ಹೇಮಾವತಿ ವೀ. ಹೆಗ್ಗಡೆಯವರಿಗೆÀ ಗೌರವ ಡಾಕ್ಟರೇಟ್ ಪ್ರದಾನ


Logo

Published Date: 20-Jul-2026 Link-Copied

ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನವಿಕಾಸ’ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಸೇವಾ ಚಟುವಟಿಕೆಗಳಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಜಾಗತಿಕ ಮನ್ನಣೆ ಪಡೆದ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಯಾದ ‘ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬ್ಯುಸಿನೆಸ್ ಸ್ಕೂಲ್’ ಇವರು ‘ಗೌರವ ಡಾಕ್ಟರೇಟ್’ ಪದವಿಯನ್ನು ನೀಡಿ ಗೌರವಿಸಿದರು. ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಇದೊಂದು ಅಂತಾರಾಷ್ಟ್ರೀಯ ಮಟ್ಟದ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ರಾಜ್ಯಮಟ್ಟದ ಪುನಶ್ಚೇತನಾ ಕಾರ್ಯಾಗಾರದಲ್ಲಿ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನ ಅಧ್ಯಕ್ಷರಾದ ಫಿಲಿಪ್ ಥೆವೆನೋಟ್‌ರವರು ಆನ್‌ಲೈನ್ ಮೂಲಕ ಪದವಿಯನ್ನು ಪ್ರಕಟಿಸಿದರು. ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನ ಪರವಾಗಿ ಅವಿನಾಶ್ ಗುಪ್ತಾರವರು ಗೌರವ ಡಾಕ್ಟರೇಟ್ ಪದವಿಯನ್ನು ಧರ್ಮಸ್ಥಳದಲ್ಲಿ ಪ್ರದಾನಿಸಿದರು. ಈ ಸಂದರ್ಭದಲ್ಲಿ ಅವಿನಾಶ್ ಗುಪ್ತಾರವರು ಮಾತಾನಾಡುತ್ತಾ ‘ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಗೌರವಿಸುವ ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳುವುದು ನಮ್ಮ ಸಂಸ್ಥೆಗೆ ಹೆಮ್ಮೆ ಹಾಗೂ ಧನ್ಯತೆಯ ಕ್ಷಣವಾಗಿದೆ. ನಾವಿಲ್ಲಿ ಕೇವಲ ಒಬ್ಬ ವ್ಯಕ್ತಿಯನ್ನು ಗೌರವಿಸುತ್ತಿಲ್ಲ. ಬದಲಾಗಿ ಅಸಂಖ್ಯಾತ ಜನರ ಬದುಕಿನಲ್ಲಿ ಬೆಳಕಾಗಿ, ಅವರ ಜೀವನವನ್ನೇ ಧನ್ಯಗೊಳಿಸಿದ ಮಹೋನ್ನತ ಚೇತನವೊಂದರ ಸಾಧನೆಯನ್ನು ಸಂಭ್ರಮಿಸುತ್ತಿದ್ದೇವೆ. ಅಪರೂಪಕ್ಕೊಮ್ಮೆ ನಮಗೆ ಇಂತಹ ಅಸಾಧಾರಣ ವ್ಯಕ್ತಿಗಳು ಸಿಗುತ್ತಾರೆ. ಇವರು ನಮಗೆ ಅತ್ಯುನ್ನತವಾದ ಜ್ಞಾನ ಅಂದರೆ ಕೇವಲ ಅಕ್ಷರ ಜ್ಞಾನ ಮಾತ್ರವಲ್ಲ, ಬದಲಾಗಿ ಮಾನವನ ಬದುಕನ್ನು ಸುಧಾರಿಸುವ ಶಕ್ತಿ ಇದೆ ಎಂಬುದನ್ನು ನೆನಪಿಸುತ್ತಾರೆ. ಅಂತಹ ಅಸಾಧಾರಣ ವ್ಯಕ್ತಿತ್ವವೇ ಹೇಮಾವತಿ ವೀ. ಹೆಗ್ಗಡೆಯವರು. ಕಳೆದ ನಾಲ್ಕು ದಶಕಗಳಿಂದ ಗ್ರಾಮೀಣ ಮಟ್ಟದಲ್ಲಿ ಸುಸ್ಥಿರವಾದ ಸಾಮಾಜಿಕ ಪರಿವರ್ತನೆಯನ್ನು ನಿರಂತರವಾಗಿ ಹೇಗೆ ತರಬಹುದು ಎಂಬುವುದನ್ನು ಮಾತೃಶ್ರೀಯವರು ಅತ್ಯಂತ ಯಶಸ್ವಿಯಾಗಿ ತೋರಿಸಿಕೊಟ್ಟಿದ್ದಾರೆ. ಜಗತ್ತು ಮಹಿಳಾ ಸಬಲೀಕರಣ, ಆರ್ಥಿಕತೆ, ಸಾಮಾಜಿಕ ಉದ್ಯಮಶೀಲತೆ ಮತ್ತು ಸಮಗ್ರ ಅಭಿವೃದ್ಧಿಯಂತಹ ಪರಿಕಲ್ಪನೆಗಳನ್ನು ಒಪ್ಪಿಕೊಳ್ಳುವುದಕ್ಕಿಂತ ದಶಕಗಳ ಹಿಂದೆಯೆ ರಾಜ್ಯದಾದ್ಯಂತ ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಇವರು ಕೆಲಸವನ್ನು ಮಾಡಿದ್ದಾರೆ. ಇವರ ಉದಾತ್ತ ಆದರ್ಶಗಳಿಗೆ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಸಾಕ್ಷಿಯಾಗಿದೆ. ಗ್ರಾಮೀಣ ಮಹಿಳೆಯರು ಎದುರಿಸುತ್ತಿದ್ದ ವಾಸ್ತವಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಾಲ್ಕು ದಶಕಗಳ ಹಿಂದೆ ‘ಜ್ಞಾನವಿಕಾಸ’ ಎಂಬ ಕಾರ್ಯಕ್ರಮವನ್ನು ಆರಂಭಿಸಿದರು. ಅದು ಇಂದು ಹೆಮ್ಮರವಾಗಿ ಬೆಳೆದು ವಾತ್ಸಲ್ಯ, ಮಾಸಾಶನ ಮುಂತಾದ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದೆ. ಜ್ಞಾನವಿಕಾಸದಿಂದಾಗಿ ಹಳ್ಳಿಯ ಮಹಿಳೆಯರಲ್ಲಿ ಮಹತ್ತರ ಬದಲಾವಣೆಯಾಗಿದೆ. ಆತ್ಮವಿಶ್ವಾಸ, ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದೆ. ಸಿರಿ ಗ್ರಾಮೋದ್ಯೋಗ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿದೆ. ಪರಿಸರ, ಜಲ ಸಂರಕ್ಷಣೆಯ ನಿಟ್ಟಿನಲ್ಲೂ ಕೆಲಸ ಮಾಡಿದ್ದಾರೆ. ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಇವರ ಕೊಡುಗೆ ಅಪೂರ್ವವಾದುದು. ಮಾತೃಶ್ರೀಯವರು ಸರ್ವ ಆದರ್ಶಗಳಿಗೆ ಮಾದರಿಯಾಗಿದ್ದಾರೆ. ಮಹಿಳಾ ಸಬಲೀಕರಣ, ಗ್ರಾಮಾಭಿವೃದ್ಧಿ ಸಮುದಾಯದ ನಾಯಕತ್ವ ಮತ್ತು ಮಾನವೀಯ ಸೇವೆಗೆ ಇವರು ನೀಡಿರುವ ಅಸಾಧಾರಣ ಕೊಡುಗೆಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಲಾಗಿದೆ’ ಎಂದರು. ಹೆಗ್ಗಡೆಯವರು, ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ, ಉದಯಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದÀ ಅನಿಲ್ ಕುಮಾರ್ ಎಸ್.