Article Image

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ

Article Image

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ

ವಿದ್ಯಾರ್ಥಿಗಳು ಸದಾ ಮಾತೃಭೂಮಿಯನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ಹಾಗೂ ರಾಜಕೀಯದ ಅರಿವು ನಿಮಗಿರಬೇಕು. ಚುನಾವಣೆ ಮತ್ತು ಅದರ ನಿಯಮಗಳನ್ನು ತಿಳಿಯುವುದರೊಂದಿಗೆ ಮತದಾನದ ಮಹತ್ವವನ್ನು ಪ್ರತಿಯೊಬ್ಬ ಪ್ರಜೆಯು ಅರಿಯುವಂತಾಗಬೇಕು. ಎಂದಿಗೂ ಮತವನ್ನು ಹಣಕ್ಕಾಗಿ ಮಾರಿಕೊಳ್ಳಬಾರದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರೂ ಸಮಾನರು ಎಲ್ಲರಿಗೂ ತಮಗಿಷ್ಟವಾದ ಅಭ್ಯರ್ಥಿಗೆ ಮತ ನೀಡುವ ಹಕ್ಕಿದೆ. ಅದನ್ನು ಪ್ರತಿಯೊಬ್ಬರು ಸರಿಯಾಗಿ ಬಳಸಿಕೊಳ್ಳಬೇಕು. ನಮ್ಮನ್ನು ಆಳುವ ನಾಯಕರು ನಮ್ಮ ಸಮಸ್ಯೆಗಳಿಗೆ ಅಗತ್ಯತೆಗಳಿಗೆ ಸ್ಪಂದಿಸುವಂತಿರಬೇಕು. ಇಲ್ಲವಾದರೆ ಪ್ರಶ್ನಿಸುವ ಅಧಿಕಾರ ನಮಗಿದೆ ಅದನ್ನು ನಾವು ಮಾಡಬೇಕು. ನಾಯಕರನ್ನ ಆಯ್ಕೆ ಮಾಡಿದ ನಂತರ ಸುಮ್ಮನೆ ಕುಳಿತುಕೊಳ್ಳಬೇಡಿ. ನಾಯಕನಾದವನು ನಿಯಮಗಳನ್ನು ಮಾನವೀಯ ಮೌಲ್ಯಗಳನ್ನು ಗೌರವಿಸುವಂತವನಾಗಬೇಕು. ಅವರು ಮಾಡುವ ತಪ್ಪುಗಳನ್ನು ನೇರವಾಗಿ ಅವರಿಗೆ ತಿಳಿಸುವುದು ಪ್ರಜೆಗಳಾದ ನಿಮ್ಮ ಕರ್ತವ್ಯವಾಗಿದೆ. ವಿರೋಧ ಪಕ್ಷದ ನಾಯಕನಾದವನು ಆಡಳಿತ ಪಕ್ಷದ ಆಡಳಿತವನ್ನು ಸದಾ ವೀಕ್ಷಿಸುತ್ತಿರಬೇಕು. ಅವರ ಆಡಳಿತದಲ್ಲಿನ ತಪ್ಪುಗಳನ್ನು ಗುರುತಿಸಿ ಸರಿಪಡಿಸುವ ಅಧಿಕಾರ ಅವರಿಗಿರುತ್ತದೆ. ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವತ್ತ ನಿಮ್ಮ ಪ್ರಯತ್ನವಿರಲಿ ನಿಮ್ಮ ಬಗ್ಗೆ ನಿಮಗೆ ಭರವಸೆ ಇರಲಿ. ಸಮಾಜದಲ್ಲಿ ಉತ್ತಮ ನಾಗರಿಕನಾಗಿ ರೂಪುಗೊಳ್ಳಿ ಎಂದು ಬೆಳ್ತಂಗಡಿಯ ಪ್ರಸಿದ್ಧ ವಕೀಲರಾದ ರೊ. ಬಿ.ಕೆ. ಧನಂಜಯ ರಾವ್ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಉದ್ಘಾಟನೆ ನೆರವೇರಿಸಿ ಮಾತನಾಡಿ ನೂತನ ವಿದ್ಯಾರ್ಥಿ ಸಚಿವರುಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ತುಂಬಾ ಮುಖ್ಯವಾದದ್ದು. ಮತದಾನ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಅಂತಹ ಶಾಲಾ ಸಂಸತ್ತಿಗೆ ಸಂಬಂಧಿಸಿದ ಚುನಾವಣೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಾಲ್ಗೊಂಡಿದ್ದೀರಿ. ಈ ಮೂಲಕ ನಮ್ಮ ಸಂವಿಧಾನ, ಆಡಳಿತದ ಬಗ್ಗೆ ಈ ಹಂತದಲ್ಲಿ ಅರಿವನ್ನು ಮಾಡಿಸಿಕೊಳ್ಳಬೇಕು. ಒಬ್ಬ ಉತ್ತಮ ನಾಯಕನಾಗುವ ಸಾಮರ್ಥ್ಯ ಎಲ್ಲರಲ್ಲಿಯೂ ಇರುತ್ತದೆ. ಅದಕ್ಕೆ ಬೇಕಾದ ಮೌಲ್ಯಗಳನ್ನು ಜ್ಞಾನವನ್ನು ಆತ್ಮ ವಿಶ್ವಾಸವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಪ್ರತಿ ದಿನ ಹೊಸತನ್ನು ಕಲಿಯುತ್ತೀರಿ. ಒಳ್ಳೆಯ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳಿ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಚಿವರುಗಳಿಗೆ ಶುಭ ಹಾರೈಸಿದರು. ಮುಖ್ಯೊಪಾಧ್ಯಾಯರಾದ ಶಿವಪ್ರಸಾದ್ ಭಟ್ ನೂತನ ವಿದ್ಯಾರ್ಥಿ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪಮುಖ್ಯೋಪಾಧ್ಯಾಯರಾದ ಜಯಶೀಲ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕ ದಾಮೋದರ್ ಸಚಿವರುಗಳಿಗೆ ಖಾತೆಗಳನ್ನು ಹಂಚಿದರು, ಶಾಲಾ ಸಂಸತ್ತಿನ ನಾಯಕನಾಗಿ ಶಶಾಂಕ್ ಎ.ಸಿ., ವಿರೋಧ ಪಕ್ಷದ ನಾಯಕನಾಗಿ ಗ್ಯಾನ್ ಕೆ. ಕಾಳೆ, ಸಭಾಪತಿಯಾಗಿ ಯಶಸ್ವಿನಿ, ಉಪ ನಾಯಕಿ ಚಿನ್ಮಯಿ ಅರುಣ್, ಕ್ರೀಡೆ- ಮನ್ವಿತ್ ರಾಜ್ ಜೈನ್, ಆರೋಗ್ಯ- ಲಿಖಿತ್ ಗೌಡ, ಸಾಂಸ್ಕೃತಿಕ- ಸೋನಿಕ, ಶಿಸ್ತು- ತ್ರಿಶೂಲ್, ಆಹಾರ- ಧ್ರುತಿ ಪಾಟೀಲ್, ಪರಿಸರ- ಜೋವಿನ್, ಜಲ ಮತ್ತು ವಿದ್ಯುತ್- ಖಾತೆಗಳ ಸಚಿವರಾಗಿ ಧನ್ಯತಾ ಆಯ್ಕೆಗೊಂಡರು. ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮವನ್ನು ನಿರೂಪಿಸಿದರು.

“ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಕಾರ್ಯಾಗಾರ

Article Image

“ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಕಾರ್ಯಾಗಾರ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರ, ಜೆ.ಎನ್.ಎಂ.ಸಿ. ಬೆಳಗಾವಿಯ ಸಹಯೋಗದೊಂದಿಗೆ ಜುಲೈ 16 ರಿಂದ 18, 2024ರ ವರೆಗೆ “ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ” ಎಂಬ ವಿಷಯದ ಮೇಲೆ 3 ದಿನಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಕಾರ್ಯಾಗಾರವು ಅಧ್ಯಾಪಕರಿಗೆ, ಹೊಸ ಬೋಧನೆಯ ಮತ್ತು ಕಲಿಕೆಯ ವಿಧಾನಗಳನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದ್ದು, ಈ ಕಾರ್ಯಾಗಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಅನುಮೋದಿಸಲ್ಪಟ್ಟಿದೆ. ಅಧ್ಯಾಪಕರು ತಮ್ಮ ದೈನಂದಿನ ಜ್ಞಾನವನ್ನು ನವೀಕರಿಸಲು ಇದು ಉತ್ತಮ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಅಧ್ಯಕ್ಷರಾದ ಡಾ. ರತ್ನಮಾಲಾ ಎಂ. ದೇಸಾಯಿ, ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಶ್ರೀ ಸಾಕೇತ್ ಶೆಟ್ಟಿ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಜೆ.ಎನ್.ಎಂ.ಸಿಯ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಜ್ಯೋತಿ ನಾಗಮೋತಿ, ಮತ್ತಿತರರು ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಡಾ. ನಿರಂಜನ್ ಕುಮಾರ ಮತ್ತು ಡಾ. ಜ್ಯೋತಿ ನಾಗಮೋತಿ ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ: ಪರಿಣಾಮಕಾರಿ ಬೋಧನೆಯು ವಿದ್ಯಾರ್ಥಿಗಳನ್ನು ಪರಿವರ್ತಿಸಿ ಪ್ರಬುದ್ಧಗೊಳಿಸುತ್ತದೆ. ಡಿಜಿಟಲ್ ಜ್ಞಾನದ ಕಡೆ ವಿದ್ಯಾರ್ಥಿಗಳು ಬದಲಾಗುತ್ತಿರುವುದು ಕಳಕಳಿಯ ವಿಷಯ. ಬೋಧನೆಯನ್ನು ಆಸಕ್ತಿದಾಯಕ ಮತ್ತು ಸಂವಾದಾತ್ಮಕವಾಗಿ ಮಾಡುವ ಅನಿವಾರ್ಯತೆ ಇದೆ. ಹೊಸ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸುವುದೇ ಶಿಕ್ಷಣದ ಈಗಿನ ಪ್ರಾಶಸ್ತ್ಯವಾಗಿದೆ. ಕಠಿಣ ತರಬೇತಿಯಿಂದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಸರಳಗೋಳಿಸಬಹುದು. ದೃಢ ನಿರ್ಧಾರ ಮತ್ತು ದಿಟ್ಟತನದಿಂದ ಯಾವುದೇ ಭಯವಿಲ್ಲದೆ ವೈದ್ಯಕೀಯ ಶಿಕ್ಷಣವನ್ನು ಪಡೆಯಬೇಕು. ವೈದ್ಯಕೀಯ ಶಿಕ್ಷಣದಲ್ಲಿ ನವೀನ ಕೌಶಲ್ಯಗಳ ತರಬೇತಿ ಮತ್ತು ಹೊಸ ಜ್ಞಾನಗಳ ಅಗತ್ಯವಿದೆ. ಔಷಧಗುಣ ಶಾಸ್ತ್ರದ ಪ್ರಾಧ್ಯಾಪಕರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ. ರಾಧಿಕಾ ಶೇರ್ಖಾನೆ ಅವರು ಅತಿಥಿಗಳನ್ನು ಪರಿಚಯಿಸಿದರು. ಡಾ. ರತ್ನಮಾಲಾ ದೇಸಾಯಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಆದಿತ್ಯಾ ಅಗ್ನಿಹೋತ್ರಿ ಕಾರ್ಯಕ್ರವನ್ನು ನಿರೂಪಿಸಿದರು. ಡಾ. ರಾಕೇಶ ನಾಯಕ ವಂದನಾರ್ಪಣೆ ಸಲ್ಲಿಸಿದರು.

ಉಜಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Article Image

ಉಜಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಜನಸಂಖ್ಯಾ ಸ್ಪೋಟದಿಂದ ದೇಶದ ಪ್ರಗತಿ ಕುಂಠಿತವಾಗುತ್ತದೆ. ಎಲ್ಲರಿಗೂ ಆಹಾರ, ನೆಲ, ಜಲ, ಹಾಗೂ ಪರಿಶುದ್ಧವಾದ ಗಾಳಿ ಮೊದಲಾದ ಮೂಲಭೂತ ಸೌಕರ್ಯಗಳ ಕೊರತೆಯಾಗಿ ನಾವು ಇತರ ಗ್ರಹಗಳಿಗೆ ವಾಸ್ತವ್ಯಕ್ಕೆ ಹೋಗಬೇಕಾದ ಅನಿವಾರ್ಯತೆ ಒದಗಿ ಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯಿತಿ ಹಾಗೂ ಉಜಿರೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಜನಸಂಖ್ಯಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತದಲ್ಲಿ ಪ್ರತಿದಿನ 73,781 ರಷ್ಟು ಜನಸಂಖ್ಯೆ ಹೆಚ್ಚಾಗುತ್ತಿದೆ. ಜನಸಂಖ್ಯಾ ಸ್ಪೋಟದ ನಿಯಂತ್ರಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಚಿಕ್ಕ ಸಂಸಾರವೇ ಚೊಕ್ಕ ಸಂಸಾರವಾಗಿದ್ದು, ಸಂತಾನ ನಿಯಂತ್ರಣ ಅನಿವಾರ್ಯವಾಗಿದೆ. ಮಹಿಳೆ ಆರೋಗ್ಯವಂತಳಾದರೆ, ಕುಟುಂಬ ಹಾಗೂ ಸಮಾಜವೂ ಆರೋಗ್ಯವಂತವಾಗಿರುತ್ತದೆ. ಮಕ್ಕಳ ಜನನದ ನಡುವಿನ ಅಂತರ ಕನಿಷ್ಠ ಮೂರು ವರ್ಷಗಳಾದರೂ ಇರಬೇಕು. ಇಂದು 144 ಕೋಟಿ ಜನಸಂಖ್ಯೆಯೊಂದಿಗೆ ಭಾರತ ಪ್ರಥಮ ಸ್ಥಾನದಲ್ಲಿರುವುದು ಪ್ರಗತಿಯ ದ್ಯೋತಕವಲ್ಲ. ಜನಸಂಖ್ಯಾ ಸ್ಪೋಟದ ನಿಯಂತ್ರಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಆರೋಗ್ಯವಂತ ಯುವಜನತೆಯಿಂದ ದೇಶದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಸಮಾರಂಭವನ್ನು ಉದ್ಘಾಟಿಸಿದ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಷಾಕಿರಣ ಕಾರಂತ ಮಾತನಾಡಿ ಗ್ರಾಮೀಣ ಪ್ರದೇಶದ ಮಹಿಳೆಯರು ಇನ್ನೂ ಹೆಚ್ಚು ಸಬಲೀಕರಣಗೊಳ್ಳಬೇಕಾಗಿದೆ. ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು ನೀಡುವ ಮಾಹಿತಿ, ಮಾರ್ಗದರ್ಶನದ ಸದುಪಯೋಗ ಪಡೆದು ಹಾಗೂ ಸರ್ಕಾರದ ಸವಲತ್ತುಗಳ ಬಳಕೆಯೊಂದಿಗೆ ಮಹಿಳೆಯರು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಅವರು ಸಲಹೆ ನೀಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡಿ, ದೇಶದ ಪ್ರಬಲ ಶಕ್ತಿಯಾದ ಯುವಜನತೆ ಎಲ್ಲಾ ಆಯಾಮಗಳಲ್ಲಿಯೂ ಸದೃಢರಾದಾಗ ದೇಶದ ಸರ್ವತೋಮುಖ ಪ್ರಗತಿಯಾಗುತ್ತದೆ. ನೌಕರರ ಕೊರತೆ ಇದ್ದರೂ ಸರ್ಕಾರಿ ಅಧಿಕಾರಿಗಳ ಕರ್ತವ್ಯಪ್ರಜ್ಞೆ, ಬದ್ಧತೆ ಮತ್ತು ಸಮರ್ಪಣಾ ಮನೋಭಾವದ ಸೇವೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು. ದ.ಕ. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೌಜನ್ಯ ಮತ್ತು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಸ್ತ್ರಿರೋಗ ಮತ್ತು ಪ್ರಸೂತಿ ತಜ್ಞೆ ಡಾ. ರಶ್ಮಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡಿದರು. ಡಾ. ಮಂಜು, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ. ಉಪಸ್ಥಿತರಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು: ತೇಜಸ್ ವಿ.ಎಸ್., ಸರ್ಕಾರಿ ಪದವಿಪೂರ್ವ ಕಾಲೇಜು, ವೇಣೂರು (ಪ್ರಥಮ). ಧನುಷ್, ಕೆ.ಎನ್. ಮುಂಡಾಜೆ ಪದವಿಪೂರ್ವ ಕಾಲೇಜು, ಮುಂಡಾಜೆ (ದ್ವಿತೀಯ). ಫಾತಿಮತ್ ಹಿಸಾನಾ, ಸಕಾಋಇ ಪದವಿಪೂರ್ವ ಕಾಲೇಜು ಕೊಯ್ಯೂರು. ಬೆಳ್ತಂಗಡಿ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರು. ಫಾತಿಮತ್ ಸುಮಯ್ಯ, ಸರ್ಕಾರಿ ಪದವಿಪೂರ್ವ ಕಾಲೇಜು ವೇಣೂರು (ಪ್ರಥಮ), ಕುಮಾರಿ ಸುರಕ್ಷಿತಾ, ವಾಣಿ ಪದವಿಪೂರ್ವ ಕಾಲೇಜು, ಬೆಳ್ತಂಗಡಿ (ದ್ವಿತೀಯ), ಕುಮಾರಿ ಜೆನಿತಾ ಪಿರೇರಾ, ಸರ್ಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ (ತೃತೀಯ) ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿದರು. ವಿಭಾಗ ಯೋಜನಾಧಿಕಾರಿ ಅಜೇಯ್ ಕಾರ್ಯಕ್ರಮ ನಿರ್ವಹಿಸಿ ಕೊನೆಯಲ್ಲಿ ಧನ್ಯವಾದವಿತ್ತರು.

ಸಿ.ಎ. ಅಂತಿಮ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Article Image

ಸಿ.ಎ. ಅಂತಿಮ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

2024 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಹೆಚ್ ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ ಶೆಟ್ಟಿ, ಹೇಮಂತ್ ಕುಮಾರ್ ಡಿ.ಕೆ. , ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ - ಒಟ್ಟು 25 ವಿದ್ಯಾರ್ಥಿಗಳು, ಹಾಗೂ ಜನವರಿ 2024ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಲರ‍್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ.ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ ಸೇರಿದಂತೆ 13 ವಿದ್ಯಾರ್ಥಿಗಳು, ಒಟ್ಟು ಈ ವರ್ಷದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗಣನೀಯ ಸಾಧನೆ ಮೆರೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಉಚಿತ ಶಿಕ್ಷಣವನ್ನು ಪಡೆದವರಾಗಿದ್ದಾರೆ. ಇವರಲ್ಲಿ 10 ವಿದ್ಯಾರ್ಥಿಗಳು ಸಿ.ಎ. ಅಂತಿಮ ಪರೀಕ್ಷೆಯ ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳನ್ನು ಪ್ರಥಮ ಪ್ರಯತ್ನದಲ್ಲೆ ಉತ್ತೀರ್ಣರಾಗಿ ಈ ಸಾಧನೆ ಮೆರೆದಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಮೈಂಡ್ ಮ್ಯಾಪಿಂಗ್ ಕಾರ್ಯಾಗಾರ

Article Image

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಮೈಂಡ್ ಮ್ಯಾಪಿಂಗ್ ಕಾರ್ಯಾಗಾರ

ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೈಂಡ್ ಮ್ಯಾಪಿಂಗ್ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ರಿಯಾಗಿ ಮನಶಾಸ್ತ್ರಜ್ಞ, ಮೈಂಡ್ ಟ್ರೈನರ್ ಆಗಿರುವ ಮಂಗಳೂರಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಸರ್ಫ್ರಾಜ್ ಜೆ. ಹಾಶಿಮ್ ಆಗಮಿಸಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸುಪ್ತ ಮನಸ್ಸಿಗೆ ಅದ್ಭುತವಾದ ಸಾಮರ್ಥ್ಯವಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಜೀವನದಲ್ಲಿ ನಾವು ಇಟ್ಟ ಗುರಿಯನ್ನು ತಲುಪಬಹುದು. ಋಣಾತ್ಮಕ ಆಲೋಚನೆಗಳು ಬಂದ ಸಂದರ್ಭದಲ್ಲಿ ಅದನ್ನು ನಿಯಂತ್ರಿಸಲು ಧನಾತ್ಮಕ ಆಲೋಚನೆಗಳನ್ನು ಮಾಡಬೇಕು. ನಮ್ಮ ಮನಸ್ಸು ನಮ್ಮ ಸ್ಥಿಮಿತದಲ್ಲಿದ್ದಲ್ಲಿ ಮಾತ್ರ ಹೊರಗಿನ ಪ್ರಪಂಚದಲ್ಲಿ ಏನೇ ಅನಿಶ್ಚಿತತೆ, ಸಮಸ್ಯೆಗಳಿದ್ದರೂ ಅದನ್ನು ಮೀರಿ ಬೆಳೆಯಲು ಸಾಧ್ಯ. ಸದಾ ಒಳಿತನ್ನೇ ಆಲೋಚಿಸಿ ಇತರರಿಗೂ ಕೇಡನ್ನು ಬಯಸದೇ ಇದ್ದಲ್ಲಿ ಶಾಂತಿಯಿಂದ ಬದುಕಬಹುದು ಎಂದರು. ಮನಸ್ಸಿನ ಸಾಮರ್ಥ್ಯ ವಿದ್ಯಾರ್ಥಿಗಳಿಗೆ ಅರಿವಾಗುವಂತೆ ಒಂದಷ್ಟು ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ವಿಕ್ರಮ್ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

ಉಜಿರೆ: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Article Image

ಉಜಿರೆ: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ 2024- 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜು. 8ರಂದು ನಡೆಯಿತು. ಮುಖ್ಯ ಅತಿಥಿ, ಕಾಲೇಜಿನ ಹಿರಿಯ ವಿದ್ಯಾರ್ಥಿ (ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ವಿಜೇತ ಸ್ವಯಂಸೇವಕ), ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ.ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದ ಅವರು, “ಒಳ್ಳೆಯತನ, ಮಾನವೀಯತೆ ಇದ್ದರೆ ಜನರು ನಮ್ಮನ್ನು ಗುರುತಿಸುತ್ತಾರೆ. ಆತ್ಮವಿಶ್ವಾಸವನ್ನು ಜಾಗೃತಗೊಳಿಸಿದರೆ ಅದಕ್ಕಿಂತ ಒಳ್ಳೆಯ ವಿಚಾರ ಮತ್ತೊಂದಿಲ್ಲ” ಎಂದರು. "ನನ್ನ ಕಾಲೇಜು ದಿನಗಳು ಹಲವಾರು ನೆನಪುಗಳನ್ನು ಕೊಟ್ಟಿವೆ. ಬದುಕಿಗೆ ಹಲವು ಪಾಠಗಳನ್ನು ಕಲಿಸಿಕೊಟ್ಟಿವೆ. ಉಜಿರೆ ಕಾಲೇಜು ಮತ್ತು ಎನ್.ಎಸ್.ಎಸ್. ಘಟಕ ನನ್ನನ್ನು ಬೆಳೆಸಿದೆ, ಬದುಕನ್ನು ಕಲಿಸಿದೆ" ಎಂದು ಅವರು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿದರು. “ಸಾಮಾಜಿಕ ಜಾಲತಾಣದಲ್ಲಿ ಮುಳುಗಿರುವ ಈ ವಾಸ್ತವ ಜಗತ್ತಿನಲ್ಲಿ ಸಮಾಜಮುಖಿಗಳಾಗಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ” ಎಂದರು. ಸೇವೆ ಎನ್ನುವುದು ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವಂತಹದ್ದು. ‘ನನಗಲ್ಲ ನಿನಗೆ’ ಎನ್ನುವ ಧ್ಯೇಯ ವಾಕ್ಯದಡಿ ಎನ್ಎಸ್ಎಸ್ ಘಟಕ ನಿರಂತರವಾಗಿ ಸೇವೆ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು. ನೂತನ ಸ್ವಯಂಸೇವಕ ನಾಯಕರಿಗೆ ಹಿರಿಯ ಸ್ವಯಂಸೇವಕರು ಅಧಿಕಾರ ಹಸ್ತಾಂತರಿಸಿದರು. ಸ್ವಯಂಸೇವಕರಿಂದ ತಯಾರಿಸಲ್ಪಟ್ಟ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಉದ್ಘಾಟನಾ ಕಾರ್ಯಕ್ರಮದ ಬಳಿಕ, ನೂತನವಾಗಿ ಆಯ್ಕೆಗೊಂಡ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಕ್ರಮವನ್ನು ಡಾ. ಮಾಧವ್ ಎಂ.ಕೆ. ನೆರವೇರಿಸಿದರು. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿ, ಪ್ರಸ್ತಾವಿಸಿದರು. ಇನ್ನೋರ್ವ ಯೋಜನಾಧಿಕಾರಿ ಪ್ರೊ. ದೀಪಾ ಆರ್. ಪಿ. ವಂದಿಸಿದರು. ಸ್ವಯಂಸೇವಕಿ ಶ್ವೇತಾ ಕೆ.ಜಿ. ಕಾರ್ಯಕ್ರಮ ನಿರೂಪಿಸಿದರು.

