆಫ್ ಎಕನಾಮಿಕ್ಸ್‌ನ ಪ್ರೊ. ಹರೀಶ್ ಜೋಶಿ ಹಾಗೂ ಎಜೆ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಶಾಂತರಾಮ ರೈ ಸಿ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕಿ ಡಾ ಸುಭಾಷಿಣಿ ಶ್ರೀವತ್ಸ ಹಾಗೂ ಅಜ್ಜರಕಾಡಿನ ಡಾ ಜಿ ಶಂಕರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ರಾಜೇಂದ್ರ ಪಿ ಇವರಿಗೆ ನೀಡಲಾಯಿತು. ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಪ್ರೊ. ವಿಜಯಲತಾ ಹಾಗೂ ಕಾಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯಶೋಧರಿಗೆ ನೀಡಿ ಗೌರವಿಸಲಾಯಿತು. ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಯನ್ನು ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಡಾ. ರಾಧಾಕೃಷ್ಣ ಹಾಗೂ ವಿರಾಜಪೇಟೆಯ ಕಾವೇರಿ ಕಾಲೇಜಿನ ತಮ್ಮಯ್ಯರಿಗೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ 2025ನೇ ಸಾಲಿನಲ್ಲಿ ಪಿಹೆಚ್‌ಡಿ ಪದವಿ ಪಡೆದ ಸಂಶೋಧನಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರಾದ ಕ್ಯಾ ಬ್ರಿಜೇಶ್ ಚೌಟ, ಮಂಗಳೂರು ವಿವಿಯ ಕುಲಸಚಿವ ಡಾ ಪಿಎಲ್ ಧರ್ಮಾ, ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಭಾಗವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಕೆಆರ್‌ಎಂಎಸ್‌ಎಸ್ ರಾಜ್ಯಾಧ್ಯಕ್ಷ ಡಾ. ಗುರುನಾಥ ಬಡಿಗೇರ್, ಕೆಆರ್‌ಎಂಎಸ್‌ಎಸ್‌ನ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ. ಕೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ ಮಹಾದೇಶ ಸಿ, ಡಾ ಎಸ್ ಬಿ ಎಂ ಪ್ರಸನ್ನ, ಕೆಆರ್‌ಎಂಎಸ್‌ಎಸ್‌ನ ಮಂಗಳೂರು ವಿಭಾಗದ ಅಧ್ಯಕ್ಷೆ ವಾಣಿ ಯುಎಸ್, ಕಾರ‍್ಯದರ್ಶಿ ರಾಜೇಶ್ ಇದ್ದರು. ಕೆಆರ್‌ಎಂಎಸ್‌ಎಸ್‌ನ ಮಮತಾ ಶೆಟ್ಟಿ ಹಾಗೂ ವೆಂಕಟೇಶ್ ನಾಯಕ್ ಕಾರ‍್ಯಕ್ರಮ ನಿರೂಪಿಸಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು.