ಎಸ್., ಯೋಜನೆಯ ಹಣಕಾಸು ಅಧಿಕಾರಿಗಳಾದ ಶಾಂತಾರಾಮ್ ಆರ್. ಪೈ., ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರುಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. 1972 ಡಿಸೆಂಬರ್ 27ರಂದು ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿಯಾದ ಹೇಮಾವತಿ ವೀ. ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕಾಗಿ, ಸಮಾಜದ ಅಸಹಾಯಕರಿಗೆ ನೆರವು ನೀಡುವ ನಿಟ್ಟಿನಲ್ಲಿ ಕೈಗೊಂಡ ಕೆಲಸಗಳ ಪಟ್ಟಿ ಬಹುದೊಡ್ಡದು. ಧರ್ಮಸ್ಥಳದ ಯುವತಿಯರನ್ನೇ ಸೇರಿಸಿಕೊಂಡು ಆರಂಭಿಸಿದ ‘ಕನ್ಯಾಕುಮಾರಿ ಯುವತಿ ಮಂಡಲ ಮುಂದೆ ಅವರ ಸಮಾಜಸೇವೆಗೆ ಮುನ್ನುಡಿ ಬರೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರನ್ನು ಸ್ವಉದ್ಯೋಗಿಗಳನ್ನಾಗಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಆರಂಭ, ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಗೆಳತಿ ಕೌಟುಂಬಿಕ ಸಲಹಾ ಕೇಂದ್ರ’ ಗ್ರಾಮೀಣ ಮಹಿಳೆಯರಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ, ಬೆಳೆಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರಗಳಲ್ಲಿ ಗ್ರಂಥಾಲಯಗಳ ಸ್ಥಾಪನೆ, ಮಹಿಳೆಯರು ನೀರಿಗಾಗಿ ಪಡುತ್ತಿರುವ ಬವಣೆಯನ್ನು ನೀಗಿಸಲು ರಾಜ್ಯದ ಕೆರೆಗಳನ್ನು ಹೂಳೆತ್ತುವ ಕಾರ್ಯಕ್ರಮ, ರಾಜ್ಯದಲ್ಲಿರುವ ಅಸಹಾಯಕರಿಗೆ ನೆರವು ನೀಡುವ ನಿಟ್ಟಿನಲ್ಲಿ ‘ವಾತ್ಸಲ್ಯ’, ‘ಮಾಸಾಶನ’ ಕಾರ್ಯಕ್ರಮ ಹೀಗೆ ಅವರು ಕೈಗೊಂಡ ಕಾರ್ಯಕ್ರಮಗಳು ಒಂದೆರಡಲ್ಲ. ಇವರು ಕಲಾಪ್ರಿಯರೂ ಹೌದು. ಧರ್ಮಸ್ಥಳದ ಸಿಬ್ಬಂದಿಗಳನ್ನು ಸೇರಿಸಿ ಕಟ್ಟಿದ ‘ರಂಗಶಿವ ಕಲಾ ಬಳಗ’ ಈಗಾಗಲೇ ಹಲವಾರು ನಾಟಕಗಳನ್ನು ಪ್ರದರ್ಶಿಸಿ ಕಲಾಭಿಮಾನಿಗಳ ಮನೆಗೆದ್ದಿದೆ. ಹಾಗೆಯೇ ಉಜಿರೆಯಲ್ಲಿ ‘ಸಮೂಹ’ ಸಾಂಸ್ಕೃತಿಕ ಕೇಂದ್ರ ವನ್ನು ಸ್ಥಾಪಿಸುವ ಮೂಲಕ ಉಜಿರೆಯ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕಾರಣೀಕರ್ತರಾಗಿದ್ದಾರೆ. ಓದು ಇವರ ಹವ್ಯಾಸಗಳಲ್ಲೊಂದು. ನಿರಂತರದ ‘ಗೆಳತಿ’, ಮಂಜುವಾಣಿಯ ‘ಮಗಳಿಗೊಂದು ಪತ್ರ’ ಅಂಕಣದ ಮೂಲಕವೂ ಇವರು ಚಿರಪರಿಚಿತರು. ಇವರು ಕೈಗೊಂಡಿರುವ ಕೆಲಸ ಕಾರ್ಯಗಳು, ಸೇವೆಗಳು ನಾಡಿಗೆ ಮಾದರಿಯಾಗಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img