ಸಸ್ಯಶಾಸ್ತ್ರ ವಿಭಾಗದ ಸಂಘಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Article Image

ಸಸ್ಯಶಾಸ್ತ್ರ ವಿಭಾಗದ ಸಂಘಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಸ್ಯಸೌರಭ ಮತ್ತು ಇಕೋ ಕ್ಲಬ್ ಸಂಘಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಜು. 6ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಬಿ. ಎ. ಕುಮಾರ ಹೆಗ್ಡೆ, ಸಂಘದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ವಿಭಾಗದ ‘ಸಸ್ಯಸೌರಭ’ ಭಿತ್ತಿಪತ್ರಿಕೆಯ ಶೈಕ್ಷಣಿಕ ವರ್ಷದ ಮೊದಲ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಸ್ಯಸೌರಭ ಮತ್ತು ಇಕೋ ಕ್ಲಬ್ ನ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸಸ್ಯಸೌರಭ ಸಂಘದ ಅಧ್ಯಕ್ಷೆ ಮೇಘಶ್ರೀ ವಿ. ಎಸ್. ಸ್ವಾಗತಿಸಿದರು, ಇಕೋ ಕ್ಲಬ್ ಅಧ್ಯಕ್ಷೆ ಪೂರ್ವಿಕ ಜಿ. ಕೆ. ವಂದಿಸಿದರು, ಅನುಪಮ್ ಬಿ. ಮತ್ತು ಶ್ಲಾಘನಾ ವಿ. ಎಸ್. ನಿರೂಪಿಸಿದರು.

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವ

Article Image

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವ

ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ "ಅಂಕುರ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕೃತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷೆ, ಫಲಿತಾಂಶವನ್ನು ನೀಡಲು ಸಹಕಾರಿಯಾಗಿದೆ. ಶೈಕ್ಷಣಿಕ ವರ್ಷವನ್ನು ಸರಿಯಾದ ಸಮಯದಲ್ಲಿ ಪೂರಣಗೊಳಿಸಲು ಸಾಧ್ಯ ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ನಾವು ಬೆಳೆಯುವ ಪರಿಸರ ನಮ್ಮ ಬೆಳವಣಿಗೆಯಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪೋಷಕರು ಇದರ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಪದವಿ ಜೀವನದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮ ಹಾಗೂ ನಾವು ಸಂಪಾದಿಸುವ ಜ್ಞಾನ ಮತ್ತು ಸಾಧನೆಯು ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕುಲಸಚಿವ (ಪರೀಕ್ಷಾಂಗ) ಡಾ. ನಾರಾಯಣ ಶೆಟ್ಟಿ, ಕುಲಸಚಿವ (ಆಡಳಿತ) ಡಾ. ಟಿ. ಕೆ. ರವೀಂದ್ರನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ

Article Image

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಮುಂದಿನ ತಿಂಗಳು ಉಜಿರೆಯಲ್ಲಿ ಸದಸ್ಯತ್ವ ಅಭಿಯಾನ ಆಯೋಜಿಸಲಾಗುವುದು ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಹೇಳಿದರು. ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಸಂಘಕ್ಕೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಬಗ್ಗೆ ಅವರು ಮಾತನಾಡಿ ಧನ ಸಂಗ್ರಹದ ಬಗ್ಗೆ ಸಲಹೆ, ಸೂಚನೆ ನೀಡಿದರು. ಕೃಷ್ಣ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ ಐತಾಳ, ಪದ್ಮಕುಮಾರ್ ಮತ್ತು ವಸಂತ ರಾವ್ ದೇಣಿಗೆ ಸಂಗ್ರಹದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚೆಗೆ ನಿಧನರಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ. ಎನ್.ಜಿ. ಪಟವರ್ಧನ್ ಬಗ್ಗೆ ಆರ್.ಯನ್. ಪೂವಣಿ ನುಡಿನಮನ ಸಲ್ಲಿಸಿದರು. ಬಳಿಕ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು. ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ಸಾದರ ಪಡಿಸಿದರು. ಕುಸುಮಾವತಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು.

ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Article Image

ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮೂಡುಬಿದಿರೆ, ವಿದ್ಯಾಗಿರಿ: ಸ್ನಾತಕೋತ್ತರ ವಾಣಿಜ್ಯ ವಿದ್ಯಾರ್ಥಿಗಳು ವಾಣಿಜ್ಯದ ಎಲ್ಲಾ ಆಯಾಮಗಳಲ್ಲಿ ನಿಪುಣತೆ ಹೊಂದುವುದು ಅವಶ್ಯಕ ಎಂದು ಲೆಕ್ಕಪರಿಶೋಧಕ ಎಂ. ಉಮೇಶ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜಗತ್ತು ಒಂದು ರಣರಂಗ. ಇದನ್ನು ಎದುರಿಸುವ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಆಗಿದ್ದಾಗಲೇ ಸಿದ್ಧ ಪಡಿಸಿಕೊಳ್ಳಬೇಕು. ತಂತ್ರಜ್ಞಾನದ ಹೊಸ ಆವಿಷ್ಕಾರ ಕೃತಕ ಬುದ್ಧಿಮತ್ತೆ ವಾಣಿಜ್ಯ ವಿದ್ಯಾರ್ಥಿಗಳಿಗೆ ಸವಾಲಾಗಿ ರೂಪುಗೊಂಡಿದ್ದು,, ನಮ್ಮ ಬುದ್ಧಿಶಕ್ತಿಯನ್ನು ವೃದ್ಧಿಸಿಕೊಂಡರೆ ಮಾತ್ರ ಇದನ್ನು ಪರಿಣಾಮಕಾರಿಯಾಗಿ ಎದುರಿಸಬಹುದು ಎಂದರು. ವಾಣಿಜ್ಯ ವಿದ್ಯಾರ್ಥಿಗಳು ಖಾತೆ, ತೆರಿಗೆ ಹಾಗೂ ಈ ಕ್ಷೇತ್ರದ ಇತರ ವಿಷಯಗಳ ಕುರಿತು ತಿಳಿಯುವುದು ಹಾಗೂ ವಾಣಿಜ್ಯದ ಎಲ್ಲಾ ಆಗುಹೋಗುಗಳನ್ನು ಗಮನಿಸಬೇಕು ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳ ನಿಜವಾದ ಜೀವನ ಪ್ರಾರಂಭವಾಗುತ್ತಿದೆ. ಈ ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ನಿಮ್ಮ ಮೇಲಿನ ನಂಬಿಕೆಯನ್ನು ಬೆಳೆಸಿಕೊಳ್ಳಿ ಎಂದರು. ಧನಾತ್ಮಕ ಆಲೋಚನೆಗಳು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಭಾವ ಬೀರುತ್ತದೆ. ಬೀಳ್ಕೊಡುಗೆ ಸಮಾರಂಭ ವಿದ್ಯಾರ್ಥಿ ಜೀವನದ ಒಂದು ಅಮೂಲ್ಯ ಕಾರ್ಯಕ್ರಮ. ಮುಂದಕ್ಕೆ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ನಮಗೆ ಒಳ್ಳೆಯ ಹೆಸರನ್ನು ತಂದುಕೊಡಲಿ ಎಂದು ಆಶಿಸುತ್ತೇನೆ ಎಂದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ರೇಖಾ ಶೆಟ್ಟಿ ಹಾಗೂ ಸಹಾಯಕ ಪ್ರಾಧ್ಯಾಪಕಿ ಪುಷ್ಪಲತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹಿಬಾ ಫಾತಿಮಾ ಸ್ವಾಗತಿಸಿ, ಖತೀಜಾ ಇನಾಜ್ ನಿರೂಪಿಸಿದರು. ಪ್ರಜ್ಞಾಶ್ರೀ ವಂದಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ಜಿಲ್ಲಾ ಸಂಸ್ಥೆ: ಸಮಾಲೋಚನಾ ಕಾರ್ಯಾಗಾರ

Article Image

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ಜಿಲ್ಲಾ ಸಂಸ್ಥೆ: ಸಮಾಲೋಚನಾ ಕಾರ್ಯಾಗಾರ

ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತರಾದ ಡಾ. ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲವಾಗಿ ಮೂಡುವ ಅವಶ್ಯಕತೆ ಇದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ರೀತಿಯ ಕೊರತೆ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಅಲ್ಲಿನ ಸಿಬ್ಬಂದಿಯದ್ದು. ಇದರಿಂದ ನಮ್ಮ ಜಿಲ್ಲೆಯು ದೇಶಕ್ಕೆ ಮಾದರಿಯಾಗಲಿದೆ ಎಂದರು. ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಸಿ. ಡಿ. ಜಯಣ್ಣ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಕಾಲೇಜು ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ನಾನು ಸ್ಕೌಟ್ಸ್ ಮತ್ತು ಗೈಡ್ಸ್ ಅನ್ನು ಪಸರಿಸುವ ಧ್ಯೇಯದ ಸಭೆಯನ್ನು ಆಯೋಜಿಸುತ್ತೇನೆ ಎಂದು ಭರವಸೆ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್ ಸಿಂಧ್ಯ ಮಾತನಾಡಿ, ರಾಜ್ಯದ ಶಿಕ್ಷಣ ಕ್ಷೇತ್ರದ ಸಿಬ್ಬಂದಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡುವಲ್ಲಿ ಸಹಕಾರಿಯಾಗಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಯಾವುದೇ ರೀತಿಯ ಸಂಭಾವನೆ ನೀಡದೆ ಇದ್ದರೂ, ನಮ್ಮ ಸಿಬ್ಬಂದಿ ಯಾವುದೇ ಅಪೇಕ್ಷೆ ಇಲ್ಲದೆ ತಮ್ಮ ಅಮೂಲ್ಯ ಸಮಯವನ್ನು ಸಮರ್ಪಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ದೇಶದಲ್ಲೇ ಸ್ಥಳೀಯ ಸಂಸ್ಥೆಯೊಂದಕ್ಕೆ ಇಷ್ಟು ಸುಲಲಿತವಾದ ಕಾರ್ಯಾಲಯ ಇರುವುದು ಮೂಡುಬಿದಿರೆಯಲ್ಲಿ ಮಾತ್ರ, ಇದು ಡಾ ಎಂ ಮೋಹನ ಆಳ್ವರ ಮಾರ್ಗದರ್ಶನದಿಂದ ಸಾಧ್ಯವಾಗಿದೆ. ಎಲ್ಲಾ ಪಕ್ಷ, ಜಾತಿ, ಧರ್ಮಗಳೂ ಪ್ರೀತಿಸುವ ವ್ಯಕ್ತಿ ಡಾ. ಎಂ. ಮೋಹನ ಆಳ್ವ ಅವರಿಂದ ನಮಗೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ2024-25ನೇ ಸಾಲಿನಲ್ಲಿ ನಡೆಯಲಿರುವ ಚಟುವಟಿಕೆಗಳ ಪುಸ್ತಕ ಬಿಡುಗಡೆ ಮಾಡಲಾಯಿತು. ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಬಿ. ಎನ್ ತುಂಬೆ ಸ್ವಾಗತಿಸಿ, ರಾಜ್ಯ ಸಂಘಟನಾ ಆಯುಕ್ತರಾದ ಎಂ ಪ್ರಭಾಕರ ಭಟ್ ವಂದಿಸಿ, ಜಿಲ್ಲಾ ಕೋಶಾಧಿಕಾರಿಗಳಾದ ನವೀನ್‌ಚಂದ್ರ ಅಂಬೂರಿ ನಿರೂಪಿಸಿದರು.

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆ

Article Image

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆ

'ವೈದ್ಯೋ ನಾರಾಯಣೋ ಹರಿ' ಎಂಬ ಉಕ್ತಿಯಂತೆ, ಜುಲೈ 1ರಂದು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ವೈದ್ಯಕೀಯ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ದೀಪ್ತಿ ರಾವ್ ರವರು ಉಪಸ್ಥಿತರಿದ್ದು ಉತ್ತಮ ಆರೋಗ್ಯಕರವಾದ ಜೀವನ ನಡೆಸಲು ಯಾವ ಕ್ರಮವನ್ನು ಅನುಸರಿಸಬೇಕೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಅದೇ ರೀತಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ನಾವು ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರಬೇಕು, ನಮ್ಮ ಗುರಿ ಏನಿದೆಯೋ ಅದನ್ನು ಮುಟ್ಟಲು ನಿರಂತರ ಓದು ಅಗತ್ಯ ಅನ್ನುವುದನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಶ್ಮಿತಾರವರು ವೈದ್ಯಕೀಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಂಯೋಜಕರಾದ ಶ್ರಿಪ್ರಸಾದ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಖಾರವರು ನೆರವೇರಿಸಿ, ದಿಯಾರವರು ವಂದಿಸಿದರು.