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ಕುರಿತು ವಿಶೇಷ ಉಪನ್ಯಾಸ

Article Image

ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ಕುರಿತು ವಿಶೇಷ ಉಪನ್ಯಾಸ

ಎಸ್.ಡಿ.ಎಂ. ಬಯೋಮೆಡಿಕಲ್ ಸೈನ್ಸಸ್ ಇನ್‌ಸ್ಟಿಟ್ಯೂಟ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳ ರಾಷ್ಟ್ರೀಯ ಸ್ವಯಂ ಸೇವಕ ಘಟಕಗಳು ಜಂಟಿಯಾಗಿ ಜುಲೈ 24, 2025ರಂದು ಅಂತರಾಷ್ಟ್ರೀಯ ಮಾದಕವಸ್ತು ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನವನ್ನು ಆಚರಿಸಿತು. ಸಹ ಉಪ ಕುಲಪತಿಗಳು (ಆಡಳಿತ) ಶ್ರೀ ವಿ. ಜೀವಂಧರ್ ಕುಮಾರ್ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹುಬ್ಬಳ್ಳಿ-ಧಾರವಾಡ ನಗರದ ಸೈಬರ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯಗಳ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಡಾ. ಶಿವರಾಜ್ ಕೆ. ಕಟಕಭಾವಿ ಮತ್ತು ಹುಬ್ಬಳ್ಳಿಯ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ಮಾದಕವಸ್ತು ವಿಭಾಗದ ವೈಜ್ಞಾನಿಕ ಅಧಿಕಾರಿ ಡಾ. ಮಂಜುನಾಥ್ ಸುಣಗಾರ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಡಾ. ಶಿವರಾಜ್ ಕಟಕಭಾವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ; ವಿದ್ಯಾರ್ಥಿಗಳು ಶ್ರಮವಹಿಸಿ ಕಲಿಯುವ ಮುಖೇನ ಸಂತೃಪ್ತಿಯನ್ನು ಪಡೆಯಬೇಕು. ನಮ್ಮ ಯುವ ಪೀಳಿಗೆಯು ಮಾದಕ ವಸ್ತುಗಳ ಪ್ರಭಾವಕ್ಕೆ ಒಳಗಾಗದೇ ಅದರಿಂದ ದೂರವಿರಬೇಕು. ಮಾದಕ ವಸ್ತುಗಳ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುವುದಲ್ಲದೇ ಇಡೀ ಕುಟುಂಬದ ಶಾಂತಿಯನ್ನು ಹಾಳು ಮಾಡುತ್ತದೆ. ವಿಷಕಾರಕವಾದ ಮಾದಕ ವಸ್ತುಗಳ ಸೇವನೆಯಿಂದ ಹಂತ ಹಂತವಾಗಿ ದೇಹದ ಎಲ್ಲಾ ಅಂಗಗಳನ್ನು ಹಾನಿಗೊಳಗಾಗುತ್ತವೆ. ಕ್ಷಣಿಕ ಸಂತೋಷಕ್ಕಾಗಿ ಅಮೂಲ್ಯವಾದ ನಮ್ಮ ಜೀವನವನ್ನು ಹಾಳುಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ನಮ್ಮ ಶಿಕ್ಷಣ ಮತ್ತು ಇಡೀ ವೃತ್ತಿಜೀವನದ ಮೇಲೆ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ವ್ಯವಹಾರದಲ್ಲಿ ತೊಡಗಿಕೊಳ್ಳುವ ಯಾವುದೇ ರೀತಿಯ ಅಪರಾಧ ಕೃತ್ಯಗಳ ಬಗ್ಗೆ ನಾವು ಯೋಚಿಸಬಾರದು. ನಾವೆಲ್ಲರೂ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆಯ ಕುರಿತಾದ ಕಾನೂನುಗಳನ್ನು ಅನುಸರಿಸಬೇಕು. ಭಾರತವನ್ನು ಮಾದಕ ವಸ್ತುಗಳ ಮುಕ್ತ ದೇಶವನ್ನಾಗಿ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡಬೇಕು. ಆರೋಗ್ಯಕರ ಶೈಕ್ಷಣೀಕ ಪರಿಸರ ಹೊಂದಲು ಆತಂರಿಕ ಮಾದಕ ವಸ್ತು ವಿರೋಧಿ ಸಮಿತಿಯನ್ನು ರಚಿಸಲು ಸಲಹೆ ಮಾಡಲಾಯಿತು. ಡಾ. ಮಂಜುನಾಥ್ ಸುಣಗಾರ ಅವರು ವಿವಿಧ ಮಾದಕ ದ್ರವ್ಯ ವಸ್ತುಗಳ ಪರಿಚಯ, ಸೇವನೆಯ ದುಷ್ಪರಿಣಾಮ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಮುಂಜಾಗೃತಿಯನ್ನು ಮೂಡಿಸಿದರು. ಡಾ. ಶಿವರಾಜ್ ಕಟಕಭಾವಿ ಮತ್ತು ಡಾ. ಮಂಜುನಾಥ್ ಸುಣಗಾರ ಅವರನ್ನು ಎಸ್.ಡಿ.ಎಂ. ಸಂಸ್ಥೆವತಿಯಿಂದ ಗಣ್ಯರು ಸನ್ಮಾನಿಸಿದರು. ಸಂಶೋಧನಾ ನಿರ್ದೇಶಕ ಡಾ. ಕೆ. ಸತ್ಯಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಹಣಕಾಸು ಅಧಿಕಾರಿ ವಿ.ಜಿ. ಪ್ರಭು, ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕೆ. ಕುಲಕರ್ಣಿ, ಡಾ. ಅಜಯಕುಮಾರ್ ಓಲಿ ಮತ್ತು ಪ್ರಸನ್ನ ದೇಶಪಾಂಡೆ, ಎನ್.ಎನ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಡಾ. ರೇಣುಕಾರಾಧ್ಯ ಕೆ. ಮಠ, ಅಧ್ಯಾಪಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಮೇಘನಾ ಹೆಗ್ಡೆ ಅತಿಥಿ ಉಪನ್ಯಾಸಕರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು. ಮುಮೈಜಾ ಶಿಬಾರಗಟ್ಟಿ ವಂದನಾರ್ಪಣೆ ಸಲ್ಲಿಸಿದರು.

