ಜೂನ್ 21: ಮೈಸೂರಿನಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
Published Date: 20-Jun-2025 Link-Copied
ಉಜಿರೆ: ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ” ವಿಂಟೇಜ್ ಕಾರುಗಳ ಸಂಗ್ರಹಾಲಯ, ಮೈಸೂರು-ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ಶನಿವಾರ ಬೆಳಿಗ್ಗೆ ಏಳು ಗಂಟೆಯಿಂದ ಮೈಸೂರಿನಲ್ಲಿ “ಪಯಣ” ಆವರಣದಲ್ಲಿರುವ ಸಭಾಭವನದಲ್ಲಿ ಹನ್ನೊಂದನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ ಎಂದು ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮತ್ತು ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ತಿಳಿಸಿದ್ದಾರೆ. ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಸಮಾರಂಭವನ್ನು ಉದ್ಘಾಟಿಸುವರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಬಂಡಿಸಿದ್ದೇಗೌಡ ಮತ್ತು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು. ಮೈಸೂರಿನಲ್ಲಿ ವಿವಿಧ ಕೇಂದ್ರಗಳಲ್ಲಿ ಈಗಾಗಲೆ ಸಾರ್ವಜನಿಕರಿಗೆ ಯೋಗ ತರಬೇತಿ ಶಿಬಿರ ನಡೆಸಿದ್ದು, ಇಲ್ಲಿ ತರಬೇತಿ ಪಡೆದ 3,500 ಮಂದಿ “ಪಯಣ”ದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸುವರು. ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ನಡೆಸಲ್ಪಡುವ ಎಲ್ಲಾ 54 ಶಿಕ್ಷಣ ಸಂಸ್ಥೆಗಳಲ್ಲಿ ಕೂಡಾ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.