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 'ಅಂಕುರ 2024' ಕಾರ್ಯಗಾರ

Article Image

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 'ಅಂಕುರ 2024' ಕಾರ್ಯಗಾರ

ಮೂಡುಬಿದಿರೆ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರಿರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರಿರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು ನಡೆಯಬೇಕು. ಇದರಿಂದ ಪಡೆದ ಜ್ಞಾನವನ್ನು ನಾವು ಇತರರಿಗೆ ತಿಳಿಸುವ ಅವಶ್ಯಕತೆ ಇದೆ. ಪ್ರಸ್ತುತ ವರ್ತಮಾನದಲ್ಲಿ ಜನರು ಸಾಕ್ಷಿಗಳನ್ನು ಹೆಚ್ಚು ನಂಬುತ್ತಾರೆ. ಹಾಗಾಗಿ ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು ಎಂದು ಹೇಳಿದರು. ನಮ್ಮ ಹಿಂದಿನ ತಲೆಮಾರಿನ ಜನರಿಗೆ ಪ್ರಕೃತಿಯಲ್ಲಿ ದೊರೆಯುವ ಔಷಧಿಗಳ ಬಗ್ಗೆ ಅಪಾರ ಜ್ಞಾನವಿದ್ದರೂ ಅವರು ಆ ಜ್ಞಾನವನ್ನು ಮುಂದಿನ ತಲೆಮಾರಿಗೆ ಪಸರಿಸಿಲ್ಲ. ಆದರೆ ಈ ತಪ್ಪನ್ನು ನಾವು ಮಾಡಿದರೆ ಇದರಿಂದ ನಮ್ಮ ಮುಂದಿನ ಪೀಳಿಗೆಗೆ ನಷ್ಟವಾಗಲಿದೆ. ಹಾಗಾಗಿ ಇಂತಹ ಕಾರ್ಯಗಾರದಲ್ಲಿ ಪಡೆದ ಜ್ಞಾನವನ್ನು ನಾವು ಸಂಗ್ರಹಿಸಿ, ಪಸರಿಸಬೇಕು ಎಂದರು. ಆಳ್ವಾಸ್ ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ಯಶಸ್ಸಿನ ಹಿಂದೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವರ ಶ್ರಮವಿದೆ. ಇದನ್ನು ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು. ಕಾರ್ಯಗಾರದ ಮೊದಲ ಅವಧಿಯನ್ನು ಆಳ್ವಾಸ್ ವೈದ್ಯಕೀಯ ಕೇಂದ್ರದ ಸ್ತ್ರಿರೋಗ ತಜ್ಞೆ ಡಾ. ಹನಾ ಶೆಟ್ಟಿ ಹಾಗೂ ನಂತರದ ಅವಧಿಗಳನ್ನು ಕೇರಳದ ಸರಕಾರಿ ಆಯುರ್ವೇದ ವೈದ್ಯಕೀಯ ಕೇಂದ್ರದ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಮಿನಿ ಪಿ., ಸ್ನಾತಕೋತ್ತರ ಪ್ರಸೂತಿ ಹಾಗೂ ಸ್ತ್ರಿರೋಗ ವಿಭಾಗದ ಮುಖ್ಯಸ್ಥ ಡಾ. ಅಶೋಕನ್, ಜಾಮ್‌ನಗರ ವಿವಿಯ ಇನ್‌ಸ್ಟಿಟ್ಯೂಟ್ ಆಫ್ ಟೀಚಿಂಗ್ ಆ್ಯಂಡ್ ರಿಸರ್ಚ್ ಇನ್ ಆಯುರ್ವೇದದ ಸ್ನಾತಕೋತ್ತರ ಪ್ರಸೂತಿ ಹಾಗೂ ಸ್ತ್ರಿರೋಗ ವಿಭಾಗದ ಪ್ರಾಧ್ಯಾಪಕಿ ಡಾ. ಶಿಲ್ಪಾ ಬಿ. ಡೊಂಗಾ ನಡೆಸಿದರು. ದೇಶದ ವಿವಿಧ ಕಾಲೇಜುಗಳಿಂದ 80ಕ್ಕೂ ಅಧಿಕ ವಿದ್ಯಾರ್ಥಿಗಳು, ಪ್ರಾಧ್ಯಪಕರು ಭಾಗವಹಿಸಿದ್ದರು. ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಕವಿತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಡಾ. ಕಾವ್ಯ ರಾವ್ ಹಾಗೂ ಡಾ. ಪ್ರವೀಣಾ ಕೆ. ನಿರೂಪಿಸಿದರು

ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Article Image

ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ವಿದ್ಯಾಗಿರಿ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಯಲು ಸಾಧ್ಯ. ಇಲ್ಲಿ ನಡೆಯುವ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಅವಶ್ಯವಾದ ಪಾಠಗಳನ್ನು ಹೇಳಿಕೊಡುತ್ತವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ. ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮುಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಪಠ್ಯದ ಕಲಿಕೆಯ ಜೊತೆಗೆ ಪಠ್ಯತರ ಚಟುವಟಿಕೆಗಳು ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳ ಮನಸ್ಥಿತಿ ಧನಾತ್ಮನಕವಾಗಿರಲು ಸಾಧ್ಯ ಎಂದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮದ್ ಸದಾಕತ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಾರ್ಥನೆಯಿಂದಲೇ ಇದರ ಧ್ಯೇಯವನ್ನು ತಿಳಿಯಬಹುದಾಗಿದೆ. ಸೇವಾ ಮನೋಭಾವ ಎಲ್ಲಾ ವಿದ್ಯಾರ್ಥಿಗಳು ಬೆಳೆಸುವುದು ಅವಶ್ಯಕ ಎಂದರು. ಯುವಜನತೆ ದೇಶದ ಆಸ್ತಿ. ಈ ಯುವಶಕ್ತಿಯನ್ನು ಬೆಳೆಸುವ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಕೌಶಲ, ನಾಗರಿಕ ಮೌಲ್ಯಗಳು ಹಾಗೂ ದೈಹಿಕ ಸಾಮರ್ಥ್ಯ ಬೆಳೆಸುವಲ್ಲಿ ಇದರ ಪಾತ್ರ ಅನನ್ಯ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಝಾನ್ಸಿ ಪಿ. ಎನ್ ಹಾಗೂ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ರೋವರ್ ಸ್ಕೌಟ್ ಲೀಡರ್ ಸುನಿಲ್, ರೇಂಜರ್ ಲೀಡರ್ ವೀಣಾ, ದಳನಾಯಕ ಕಾರ್ತಿಕ್, ದಳ ನಾಯಕಿ ನಕ್ಷತ್ರ ಇದ್ದರು. ವಿದ್ಯಾರ್ಥಿನಿ ನಕ್ಷತ್ರ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ವಂದಿಸಿ, ವಿದ್ಯಾರ್ಥಿನಿ ಸನ್ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

Article Image

ಜು. 31: ಜಮೀನಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ

ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರೈತರು ತಮ್ಮ ಜಮೀನಿಗಳ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ (RTC), ಆಧಾರ್ ಕಾರ್ಡ್ ಪ್ರತಿ ಮತ್ತು ಆಧಾರ್‌ಗೆ ಲಿಂಕ್ ಇರುವ ಮೊಬೈಲ್ ಪೋನ್‌ನೊಂದಿಗೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿ (VA) ಅಥವಾ ನಾಡಕಚೇರಿಗೆ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಧಾರವಾಡ: ವಿಶ್ವ ಅಧಿಕ ರಕ್ತದೊತ್ತಡ ದಿನ

Article Image

ಧಾರವಾಡ: ವಿಶ್ವ ಅಧಿಕ ರಕ್ತದೊತ್ತಡ ದಿನ

ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಇತ್ತೀಚೆಗೆ “ರಕ್ತದೊತ್ತಡವನ್ನು ನಿಖರವಾಗಿ ಅಳೆಯಿರಿ, ಅದನ್ನು ನಿಯಂತ್ರಿಸಿ, ಹೆಚ್ಚು ಕಾಲ ಬದುಕಿ” ಎಂಬ ಧ್ಯೇಯೆಯೊಂದಿಗೆ “ವಿಶ್ವ ಅಧಿಕ ರಕ್ತದೊತ್ತಡ ದಿನ”ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ರ‍್ಯಾಲಿ ಮತ್ತು ಅಧಿಕ ರಕ್ತದೊತ್ತಡ ತಡೆಯುವ ಪ್ರತಿಜ್ಞೆ ಸ್ವೀಕಾರ, ವೃದ್ದಾಶ್ರಮ ಭೇಟಿ, ಆರೋಗ್ಯ ಸಂಸ್ಥೆಗಳಲ್ಲಿ ರಕ್ತದೊತ್ತಡ ಪರೀಕ್ಷಿಸುವುದು, ರಸಪ್ರಶ್ನೆ ಹಾಗೂ ಬಿತ್ತಿಪತ್ರ ಪ್ರದರ್ಶನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವೈದ್ಯಕೀಯ ವiಹಾವಿದ್ಯಾಲಯದ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕಿಯವರಾದ ಡಾ. ಪುಷ್ಪಾ ಪಾಟೀಲ್ ಅವರು ರ‍್ಯಾಲಿಯನ್ನು ಉದ್ಘಾಟಿಸಿ, ಮಾತನಾಡುತ್ತಾ: 40 ವರ್ಷ ಮೇಲ್ಪಟ್ಟ ಜನರು ಆಗಾಗ ಅಧಿಕ ರಕ್ತದೊತ್ತಡ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ರಕ್ತದೊತ್ತಡದಿಂದ ಅನೇಕ ಆರೋಗ್ಯ ಸಮಸ್ಯೆಗಳುಂಟಾಗುವುದರಿಂದ ಆಗಾಗ ವೈದ್ಯರ ಹತ್ತಿರ ತಪಾಸಣೆ ಮಾಡುತ್ತಿರಬೇಕು. ಯಾವುದೇ ರೋಗ ಲಕ್ಷಣಗಳು ಕಾಣದೆ ಕೆಲವೊಮ್ಮೆ ಅಧಿಕ ರಕ್ತದೊತ್ತಡವು ಅನುವಂಶೀಯವಾಗಿರಬಹುದು. ಆರೋಗ್ಯಕರ ಆಹಾರ ಸೇವನೆ, ಯೋಗ, ಧ್ಯಾನ, ವ್ಯಾಯಾಮಗಳೊಂದಿಗೆ ಉತ್ತಮ ಜೀವನ ಶೈಲಿಯಿಂದ ರೋಗಗಳನ್ನು ತಡೆಯಬಹುದು ಎಂದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ವಿಭಾಗದ ವೈದ್ಯರಾದ ಡಾ. ದೀಪ್ತಿ ಮತ್ತು ಡಾ. ವಂದನಾ, ಎಸ್.ಡಿ.ಎಂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ದೇಶಪಾಂಡೆ, ಮಲ್ಲಿಕಾರ್ಜುನ ಪಿ., ರೇಣುಕಾ ಬಾಗೇವಾಡಿ, ಪ್ರವೀಣ ತುಪ್ಪದ್ ಹಾಗೂ ಲಕಮಾಪುರ ಗ್ರಾಮ ಪಂಚಾಯಿತಿ ಮುಖಂಡರು ಉಪಸ್ಥಿತರಿದ್ದರು. ಲಕಮಾಪುರ ಗ್ರಾಮಸ್ಥರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸೋಮಶೇಖರ್ ಕೊಡ್ಲಿವಾಡ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