ಸ್ಪಟಿಕ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ

Article Image

ಸ್ಪಟಿಕ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ

ವಯೋಸಹಜವಾಗಿ ಮೈಗೂಡುವ ಋಣಾತ್ಮಕ ಚಿಂತನೆಗಳನ್ನು ತೊರೆದಾಗ ಮನಸಿನ ಮೇಲೆ ಹಿಡಿತ ಸಾಧಿಸಲು ಸಾಧ್ಯ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಮನಃಶಾಸ್ತ್ರ (ಸ್ನಾತಕೋತ್ತರ) ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಶ್ವಿನಿ ಎಸ್. ಶೆಟ್ಟಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.18ರಂದು ಅವರು ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘ ‘ಸ್ಪಟಿಕ’ ಉದ್ಘಾಟಿಸಿ, ‘ಕಾಲೇಜು ಜೀವನದಲ್ಲಿ ಮಾನಸಿಕ ಆರೋಗ್ಯದ ಪೋಷಣೆ’ ಕುರಿತು ಉಪನ್ಯಾಸ ನೀಡಿದರು. ಜೀವನದಲ್ಲಿ ಬರುವ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬರಬೇಕು. ಬದುಕಿನಲ್ಲಿ ಎದುರಾಗುವ ತೊಂದರೆಗಳನ್ನು ಸ್ವೀಕರಿಸಿ, ತಾಳ್ಮೆಯಿಂದ ಚಿಂತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಮನಸು ಮತ್ತು ಮೆದುಳಿನ ಸಮತೋಲನ ನಿರ್ವಹಣೆಯಿಂದ ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. “ಮನಸ್ಸಿನ ದುಗುಡಗಳನ್ನು ನಮಗೆ ಸೂಕ್ತ ಎನಿಸುವ ವ್ಯಕ್ತಿಯ ಜೊತೆ ಹಂಚಿಕೊಂಡಾಗ ಮಾತ್ರ ಅವುಗಳಿಗೆ ಪರಿಹಾರ ಸಾಧ್ಯ. ನಮ್ಮ ಬದುಕಿನಲ್ಲಿ ಎದುರಾಗುವ ಪರಿಸ್ಥಿತಿಗಳಿಗೆ ನಾವು ಯಾವ ರೀತಿ ಸ್ಪಂದಿಸಬೇಕು ಎಂಬುದರ ಬಗ್ಗೆ ನಮಗೆ ಅರಿವಿರಬೇಕು. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುದು ಇದ್ದೇ ಇದೆ. ಅವುಗಳನ್ನು ಹುಡುಕುವ ತಾಳ್ಮೆ ಮೈಗೂಡಬೇಕು” ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಪ್ರತಿಯೊಂದು ವಿಚಾರಕ್ಕೂ ತಂತ್ರಜ್ಞಾನದ ಮೊರೆ ಹೋಗುವುದನ್ನು ನಿಲ್ಲಿಸಿ ತಮ್ಮ ಮೆದುಳಿಗೆ ಕೆಲಸ ಕೊಡಬೇಕು. ಹಾಗಾದಾಗ ಮಾತ್ರ ಮೆದುಳು ಚುರುಕಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಯುವಜನತೆ ಮನಸ್ಸಿನ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಅನಿವಾರ್ಯತೆಯಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಪ್ರತಿ ವಿಷಯಕ್ಕೂ ವಿಷಯವಾರು ಸಂಘ ರಚಿಸಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಮನೋರಂಜನೆಯ ಉದ್ದೇಶಕ್ಕಲ್ಲ. ಬದಲಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಎಂದರು. ರಸಾಯನಶಾಸ್ತ್ರ ವಿಭಾಗವು ಹಿಂದಿನಿಂದಲೂ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ ಆ ಯಶಸ್ಸನ್ನು ಮುನ್ನಡೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ವಿದ್ಯಾರ್ಥಿಗಳು ತಯಾರಿಸಿದ ‘ಸ್ಪಟಿಕ’ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲೆ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥೆ ನಂದ ಕುಮಾರಿ ಕೆ.ಪಿ., ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಮೌಲ್ಯ ಮತ್ತು ಸಿಂಚನ, ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಶಾಂತ್ ಸ್ವಾಗತಿಸಿ, ಜೋಷ್ಣಾ ವಂದಿಸಿ, ಅನ್ವಿತಾ ಸೇರಾ ಕಾರ್ಯಕ್ರಮ ನಿರೂಪಿಸಿದರು.