ಎಕ್ಸಲೆಂಟ್ ವಿದ್ಯಾಲಯದಲ್ಲಿ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ

Article Image

ಎಕ್ಸಲೆಂಟ್ ವಿದ್ಯಾಲಯದಲ್ಲಿ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ

ಆಧುನಿಕ ಸಮಾಜದ ಬಹುದೊಡ್ಡ ಸವಾಲು ಮಾದಕ ದ್ರವ್ಯ ಸೇವನೆಯಾಗಿದೆ. ವಿಶೇಷವಾಗಿ ಯುವಜನತೆ ದುರ್ವ್ಯಸನಗಳಿಗೆ ದಾಸರಾಗಿ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಶಾಪವಾಗಿ ಪರಿಣಮಿಸುತ್ತಿದ್ದಾರೆ. ತಾತ್ಕಾಲಿಕ ಮೋಜಿಗಾಗಿ ಆರಂಭವಾಗುವ ಮಾದಕ ವಸ್ತುಗಳ ಸೇವನೆಯಿಂದ ಅವರ ಭವಿಷ್ಯವನ್ನು ನಾಶಮಾಡುವ ಜೊತೆಗೆ ಸಮಾಜದ ನೆಮ್ಮದಿಯನ್ನು ಕೆಡಿಸುವರು. ಮನುಷ್ಯನ ನರಮಂಡಲದ ಮೇಲೆ ಪರಿಣಾಮ ಬೀರುವ ಇಂತಹ ದುಶ್ಚಟಗಳಿಂದ ದೂರವಿದ್ದು ವೈಯಕ್ತಿಕ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ಸಂದೇಶ ಪಿ. ಜಿ. ಅವರು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಸೇವನೆಯ ಅಡ್ಡ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರು ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಿ ಹದಿಹರೆಯದ ಸಮಸ್ಯೆಗಳಲ್ಲಿ ಮಾದಕ ವಸ್ತು ಸೇವನೆಯು ಪ್ರಮುಖವಾದುದು. ಅವುಗಳಿಂದ ಉಂಟಾಗುವ ಅನರ್ಥಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಸುರಕ್ಷಿತ ಮತ್ತು ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಮಾಜ ಸ್ಪಂದಿಸಬೇಕಾಗಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕರಾದ ದಿವಾಕರ ರೈ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ

Article Image

ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ

ಮೂಡುಬಿದಿರೆ: ಮೂಲತಃ ಕೃಷಿ ಕುಟುಂಬದಿಂದ ಬಂದ ಪ್ರೋ. ನರೇಂದ್ರ ನಾಯಕ್‌ರು ಶೈಕ್ಷಣಿಕ ಕ್ಷೇತ್ರದಲ್ಲೂ ಕೃಷಿಯ ಮೂಲಸತ್ವಗಳನ್ನು ಅಳವಡಿಸಿಕೊಂಡು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶೈಕ್ಷಣಿಕ ಕೃಷಿಕ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ(ಕುಪ್ಮಾ) ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಮೂಡುಬಿದಿರೆಯ ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಕಲಾ ಪ್ರೇಮಿ, ಶಿಕ್ಷಣ ತಜ್ಞ ಪ್ರೋ. ನರೇಂದ್ರ ಎಲ್. ನಾಯಕ್ ಅವರ ಷಷ್ಟಬ್ದಿ ‘ನಮ್ಮೊಲುಮೆ’ ಸನ್ಮಾನ ಸಮಾರಂಭ ಮತ್ತು ಕುಪ್ಮಾ ಸದಸ್ಯರ ಸಮಾಗಮ ಕಾರ‍್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೋ. ನರೇಂದ್ರ ಎಲ್. ನಾಯಕ್, ಒಬ್ಬ ವ್ಯಕ್ತಿ, ತಾನು ಮಾಡುವ ಕೆಲಸದಿಂದ ಗೌರವ, ಪ್ರೀತಿಯನ್ನು ಗಳಿಸಲು ಸಾಧ್ಯ. ನಾನು ಪ್ರತೀ ಕೆಲಸವನ್ನು ನಿಸ್ವಾರ್ಥದಿಂದ, ಜೀವನದ ಪ್ರತಿ ಕ್ಷಣವನ್ನು ಅನುಭವಿಸುತ್ತಾ ಕಳೆಯುತ್ತೇನೆ. ಕುಪ್ಮಾದ ಇತರೆ ಸದಸ್ಯರ ಸಾಧನೆ ಮುಂದೆ ನನ್ನ ಸಾಧನೆ ಚಿಕ್ಕದು. ನಿಮ್ಮ ಸಾಧಕರ ಸಾಲಿನಲ್ಲಿ ನನಗೊಂದು ಪುಟ್ಟ ಸ್ಥಾನಕೊಡಿ, ಅಷ್ಟೇ ಸಾಕು ಎಂದು ಸಂತಸವನ್ನು ವ್ಯಕ್ತಪಡಿಸಿದರು. ಶಿಕ್ಷಣ ಪ್ರೇಮಿಗಳಿಂದ ಶಿಕ್ಷಣ ಸಂಸ್ಥೆ ಕುಪ್ಮಾದ ಜೊತೆ ಕಾರ‍್ಯದರ್ಶಿ ಮೈಸೂರಿನ ವಿಶ್ವನಾಥ ಶೇಷಾಚಲ ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ಹಿನ್ನಲೆಯುಳ್ಳವರು ಸ್ಥಾಪಿಸಿದರೆ, ಕರಾವಳಿಯಲ್ಲಿ ಕಲೆ, ಸಾಹಿತ್ಯ, ಶಿಕ್ಷಣದ ಅಭಿರುಚಿಯುಳ್ಳವರು ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು. ತಮ್ಮ ವರ್ತನೆಯಲ್ಲಿ ಆದರ್ಶ ತುಂಬಿಕೊಂಡಿರುವವರು ನರೇಂದ್ರ ನಾಯಕರು, ನಮಗೆಲ್ಲರಿಗೆ ಕಾರ‍್ಯಸಫಲತೆಯಲ್ಲಿ ಜೀವಂತ ಉದಾಹರಣೆ ಎಂದರು. ವಿದ್ಯೆ ವಿನಯವುಳ್ಳವನಿಗೆ ಸ್ಥಾನಮಾನ ಬರುತ್ತದೆ ಎಂಬುದಕ್ಕೆ ನರೇಂದ್ರ ನಾಯಕರು ಉತ್ತಮ ಉದಾಹರಣೆ ಎಂದು ದಾವಣಗೆರೆ ಕುಪ್ಮಾ ಘಟಕದ ಸಂಯೋಜಕ ಎಸ್. ಜೆ. ಶ್ರೀಧರ್ ನುಡಿದರು. ಜೀವನ ಮರಳಿ ಅರಳಲಿ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಪ್ಮಾದ ಗೌರವಾಧ್ಯಕ್ಷ ಡಾ. ಎಂ. ಬಿ. ಪುರಾಣಿಕ್, ಷಷ್ಟಬ್ದಿ ಆಚರಿಸುತ್ತಿರುವ ನರೇಂದ್ರ ನಾಯಕರ ಜೀವನ ಮರಳಿ ಅರಳಲಿ ಎಂದು ಹಾರೈಸಿದರು. ಕಾರ‍್ಯಕ್ರಮದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್ ಹಾಗೂ ಡಾ. ಉಷಾ ಪ್ರಭಾ ನಾಯಕ್ ದಂಪತಿಗಳನ್ನು ಕುಪ್ಮಾವತಿಯಿಂದ ಸನ್ಮಾನಿಸಲಾಯಿತು. ಕಾರ‍್ಯಕ್ರಮ ಆರಂಭದಲ್ಲಿ ಪ್ರೋ. ನರೇಂದ್ರ ಎಲ್. ನಾಯಕ್‌ರ ಜೀವನ ಆಧಾರಿತ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಶಕ್ತಿ ಶಿಕ್ಷಣ ಸಮೂಹದ ಡಾ. ಕೆ.ಸಿ. ನಾಕ್, ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ನಾಯಕ್ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ನಿರೂಪಿಸಿ, ಕುಪ್ಮಾ ಉಪಾಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿ, ಕುಪ್ಮಾ ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ವಂದಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ

Article Image

ಅಂತರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಟ್ಟಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಉಚಿತ ಸಮವಸ್ತ್ರ ಹಾಗೂ ಕೊಡೆ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು. ಮೊದಲಿಗೆ ಮಂಜುಳಾ ಜೈನ್ ಇವರ ಮಾರ್ಗದರ್ಶನದಲ್ಲಿ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕತೆಯನ್ನು ನೀಡಲಾಯಿತು. ಯೋಗ ದಿನಾಚರಣೆಯ ವಿಶೇಷತೆ ಮತ್ತು ಆಚರಣೆಯ ಮಹತ್ವದ ಬಗ್ಗೆ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು. ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ದಿಗಂಬರ ಜೈನ ವಿದ್ಯಾ ವರ್ಧಕ ಸಂಘ(ರಿ.) ಇದರ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಈ ರೀತಿಯ ಕಾರ್ಯಕ್ರಮಗಳು ಇನ್ನೂ ಹೆಚ್ಚು ನಡೆಯಲಿ ಎಂದು ಹಾರೈಸಿದರು. ಈ ಸುಸಂದರ್ಭದಲ್ಲಿ ಕೊಡುಗೈ ದಾನಿಯಾದ ಪ್ರಥ್ವಿರಾಜ್ ಶೆಟ್ಟಿ ಇವರು ಸುಮಾರು 30 ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿದರು. ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾದ ಪೂರ್ಣಚಂದ್ರ ಜೈನ್ ಇವರ ವತಿಯಿಂದ 1 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡಬಿದಿರೆ ಇದರ ಅಧ್ಯಕ್ಷರಾಗಿರುವ ಪೂರ್ಣಚಂದ್ರ ಜೈನ್ ಮತ್ತು ಇದರ ಕಾರ್ಯದರ್ಶಿಗಳಾದ ಎಂ.ಕೆ. ಹರೀಶ್, ಶಾಲಾಭಿವೃದ್ಧಿಯ ನೂತನ ಅಧ್ಯಕ್ಷರಾದ ಪವನ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ. ಯೋಗ ಶಿಕ್ಷಕಿ ಮಂಜುಳಾ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ರೋಲಿಟಾರವರು ಸ್ವಾಗತಿಸಿದರು, ದಿವ್ಯಾಶ್ರೀ ಧನ್ಯವಾದಗೈದರು, ಪ್ರಣೀತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಎಕ್ಸಲೆಂಟ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

Article Image

ಎಕ್ಸಲೆಂಟ್: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಯೋಗ ಎಂದರೆ ದೇಹ ಮನಸ್ಸುಗಳ ಚೈತನ್ಯದ ಶಕ್ತಿ. ಇದು ಮನುಷ್ಯನನ್ನು ಉಲ್ಲಾಸದಾಯಕನನ್ನಾಗಿ ಮಾಡುತ್ತದೆ. ಪ್ರತಿನಿತ್ಯ ಯೋಗದ ಅಭ್ಯಾಸ ಇಟ್ಟುಕೊಳ್ಳಬೇಕು. ಅದರಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ. ಆರೋಗ್ಯಕ್ಕೆ ಯೋಗವೇ ಭಾಗ್ಯ ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. 'ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗ' ಎನ್ನುವುದು ಈ ವರ್ಷದ ಥೀಮ್ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯದ ಸಂಬಂಧವನ್ನು ಒತ್ತಿ ಹೇಳುತ್ತದೆ. ಆದ್ದರಿಂದ ಯೋಗ ಜೀವನಕ್ಕೆ ಬಹು ಮುಖ್ಯವಾಗಿ ಬೇಕಾಗಿದೆ ಎಂದು ಮಸ್ಕತ್ ನ ಓಮನ್‌ನಲ್ಲಿ ಯೋಗ ತರಬೇತುದಾರರಾಗಿರುವ ಜಗದೀಶ್ ಬಂಗೇರ ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎನ್‌ಸಿ, ಎನ್‌ಎಸ್‌ಎಸ್, ರೇಂಜರ್ ರೋವರ್, ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಯೋಗ ನಮ್ಮ ಭಾರತದ ಸಂಸ್ಕ್ರತಿಯಾಗಿದೆ, ಸಂಸ್ಕಾರವಾಗಿದೆ. ಋಷಿ ಮುನಿಗಳಿಂದ ಬಳುವಳಿಯಾಗಿ ಬಂದಿರುವ ಯೋಗದ ಅಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ದಿನಂಪ್ರತಿ ನಮ್ಮ ಜೀವನದಲ್ಲಿ ಅದು ಒಂದು ಭಾಗವಾಗಬೇಕು. ಯೋಗ ಧ್ಯಾನದಿಂದ ಬದುಕು ಸುಂದರವಾಗಿ ರೂಪಿತಗೊಳ್ಳುತ್ತದೆ. ಅಂತಹ ಯೋಗದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಎಂದರು. ಸಂಸ್ಕ್ರತಿ ಯೋಗ ತಂಡ ಮಸ್ಕತ್ ಓಮನ್ ಇಲ್ಲಿನ ಶ್ವೇತ ಪ್ರಭು, ವೀಣಾ ರೋಹಿತ್ ಕುಮಾರ್, ರವಿ ಪ್ರಕಾಶ್ ಭಟ್ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಂದ ಯೋಗದ ಸರ್ವ ಆಸನಗಳನ್ನು ಪ್ರದರ್ಶನ ಮಾಡಿಸಿದರು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಎನ್‌ಸಿಸಿ ಅಧಿಕಾರಿ ಮಹೇಂದ್ರ ಕುಮಾರ್ ಜೈನ್, ಎನ್‌ಎಸ್‌ಎಸ್ ಅಧಿಕಾರಿ ತೇಜಸ್ವಿ ಭಟ್, ರೇಂಜರ‍್ಸ್ ರೋವರ‍್ಸ್ ಅಧಿಕಾರಿಗಳಾದ ಸಂಧ್ಯಾ ಹಾಗೂ ಪ್ರದೀಪ್ ಹಾಗೂ ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಎಕ್ಸಲೆಂಟ್ ಸೆಂಟ್ರಲ್ ಶಾಲೆಯ ಶೈಕ್ಷಣಿಕ ಸಂಯೋಜಕ ಪ್ರಸಾದ ಅತಿಥಿಗಳನ್ನು ಪರಿಚಯಿಸಿದರು, ವಿದ್ಯಾರ್ಥಿನಿ ಸುಧಾಶ್ರೀ ಕಾರ್ಯಕ್ರಮ ನಿರೂಪಿಸಿದರು. ದೈವಿಕ್ ಸ್ವಾಗತಿಸಿದರು ಯಶಸ್ವಿನಿ ವಂದಿಸಿದರು. ವಿದ್ಯಾರ್ಥಿಗಳಿಂದ ಯೋಗದ ಕುರಿತಾದ ವೈವಿಧ್ಯಮಯ ನೃತ್ಯ ನಡೆಯಿತು.

ಸತ್ತೂರು, ಧಾರವಾಡ: ಅಂತರಾಷ್ಟ್ರಿಯ ಯೋಗ ದಿನಾಚರಣೆ

Article Image

ಸತ್ತೂರು, ಧಾರವಾಡ: ಅಂತರಾಷ್ಟ್ರಿಯ ಯೋಗ ದಿನಾಚರಣೆ

ಎಸ್.ಡಿ.ಎಂ. ವಿಶ್ವವಿದ್ಯಾಲಯವು ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಧ್ಯೇಯೆಯೊಂದಿಗೆ ದಿನಾಂಕ 21 ಜೂನ್ ರಂದು ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಮುಖ್ಯ ಅತಿಥಿಗಳಾಗಿದ್ದು, ಮತ್ತಿತರ ಗಣ್ಯರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಅರಳಿಹಳ್ಳಿ ಅವರು ಯೋಗದ ಮಹತ್ವ ತಿಳಿಸಿ ಅತಿಥಿ ಭಾಷಣ ಮಾಡುತ್ತಾ: ಯೋಗದಿಂದ ನಮ್ಮ ಆತ್ಮ ಸರ್ವೋಚ್ಛವಾಗುತ್ತದೆ. ಯೋಗದಿಂದ ಮನಸ್ಸಿಗೆ ಸುಖ ಮತ್ತು ಶಾಂತಿ ಸಿಗುತ್ತದೆ. ಯೋಗವು ಸಮಗ್ರ ದೇಹವನ್ನು ಸಮತೋಲನದಲ್ಲಿರಿಸುತ್ತದೆ. ಅಷ್ಟಾಂಗ ಯೋಗವು ಜೀವನದಲ್ಲಿ ಪರಿಪೂರ್ಣತೆಯನ್ನು ಗಳಿಸಲು ಸಹಾಯ ಮಾಡುತ್ತದೆ ಎಂದರು. ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಯೋಗ ಪರಿಣಿತರಾದ ಡಾ. ಸತೀಶ ಪಾಟೀಲ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯೋಗ ತಜ್ಞರ ತಂಡವು ವಿಶೇಷ ಆಸನಗಳನ್ನು ಪ್ರದರ್ಶಿಸಿದರು. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ಡಾ. ನಿರಂಜನ್ ಕುಮಾರ ಅವರು ಯೋಗ ತಜ್ಞರ ತಂಡವನ್ನು ಶ್ಲಾಘಿಸಿ, ಸನ್ಮಾನಿಸಿದರು. ಎಸ್.ಡಿ.ಎಂ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ ನಾಯ್ಕ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಕೃತಿಕಾ ಗುತ್ತಲ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಿರಣ ಕುಮಾರ ಅವರು ವಂದನಾರ್ಪಣೆ ಸಲ್ಲಿಸಿದರು.

ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Article Image

ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

ಉಜಿರೆ: ದೈಹಿಕ ಹಾಗೂ ಮಾನಸಿಕ ಸಮತೋಲನದೊಂದಿಗೆ ಆರೋಗ್ಯಭಾಗ್ಯ ಕಾಪಾಡಲು ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಹತ್ತನೆ ವಿಶ್ವ ಯೋಗ ದಿನ ಆಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಕ್ಕೆ ವಿದೇಶಗಳಿಂದ ಔಷಧಿ ಆಮದು ಮಾಡುತ್ತೇವೆ. ವಿದೇಶಗಳಿಗೆ ಭಾರತದಿಂದ ಔಷಧಿ ರಹಿತ ಯೋಗವನ್ನು ರಫ್ತು ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ಜಾಗತಿಕಮಟ್ಟದಲ್ಲಿ ಯೋಗದ ಮಹತ್ವ ಪ್ರಚಾರವಾಗಿದ್ದು ಎಲ್ಲರೂ ಆಸಕ್ತಿ ಮತ್ತು ಕುತೂಹಲದಿಂದ ಯೋಗಾಭ್ಯಾಸ ಮಾಡುತ್ತಿದ್ದಾರೆ. ಯೋಗ ಮತ್ತು ಆಧ್ಯಾತ್ಮದ ತಾತ್ವಿಕ ನೆಲೆಯಲ್ಲಿ ಭಾರತ ವಿಶ್ವಗುರುವಿನ ಮಾನ್ಯತೆ ಹೊಂದಿದೆ. ಧರ್ಮಸ್ಥಳದ ಶಾಂತಿವನಟ್ರಸ್ಟ್ ನೇತೃತ್ವದಲ್ಲಿ ಧರ್ಮಸ್ಥಳ, ಮಣಿಪಾಲದ ಬಳಿ ಪರೀಕ್ಷಾ ಮತ್ತು ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಿ ಆರೋಗ್ಯಭಾಗ್ಯ ರಕ್ಷಣೆಗೆ ಪ್ರೋತ್ಸಾಹ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದರು. ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಹೆಗ್ಗಡೆಯವರು ಅಭಿನಂದಿಸಿದರು. ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜೋಸ್ ಎಬ್‌ನಜೀರ್ ಮತ್ತು ತುಮಕೂರಿನ ಸಿದ್ದಾರ್ಥ ಉನ್ನತ ಶಿಕ್ಷಣ ಅಕಾಡೆಮಿ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗವಿಜ್ಞಾನಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು. ಯೋಗಪ್ರಚಾರದಲ್ಲಿ ವಿಶೇಷ ಸೇವೆ-ಸಾಧನೆ ಮಾಡಿದ ಮೈಸೂರಿನ ಕುಮಾರಿ ಖುಷಿ, ಎಚ್. ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕುಮಾರಿ ಖುಷಿ ಎಚ್. ಯೋಗ ಪ್ರಾತ್ಯಕ್ಷಿಕೆ ನೀಡಿದರು. ಯೋಗ ಸಾಧಕರಾದ ಅಶ್ವತ್ ಹೆಗಡೆ ಮತ್ತು ಡಾ. ಅಚ್ಯುತ ಈಶ್ವರನ್ ಅವರನ್ನು ಗೌರವಿಸಲಾಯಿತು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭ ಹಾರೈಸಿದರು. ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಸುಧಾಕರ ಕೊಟ್ಟಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಡಾ. ಶಶಿಕಾಂತ್ ಜೈನ್ ಮತ್ತು ಡಾ. ಸುಜಾತ ಉಪಸ್ಥಿತರಿದ್ದರು. ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಧನ್ಯವಾದವಿತ್ತರು. ಕುಮಾರಿ ಅನನ್ಯಾ ಜೈನ್ ಮತ್ತು ಡಾ. ಕೃತಿಕಾ ರಾಮಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

Article Image

ಪ್ರಕೃತಿ ಚಿಕಿತ್ಸೆ-ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ-“ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪ್ರೋಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಭಾಗದ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಪ್ರಯುಕ್ತ ಪೋಸ್ಟರ್ ತಯಾರಿಕೆ, ವಿಡೀಯೋ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಯೋಗ ವಿಭಾಗದ ಡೀನ್ ಡಾ. ಅರ್ಚನಾ ಇದ್ದರು. ವಿಭಾಗದ ವಿದ್ಯಾರ್ಥಿಗಳು ನೆರೆಹೊರೆಯ ಶಾಲಾ-ಕಾಲೇಜುಗಳಲ್ಲಿ ಕಳೆದ 10 ದಿನಗಳು ಯೋಗ ತರಬೇತಿಯನ್ನು ಉಚಿತವಾಗಿ ನಡೆಸಿಕೊಟ್ಟರು. ಪುರಭವನ: ಆಳ್ವಾಸ್ ಶಿಕ್ಷಣ ಸಂಸ್ಥೆಯ 50 ವಿದ್ಯಾರ್ಥಿಗಳು ಜಿಲ್ಲಾ ಆಯುಷ್ ವಿಭಾಗವು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾದರು.