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣವಾಚನ ಪ್ರವಚನ ಉದ್ಘಾಟನೆ

Article Image

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣವಾಚನ ಪ್ರವಚನ ಉದ್ಘಾಟನೆ

ಉಜಿರೆ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು, ನಿಟ್ಟೂರು ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ 45ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸುಪ್ರಿಯಾಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮೊದಲಾದವರು ಉಪಸ್ಥಿತರಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು. ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು. ಸೆಪ್ಟೆಂಬರ್ 16ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8.00ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Article Image

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಉಜಿರೆ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ”ಯ ವಾಚನ-ಪ್ರವಚನ ನಡೆಯುತ್ತದೆ. ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು. ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು. ಉದ್ಘಾಟನಾ ಸಮಾರಂಭ: ಜುಲೈ 16 ರಂದು ಬುಧವಾರ ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಶಿಕ್ಷಕ ಪಾಲಕ ವಿದ್ಯಾರ್ಥಿಗಳ ಸಭೆ 2025

Article Image

ಶಿಕ್ಷಕ ಪಾಲಕ ವಿದ್ಯಾರ್ಥಿಗಳ ಸಭೆ 2025

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2025ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯನ್ನು ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇದು ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ದಿಕ್ಕನ್ನು ತೀರ್ಮಾನಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರವನ್ನು ಗುರುತಿಸಿ, ಗುರಿ ಮುಟ್ಟುವೆಡೆಗೆ ಶ್ರಮಿಸಬೇಕು. ಈ ಪ್ರಯಾಣದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರವು ಬಹಳ ಮಹತ್ವದ್ದಾಗಿದೆ ಎಂದರು. ಅಲ್ಲದೆ, ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನದೇ ಆದ ಆಸಕ್ತಿಯ ಕ್ಷೇತ್ರದಲ್ಲಿ ಬೆಳೆಯುತ್ತಾನೆ. ಹಾಗಾಗಿ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ಅಳೆಯುವುದು ಸೂಕ್ತವಲ್ಲ ಎಂದರು. ಮನಸ್ಸಿನ ಸಮತೋಲನ ಅಗತ್ಯ. "ಬಾಲ್ಯಾವಸ್ಥೆಗಿಂತ ಪ್ರೌಢಾವಸ್ಥೆ ವಿಭಿನ್ನ ಮನೋಧರ್ಮದಿಂದ ಕೂಡಿರುತ್ತದೆ. ದೈಹಿಕವಾಗಿ ಶಕ್ತಿಶಾಲಿಯಾದರೂ, ಮನಸ್ಸು ಚಂಚಲವಾಗಿರುತ್ತದೆ. ಆದ್ದರಿಂದ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ. ಅಧ್ಯಯನ ಸಮಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ಪ್ರತಿಯೊಂದು ವಿಷಯಕ್ಕೂ ಸಮಾನ ಮಹತ್ವ ನೀಡಿ ಎಂದರು. ಶಿಸ್ತು ಮತ್ತು ಸಮಯದ ಮೌಲ್ಯ ಅರಿಯಿರಿ ಆರೋಗ್ಯದ ವಿಷಯದಲ್ಲೂ ಜಾಗೃತಿ ಅಗತ್ಯ. ಕಳೆದುಹೋದ ಸಮಯ ಮರಳದು. ಆದ್ದರಿಂದ ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಿ ಮತ್ತು ಶಿಸ್ತುಬದ್ಧ ಜೀವನ ನಡೆಸಿರಿ,” ಎಂದು ಸಲಹೆ ನೀಡಿದರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಸಂಯೋಜಕಿ ವಿದ್ಯಾ ಇದ್ದರು. ಕಾರ್ಯಕ್ರಮವನ್ನು ಇಂಗ್ಲಿಷ್ ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.

First Previous

Showing 2 of 8 pages

Next Last