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ

Article Image

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ

ಪ್ರತಿಯೊಬ್ಬರಲ್ಲಿಯೂ ತಮ್ಮದೇ ಪ್ರತಿಭೆಗಳಿರುತ್ತದೆ. ನಿಮಗೆ ಸಿಗುವ ಅವಕಾಶಗಳನ್ನು ಎಂದಿಗೂ ಕಳೆದುಕೊಳ್ಳಬೇಡಿ. ಕೌಶಲ್ಯಕ್ಕೆ ಪ್ರತಿಭೆಗೆ ಯಾವುದೇ ಮಿತಿಯಿಲ್ಲ. ಕಳೆದುಕೊಂಡ ಅವಕಾಶಗಳು ಮತ್ತೊಮ್ಮೆ ಸಿಗುವುದಿಲ್ಲ. ನಿಮ್ಮೊಳಗಿರುವ ಕೌಶಲ್ಯವನ್ನು ಗುರುತಿಸಿಕೊಳ್ಳಿ. ಸಮಾಜವನ್ನು ಬದಲಾಯಿಸುವ ಶಕ್ತಿ ವಿದ್ಯೆಗಿದೆ. ಯುಪಿಎಸ್‌ಸಿ, ಐಎಎಸ್, ಐಪಿಎಸ್ ನಂತಹ ಕನಸುಗಳನ್ನು ನೀವು ಕಾಣಬೇಕು. ನಿಮಗೆ ಕಲಿಸಿದ ಗುರುಗಳು ಎದ್ದು ನಿಂತು ನಿಮಗೆ ಗೌರವ ಕೊಡುವಂತಹ ರೀತಿಯಲ್ಲಿ ಸಾಧನೆಯನ್ನು ಮಾಡಬೇಕು. ಜೀವನದಲ್ಲಿ ಯಾವತ್ತಿಗೂ ನಿರಾಶರಾಗಬೇಡಿ ಬದುಕು ನಿರಂತರವಾಗಿ ಸಾಗುವ ನದಿ ಇದ್ದ ಹಾಗೆ. ಜೀವನದಲ್ಲಿ ಸತತ ಪ್ರಯತ್ನ, ಅಭ್ಯಾಸ, ಭರವಸೆಯೊಂದಿದ್ದರೆ ಒಂದಲ್ಲಾ ಒಂದು ದಿವಸ ನೀವು ಸಾಧಕರಾಗಿ ಗುರುತಿಸಿಕೊಳ್ಳುತ್ತೀರಿ ಆದ್ದರಿಂದ ನಿಮ್ಮ ಮೇಲೆ ನಿಮಗೆ ಸಂಪೂರ್ಣ ಭರವಸೆ ಇರಲಿ ಎಂದು ಖ್ಯಾತ Daijiworld 24x7 Media Network ನ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ ಇವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು. ಪ್ರತಿಭೆ ದೇವರು ನೀಡಿರುವ ಕೊಡುಗೆ. ನಿಮ್ಮಲ್ಲಿ ನಿಮಗೆ ಭರವಸೆ ಇರುವವರೆಗೆ ನಿಮಗೆ ಯಾವತ್ತೂ ಸೋಲಾಗುವುದಿಲ್ಲ. ನಿಮ್ಮಲ್ಲಿರುವ ಪ್ರತಿಭೆಯನ್ನು ಯಾವುದೇ ಹಿಂಜರಿಕೆಯಿಲ್ಲದೆ ಅನಾವರಣಗೊಳಿಸಿ ಎಂದು ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ಹೇಳಿದರು. ಶಿಕ್ಷಣವೆಂದರೆ ಕೇವಲ ಪುಸ್ತಕ ಓದಿ ರ‍್ಯಾಂಕ್ ಪಡೆಯುವುದಲ್ಲ ಅದು ವಿಶಾಲ ವ್ಯಾಪ್ತಿಯನ್ನು ಒಳಗೊಂಡಿದೆ. ಮಗುವನ್ನು ಅತ್ಯುತ್ತಮ ಮಾನವನನ್ನಾಗಿಸುವ ಶಕ್ತಿ ಶಾಲೆಗಿದೆ. ರ‍್ಯಾಂಕ್ ಪಡೆಯುವ ಜೊತೆಗೆ ಒಳ್ಳೆಯ ಮೌಲ್ಯಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ಸಾಧಕರೆನಿಸಿಕೊಂಡಿರುವವರೆಲ್ಲ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರು ನಿಮಗೆ ಮಾದರಿಯಾಗಲಿ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿ ಮೂಡುಬಿದಿರೆಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರುಪಾಕ್ಷಪ್ಪ ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಜೀವನವನ್ನು ಬದಲಾಯಿಸುವ ಶಕ್ತಿ ಕಲೆಗಿದೆ. ಕಲೆ ಮನುಷ್ಯನ್ನು ಯಾವತ್ತೂ ಕೈ ಬಿಡುವುದಿಲ್ಲ ಜೀವನದಲ್ಲಿ ಪ್ರಶಸ್ತಿಯನ್ನು ಪಡೆದುಕೊಳ್ಳುವುದು ಮುಖ್ಯವಲ್ಲ ಅವಕಾಶಗಳನ್ನು ಬಳಸಿಕೊಳ್ಳುವುದು ಮುಖ್ಯ. ಓದಿನ ಜೊತೆಗೆ ಇನ್ನಿತರ ಕಲಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಎಷ್ಟು ಕಲಿಯಲು ಸಾಧ್ಯವೋ ಅಷ್ಟನ್ನು ಕಲಿತುಕೊಳ್ಳಿ ನಮ್ಮಲ್ಲಿ ಏನು ಇಲ್ಲ ಎಂದು ಬೇಸರದ ಬದುಕನ್ನು ಬದುಕಬೇಡಿ. ನಿಮ್ಮಲ್ಲಿರುವ ಆಸಕ್ತಿ ಕ್ಷೇತ್ರದಲ್ಲಿ ಅಭ್ಯಾಸ ಮುಂದುವರೆಸಿ ನಿಮ್ಮಿಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಿ. ಸಮಾಜದಲ್ಲಿ ನಿಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಅವಕಾಶಗಳು ಸಿಗುತ್ತಲೇ ಇರುತ್ತವೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಚಟುವಟಿಕೆಗಳ ತರಬೇತುದಾರರಾದ ರಶ್ಮಿತಾ-ಭರತನಾಟ್ಯ, ಸರ್ಪಾಜ್-ಕರಾಟೆ, ಸೌಂದರ್ಯ-ಚೆಸ್, ರೂಪೇಶ್ ಕುಮಾರ್-ನೃತ್ಯ, ಪೂರ್ಣಿಮಾ ಗೋರೆ-ಸಂಗೀತ, ಮಹವೀರ ಪಾಂಡಿ-ಯಕ್ಷಗಾನ, ಚಂದ್ರಶೇಖರ ಆಚಾರ್ಯ-ಚೆಂಡೆ, ಗೌರಿಪ್ರಸಾದ್-ತಬಲ, ಬಾಸ್ಕರ್ ನೆಲ್ಯಾಡಿ-ಚಿತ್ರಕಲೆ, ಚೇತನ ಶೆಟ್ಟಿ- ಕ್ರಾಪ್ಟ್ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ| ಸಂಪತ್ ಕುಮಾರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಿರು ವಯಸ್ಸಿನಲ್ಲಿಯೇ ಸರ್ವಕಲಾ ಪ್ರಕಾರಗಳಲ್ಲಿ ಸಾಧನೆಗೈದ ಬೆಳುವಾಯಿಯ ಶುಭಾಂಜನ ಭಟ್ ಇವರನ್ನು ಗೌರವಿಸಿ ಸಂಮಾನಿಸಲಾಯಿತು. ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಸಂಸ್ಥೆಯ ವಿದ್ಯಾರ್ಥಿ ಸುಮಿತ್ ಹಾಗೂ ಕರಾಟೆ ತರಬೇತುದಾರರಾದ ಸರ್ಫಾಜ್ ಇವರನ್ನು ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು. ಉಪಮುಖ್ಯೋಪಾಧ್ಯಾಯರಾದ ಜಯಶೀಲ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸಾನಿಧ್ಯಾ ರಾವ್ ಸನ್ಮಾನಿತರನ್ನು ಪರಿಚಯಿಸಿದರು, ಸಂಜಲ ನಿರೂಪಿಸಿದರು, ರಶ್ಮಿತಾ ಸ್ವಾಗತಿಸಿದರು, ಭುವನ ವಂದಿಸಿದರು.

ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಉಪನ್ಯಾಸ

Article Image

ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಉಪನ್ಯಾಸ

ಭಾಷಾ ಶಾಸ್ತ್ರದಲ್ಲಿ ಪರಿಣಿತಿ ಹೊಂದಿದಾಗ ಇಂಗ್ಲಿಷ್ ಅಧ್ಯಯನ ಸುಲಲಿತವಾಗುತ್ತದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ವತಿಯಿಂದ ಕಾಲೇಜಿನ ಎ.ವಿ ಹಾಲ್‌ನಲ್ಲಿ ಇತೀಚೆಗೆ ನಡೆದ ಭಾಷಾಶಾಸ್ತ್ರ ವಿಷಯದ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳ ಶಿಕ್ಷಣ ವ್ಯವಸ್ಥೆಯಲ್ಲಿ ತಜ್ಞ ಅಧ್ಯಾಪಕರ ಕೊರತೆ ಇದೆ ಎಂದು ಸಾಮಾನ್ಯವಾಗಿ ಹೇಳುತ್ತಾರೆ, ಆದರೆ ಇದು ಸತ್ಯಕ್ಕೆ ದೂರವಾದ ಮಾತು. ವಿದ್ಯಾರ್ಥಿಗಳು ಜ್ಞಾನದ ಅನ್ವೇಷಣೆಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡರೆ, ಅಧ್ಯಾಪಕರೊಂದಿಗೆ ಚರ್ಚಿಸಿದರೆ, ಅಧ್ಯಾಪಕರು ಜ್ಞಾನವನ್ನು ವೃದ್ಧಿಸಿಕೊಳ್ಳಲು ಹೆಚ್ಚು ಶ್ರಮವನ್ನು ವಹಿಸುತ್ತಾರೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ. ಟಿ. ಕೆ. ರವಿಚಂದ್ರನ್ ಸ್ವಾಗತಿಸಿ, ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪವಿತ್ರ ತೇಜ್ ನಿರೂಪಿಸಿ, ವಂದಿಸಿದರು.

ಸತ್ತೂರು, ಧಾರವಾಡ: ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ದಿನಾಚರಣೆ

Article Image

ಸತ್ತೂರು, ಧಾರವಾಡ: ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ದಿನಾಚರಣೆ

ಎಸ್.ಡಿಎಂ. ದಂತ ಮಹಾವಿದ್ಯಾಲಯದ, ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ಜೂನ್ 19ರಂದು ರಾಷ್ಟ್ರೀಯ ಸಾಮೂಹಿಕ ಆರೋಗ್ಯ ದಂತ ಚಿಕಿತ್ಸಾ ದಿನವನ್ನು ಆಚರಿಸಲಾಯಿತು. ಈ ವಿಭಾಗವು ಧಾರವಾಡದ ಸುತ್ತಮುತ್ತಲಿನ 17 ತಾಲೂಕುಗಳಲ್ಲಿ ಸಂಚಾರಿ ಚಿಕಿತ್ಸಾಲಯದ ಮೂಲಕ ಬಾಯಿಯ ಆರೋಗ್ಯದ ಕುರಿತು ದೂರದ ಹಳ್ಳಿಗಳಿಗೆ ಭೇಟಿ ನೀಡುತ್ತಾ ಬಂದಿದ್ದಾರೆ. ಇತ್ತೀಚಿಗೆ 75 ಶಿಬಿರಗಳಲ್ಲಿ, 12,000ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಶಶಿ ಪಾಟೀಲ್ ಮುಖ್ಯ ಅತಿಥಿಗಳಾಗಿದ್ದರು. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಮತ್ತಿತರ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಜಿಲ್ಲೆಯಾದ್ಯಂತ 150ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಮುಖ್ಯ ಅತಿಥಿಯವರಾದ ಡಾ. ಶಶಿ ಪಾಟೀಲ್ ಮಾತನಾಡುತ್ತಾ: ಎಸ್.ಡಿ.ಎಂ. ವೈದ್ಯಕೀಯ ಮತ್ತು ದಂತ ಮಹಾವಿದ್ಯಾಲಯವು ಯಾವಾಗಲೂ ಸಮುದಾಯದ ಆರೋಗ್ಯ ಸುಧಾರಣೆಗೆ ಅಪಾರ ಕೊಡುಗೆ ನೀಡುತ್ತಾ ಬಂದಿದೆ. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಬಾಯಿಯ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚುವಲ್ಲಿ ಎಸ್.ಡಿ.ಎಂ. ನ ಶಿಬಿರಗಳು ಮತ್ತು ಸಂಚಾರಿ ಆಸ್ಪತ್ರೆಯು ಸಹಕಾರಿಯಾಗಿದೆ. ಆರೋಗ್ಯದ ಮಹತ್ವದ ಬಗ್ಗೆ ಸಮುದಾಯಕ್ಕೆ ತಿಳಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದರು. ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಕಾರ್ಯಗಾರವನ್ನು ನಡೆಸುತ್ತಿರುವ ಸಾಮೂಹಿಕ ದಂತ ಚಿಕಿತ್ಸಾ ವಿಭಾಗಕ್ಕೆ ಉಪಕುಲಪತಿಗಳಾದ ಡಾ. ನಿರಂಜನ ಕುಮಾರ್ ಅಭಿನಂದಿಸುತ್ತಾ, ಸಮತೋಲನ ಆಹಾರದ ಮೇಲೆ ಅದರಲ್ಲೂ ಗರ್ಭಿಣಿ ಮಹಿಳೆಯರಿಗೆ ಆಶಾ ಕಾರ್ಯಕರ್ತೆಯರು ವಿಶೇಷವಾಗಿ ಅವರ ಆರೋಗ್ಯದ ಉನ್ನತಿಗಾಗಿ ಗಮನಹರಿಸುತ್ತಾರೆ. ಆಶಾ ಕಾರ್ಯಕರ್ತೆಯರು ಸಮುದಾಯದಲ್ಲಿ ತಂಬಾಕು ಸೇವನೆಯಿಂದ ಆಗುವ ಸಮಸ್ಯೆಗಳನ್ನು ಪತ್ತೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬಹುದು ಎಂದರು. ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ನಡೆಸಿದ ವಿವಿಧ ಆರೋಗ್ಯ ಶಿಬಿರಗಳ ವರದಿಯನ್ನು ಡಾ. ಶೋದನ್ ಮಂಡಿಸಿದರು. ಡಾ. ಹೇಮಾ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ಸಾಮೂಹಿಕ ದಂತ ಚಿಕಿತ್ಸಾ ವಿಭಾಗವು ಜಿಲ್ಲಾ ಆರೋಗ್ಯ ಕಛೇರಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ರೋಟರಿ ಕ್ಲಬ್ ಮತ್ತು SKDRDP ಸಹಯೋಗದಲ್ಲಿ ಶಿಬಿರಗಳನ್ನು ನಡೆಸಲಾಗುತ್ತಿದೆ. ಈ ದಿನದ ಅಂಗವಾಗಿ ಎಸ್.ಡಿ.ಎಂ. ದಂತ ಮಹಾವಿದ್ಯಾಲಯವು ಪ್ರತಿ ವರ್ಷ ವಿಶ್ವ ತಂಬಾಕು ರಹಿತ ದಿನದ ಹಲವಾರು ಶಾಲಾ ಆರೋಗ್ಯ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ವಿಭಾಗದ ಮುಖ್ಯಸ್ಥರಾದ ಡಾ. ರವಿ ಶಿರಹಟ್ಟಿ ಅತಿಥಿಯವರನ್ನು ಸ್ವಾಗತಿಸಿದರು. ಡಾ. ಅಕ್ಷತಾ ಅಗ್ನಿಹೋತ್ರಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಡಾ. ಪ್ರೀತಾ ಶೆಟ್ಟಿ ವಂದಿಸಿದರು. ಡಾ. ಜೆಬಾ ಶೇಖ್ ಕಾರ್ಯಕ್ರಮವನ್ನು ನಿರೂಪಿಸಿದರು.

ಬೃಹತ್ ರಕ್ತದಾನ ಶಿಬಿರ

Article Image

ಬೃಹತ್ ರಕ್ತದಾನ ಶಿಬಿರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಹಳೆ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ. ಐ.ಟಿ.ಐ. ವೇಣೂರು, ಗ್ರಾಮ ಪಂಚಾಯತ್ ಕುಕ್ಕೇಡಿ, ಪದ್ಮಾಂಬ ಸಮೂಹ ಸಂಸ್ಥೆಗಳು ವೇಣೂರು, ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಕುಕ್ಕೇಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) ವೇಣೂರು, ಲಯನ್ಸ್ ಕ್ಲಬ್ ವೇಣೂರು, ಲಯನ್ಸ್ ಕ್ಲಬ್ ಮಂಗಳೂರು, ಫಲ್ಗುಣಿ ಸೇವಾ ಸಂಘ (ರಿ.) ವೇಣೂರು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯ, ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು, ಜನಸೇವಾ ಟ್ರಸ್ಟ್ (ರಿ.) ಪಡ್ಡಂದಡ್ಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕುಕ್ಕೇಡಿ-ನಿಟ್ಟಡೆ ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ರಕ್ತದಾನದ ಬೃಹತ್ ಶಿಬಿರವು ವೇಣೂರಿನ ಎಸ್.ಡಿ.ಎಂ ಐಟಿಐ ನಲ್ಲಿ ನಾಳೆ(ಜೂ. 21) ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಪದಕ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ‍್ಯಕ್ರಮ

Article Image

ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಪದಕ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ‍್ಯಕ್ರಮ

ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತ, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ ಸತತ ಪರಿಶ್ರಮದಿಂದಾಗಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಜೋಡಿಸಿಕೊಳ್ಳಬೇಕು. ಇವುಗಳ ನಡವಿನ ಸಮತೋಲಿತ ನಡಿಗೆ ಎರಡು ಕ್ಷೇತ್ರದಲ್ಲಿ ಉನ್ನತಿ ಹೊಂದಲು ಸಹಕಾರಿ. ಆದರೆ ಕ್ರೀಡೆಯ ಹೆಸರಿನಲ್ಲಿ ಶಿಕ್ಷಣವನ್ನು ಕುಂಠಿತಗೊಳಿಸುವುದು ಸಾಧುವಲ್ಲ ಎಂದರು. ಆರೋಗ್ಯ, ಮನೋನಿಶ್ಚಯ, ಕ್ರೀಡಾ ಮನೋಭಾವ ಹಾಗೂ ಸೌಹಾರ್ದತೆಯಂತಹ ಗುಣಗಳು ನಾವು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ನಮ್ಮಲ್ಲಿ ಕರಗತವಾಗುತ್ತದೆ ಎಂದರು. ಆಳ್ವಾಸ್ ಸಂಸ್ಥೆ, ಈ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸದಾ ಬೆಂಬಲ ನೀಡುತ್ತದೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ನಮ್ಮ ಸಂಘದ ಪರಿಶ್ರಮದಿಂದಾಗಿ ಇಂದು ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯವಾಗಿದೆ. ಪ್ರತಿ ಹಂತದಲ್ಲೂ ಕಠಿಣ ಸವಾಲನ್ನು ಮೀರಿ ವಿದ್ಯಾರ್ಥಿಗಳು ಜಯಶಾಲಿಗಳಾಗಿದ್ದಾರೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಸಿಲಾಗುರಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ಏಕೈಕ ತಂಡ ನಮ್ಮದು. ಮುಂದಿನ ಆಗಸ್ಟ್ ನಲ್ಲಿ ಹಂಗೇರಿಯ ಬುಡಾಪೇಸ್ಟಾದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಿಕ್ ಚಾಂಪಿಯನ್‌ಶಿಫ್‌ನಲ್ಲಿ ಭಾಗವಹಿಸಲು ನಮ್ಮ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪದಕ ವಿಜೇತರ ವಿವರ: ಮೇ 21ರಿಂದ 27ರವರೆಗೆ ಪುಣೆಯಲ್ಲಿ ನಡೆದ ಚಿಲ್ಡನ್ಸ್ ಮತ್ತು ಕೆಡೆಟ್ ಹಾಗೂ ಜೂನ್ 10 ರಿಂದ 14ರ ವರೆಗೆ ಪಶ್ಚಿಮ ಬಂಗಾಳದ ಸಿಲಾಗುರಿಯಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಜಿಲ್ಲೆಯ ಕ್ರೀಡಾಪಟುಗಳು 8 ಚಿನ್ನದ ಪದಕ, 7 ಬೆಳ್ಳಿಯ ಪದಕ ಮತ್ತು 13 ಕಂಚಿನ ಪದಕಗಳನ್ನು ಪಡೆದಿದ್ದಾರೆ. ಅನ್ಶಿ ಎನ್. ಎಮ್. ವೈಯಕ್ತಿಕ ವಿಭಾಗದಲ್ಲಿ 3 ಚಿನ್ನದ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟದಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಜೂನ್ 10 ರಿಂದ 13ರವರೆಗೆ ಬಾಗಲಕೋಟೆಯಲ್ಲಿ ನಡೆದ ಸೌತ್ ಝೋನ್ ಖೇಲೋ ಇಂಡಿಯಾ ವುಶು ವುಮೆನ್ಸನ ಲೀಗ್ ನಲ್ಲಿ ದಕ್ಷಿಣ ಕನ್ನಡ ವುಶು ಅಸೋಸಿಯೇಷನ್‌ನ ವಿದ್ಯಾರ್ಥಿಗಳು 1 ಚಿನ್ನದ ಪದಕ ಮತ್ತು 6 ಕಂಚಿನ ಪದಕಗಳನ್ನು ಪಡೆದು ಮುಂಬರುವ ರಾಷ್ಟ್ರೀಯ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾರ‍್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದ ನಿತಿನ್ ಸುವರ್ಣ ಮತ್ತು ಶಿಕ್ಷಕ ಸಂಪತ್ ಕುಮಾರ್ ಇದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಇ.ಎನ್.ಟಿ ಶಿಬಿರದಲ್ಲಿ 143 ಮಂದಿ ಭಾಗಿ

Article Image

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಇ.ಎನ್.ಟಿ ಶಿಬಿರದಲ್ಲಿ 143 ಮಂದಿ ಭಾಗಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರ ನಡೆಯುತ್ತಿದ್ದು, ದಿನಾಂಕ ಜೂ. 16 ರಂದು ‘ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ’ ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಇವರು ಶಿಬಿರ ಉದ್ಘಾಟಿಸಿ ಮಾತನಾಡಿ, ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ತಿಂಗಳಿಗೆ ಮೂರು ಅಥವಾ ನಾಲ್ಕು ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತದೆ. ಪೂಜ್ಯ ಹೆಗ್ಗಡೆಯವರ ನಿರ್ದೇಶನದಂತೆ ತಿಂಗಳಿಗೆ 2 ಶಿಬಿರಗಳನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗುತ್ತದೆ. ಕನಿಷ್ಟ ಒಬ್ಬ ಎಂ.ಬಿ.ಬಿ.ಎಸ್ ವೈದ್ಯರು ಕೂಡ ಇಲ್ಲದ ಹಳ್ಳಿಯಲ್ಲಿ ವೈದ್ಯಕೀಯ ಸೌಲಭ್ಯಗಳಿಂದ ವಂಚಿತರಾದ ಜನತೆಗೆ ಅವರು ಇರುವ ಜಾಗದಲ್ಲಿಯೇ ಸೂಪರ್ ಸ್ಪೆಷಾಲಿಟಿ ವೈದ್ಯರ ಸೇವೆ ದೊರಕಿಸಿ ಕೊಡುವುದು ನಮ್ಮ ಗುರಿಯಾಗಿದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ ಮಾತನಾಡುತ್ತಾ, ಈ ಆಸ್ಪತ್ರೆಯಲ್ಲಿ ಸೋಮವಾರದಿಂದ ಶನಿವಾರದವರೆಗೆ ಇ.ಎನ್.ಟಿ ಸಂಬಂಧಿಸಿದ ಎಲ್ಲಾ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಈಗಾಗಲೇ ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಕೂಡ ಇಲ್ಲಿ ನಡೆಸಲಾಗಿದೆ ಎಂದರು. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 143 ಮಂದಿ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡು ಸಂತೋಷ ವ್ಯಕ್ತಪಡಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ ಗಳ ಅಭಿನಂದನಾ ಕಾರ್ಯಕ್ರಮ

Article Image

ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ ಗಳ ಅಭಿನಂದನಾ ಕಾರ್ಯಕ್ರಮ

ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ - ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಸಹಯೋಗದಲ್ಲಿ ನಡೆದ 2023-24 ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ ಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರಾದ, ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ, ಒಂದು ವಿಶ್ವವಿದ್ಯಾಲಯ ಮಾಡಲಾಗದ ಶೈಕ್ಷಣಿಕ ಕಾರ್ಯವನ್ನು ಮೋಹನ ಆಳ್ವರು ಮಾಡುತ್ತಿದ್ದಾರೆ ಎಂದರು. ಶೈಕ್ಷಣಿಕ ಕಾರ್ಯದ ಜೊತೆಯಲ್ಲಿ ಅಂತರಾಷ್ಟ್ರೀಯ ಜಾಂಬೂರಿ ಆಯೋಜಿಸಿದ್ದ ಕುರಿತು ನೆನೆದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳು ಬಹಳಷ್ಟಿದ್ದಾರೆ ಆದರೆ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ರ‍್ಯಾಂಕ್ ಗಳಿಸಿರುವುದು ಅಭಿನಂದನೀಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎಸ್. ವಿರೂಪಾಕ್ಷ ಮಾತನಾಡಿ ಶಿಕ್ಷಣದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ತೊಡಿಸಿಕೊಂಡಾಗ ಸರ್ವತೋಮುಖ ಕಲಿಕೆ ಸಾಧ್ಯ ಎಂದರು. ಉತ್ತಮ ಶಿಸ್ತುಬದ್ಧ ಜೀವನ ರೂಪಿಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕರಿಸುತ್ತಿದೆ ಎಂದರು. ಆತ್ಮ ವಿಶ್ವಾಸದ ಜೊತೆಗೆ ಮಾನವೀಯ ಗುಣಗಳನ್ನು ಬೆಳೆಸುವಲ್ಲಿ ಈ ಶಿಕ್ಷಣ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ದಕ್ಷಿಣ ಕನ್ನಡ, ಕಾರವಾರ, ಉಡುಪಿ, ಶಿರಸಿ, ಕೊಡಗು ಜಿಲ್ಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್ ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷ ಶ್ರೀಪತಿ ಭಟ್, ಜಿಲ್ಲಾ ಗೈಡ್ಸ್ ಆಯುಕ್ತೆ ವಿಮಲಾ ರಂಗಯ್ಯ, ಜ್ಯೋತಿ ಜೆ. ಪೈ. ಜಿಲ್ಲಾ ಗೈಡ್ ಆಯುಕ್ತೆ ಉಡುಪಿ ಜಿಲ್ಲೆ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಚಂದ್ರಶೇಖರ್ ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತರು, ಶಿರಸಿ ಜಿಲ್ಲೆ, ಸಾವಿತ್ರಿ ಮನೋಹರ್, ALT, ಉಡುಪಿ ಜಿಲ್ಲೆ, ಮೂಡಬಿದಿರೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಭಾರತಿ ನಾಯಕ್ ಉಪಸ್ಥಿತರಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ. ವಿದ್ಯಾರ್ಥಿಗಳ ಅಭಿನಂದನಾ ಪತ್ರಗಳನ್ನು ಘೋಷಿಸಿದರು, ಕಾರ್ಯಕ್ರಮವನ್ನು ನವೀನ್ ಚಂದ್ರ ಅಂಬೂರಿ ನಿರೂಪಿಸಿ, ವಸಂತ್ ದೇವಾಡಿಗ ಸ್ವಾಗತಿಸಿದರು.

First Previous

Showing 11 of 15 pages

Next Last